ಪರಪ್ಪನ ಅಗ್ರಹಾರ ಜೈಲಿಗೆ ನಟಿ ರಾಗಿಣಿ ದ್ವಿವೇದಿ
ಬೆಂಗಳೂರು, ಸೆಪ್ಟೆಂಬರ್ 14: ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಷ್ಟು ದಿನ ಸಿಸಿಬಿ ಪೊಲೀಸರ ವಶದಲ್ಲಿದ್ದ ನಟಿಯರು ಇಂದು ಸಂಜೆ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಸಿಸಿಬಿ ಪೊಲೀಸರ ಮನವಿ ಹಿನ್ನಲೆಯಲ್ಲಿ ಸಂಜನಾರನ್ನು ಕೋರ್ಟ್ ಮತ್ತೆ 3 ದಿನ ಪೊಲೀಸ್ ವಶಕ್ಕೆ ನೀಡಿದೆ.
ಬೆಂಗಳೂರಿನ ಮಾದಕ ದ್ರವ್ಯ ಪೂರೈಕೆ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ರಾಗಿಣಿ ದ್ವಿವೇದಿ ಮತ್ತು ಸಂಜನಾ ಬಂಧಿಸಿದ್ದರು. ಸಿಸಿಬಿ ವಶದಲ್ಲಿದ್ದ ಅವರ ಕಸ್ಟಡಿ ಅವಧಿ ಸೋಮವಾರ ಅಂತ್ಯಗೊಂಡಿತ್ತು.
ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು 1ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಕೋರ್ಟ್ ಸೆಪ್ಟೆಂಬರ್ 27ರ ತನಕ ನಟಿಯರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತು.
ನಟಿ ರಾಗಿಣಿ ದ್ವಿವೇದಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ಎನ್ಡಿಪಿಎಸ್ ನ್ಯಾಯಾಲಯ ಸೋಮವಾರ ನಡೆಸಿತ್ತು. ಸೆ. 16ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿತ್ತು. ಇದರಿಂದಾಗಿ ನಟಿಯರು ಜೈಲು ಪಾಲಾಗಲಿದ್ದಾರೆ.

ವಶಕ್ಕೆ ಕೇಳದ ಸಿಸಿಬಿ
ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ವಿಚಾರಣೆಯನ್ನು ಸಿಸಿಬಿ ಪೂರ್ಣಗೊಳಿಸಿದೆ. ವೈದ್ಯಕೀಯ ಪರೀಕ್ಷೆಯನ್ನು ಸಹ ಮುಕ್ತಾಯಗೊಳಿಸಲಾಗಿದೆ. ಆದ್ದರಿಂದ, ಹೆಚ್ಚಿನ ವಿಚಾರಣೆಗಾಗಿ ಅವರನ್ನು ವಶಕ್ಕೆ ನೀಡುವಂತೆ ಸಿಸಿಬಿ ಕೇಳಲಿಲ್ಲ. ಇದರಿಂದಾಗಿ 1ನೇ ಎಸಿಎಂಎಂ ನ್ಯಾಯಾಲಯ ನಟಿಯರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತು.

ಸಂಜನಾ ಜಾಮೀನು ಅರ್ಜಿ ಸಲ್ಲಿಸಿಲ್ಲ
ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಸೆಪ್ಟೆಂಬರ್ 8ರಂದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಬಳಿಕ ಅಂದು ಸಂಜೆ ಸಿಸಿಬಿ ಪೊಲೀಸರು ಆಕೆಯನ್ನು ಬಂಧಿಸಿದ್ದರು. ಅವರು ಇನ್ನು ಜಾಮೀನು ಅರ್ಜಿಯನ್ನು ಸಲ್ಲಿಕೆ ಮಾಡಿಲ್ಲ. ಆದ್ದರಿಂದ, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪರಪ್ಪನ ಅಗ್ರಹಾರ ಜೈಲಿಗೆ
ನಟಿ ರಾಗಿಣಿ, ರಾಹುಲ್, ಪ್ರಶಾಂತ್ ರಂಕ, ನಿಯಾಜ್ ಮತ್ತು ರಾಗಿಣಿ ಆಪ್ತರಾದ ರವಿಶಂಕರ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ. ಸಿಸಿಬಿ ಪೊಲೀಸರು ಎಲ್ಲರನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಿದ್ದಾರೆ.

ಆಸ್ಪತ್ರೆಗೆ ದಾಖಲಿಸಲು ಮನವಿ
ಆರೋಗ್ಯ ಸಮಸ್ಯೆ ಹಿನ್ನಲೆಯಲ್ಲಿ ರಾಗಿಣಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಬೇಕು ಎಂದು ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಜೈಲಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಬೇಕು ಎಂದು ಕೋರ್ಟ್ ಸೂಚಿಸಿತು. ಕೆ. ಸಿ. ಜನರಲ್ ಆಸ್ಪತ್ರೆಯಲ್ಲಿ ಇಬ್ಬರೂ ಆರೋಪಿಗಳಿಗೆ ಇಂದು ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ವರದಿ ನಗೆಟೀವ್ ಬಂದಿತ್ತು.
Recommended Video

ನ್ಯಾಯಾಲಯಕ್ಕೆ ಹಾಜರುಪಡಿಸಿ
ನಟಿ ರಾಗಿಣಿ ಸೇರಿದಂತೆ ಐವರು ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ಎನ್ಡಿಪಿಎಸ್ ನ್ಯಾಯಾಲಯ ಸೆ. 16ಕ್ಕೆ ಮುಂದೂಡಿದೆ. 1ನೇ ಎಸಿಎಂಎಂ ನ್ಯಾಯಾಲಯ ಆರೋಪಿಗಳನ್ನು ಸೆ.16ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಎಂದು ಪೊಲೀಸರಿಗೆ ಸೂಚನೆ ನೀಡಿದೆ.












Click it and Unblock the Notifications