ಬೆಂಗಳೂರಲ್ಲಿ ರಾಯಣ್ಣ ಬ್ರಿಗೇಡ್ ದಿಢೀರ್ ಸಭೆ!
ಬೆಂಗಳೂರು, ಫೆಬ್ರವರಿ 22 : ಹಲವು ದಿನಗಳ ಬಳಿಕ ಸಂಗೊಳ್ಳಿರಾಯಣ್ಣ ಬ್ರಿಗೇಡ್ ದಿಧೀರ್ ಸಭೆ ನಡೆಸುತ್ತಿದೆ. ಕೆ.ಎಸ್.ಈಶ್ವರಪ್ಪ ಅವರಿಗೆ ಟಿಕೆಟ್ ಕೊಡುವ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಸಭೆ ನಡೆಯುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸಂಗೊಳ್ಳಿರಾಯಣ್ಣ ಬ್ರಿಗೇಡ್ ರಾಜ್ಯಾಧ್ಯಕ್ಷ ಕೆ. ವಿರುಪಾಕ್ಷಪ್ಪ ನೇತೃತ್ವದಲ್ಲಿ ಗುರುವಾರ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಯುತ್ತಿದೆ. ಬ್ರಿಗೇಡ್ನ ಹಲವಾರು ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಟಿಕೆಟ್ ನೀಡುವ ಕುರಿತು ಚರ್ಚೆ ನಡೆಯುತ್ತಿದೆ. ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಈಶ್ವರಪ್ಪ ಬಲದು ಪಕ್ಷದ ಜಿಲ್ಲಾಧ್ಯಕ್ಷ ರುದ್ರೇಗೌಡ ಅವರಿಗೆ ಟಿಕೆಟ್ ನೀಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

ಕಳೆದ ವಾರ ಈಶ್ವರಪ್ಪ ಅವರಿಗೆ ಟಿಕೆಟ್ ಕೈ ತಪ್ಪಿದರೆ ರಾಯಣ್ಣ ಬ್ರಿಗೇಡ್ ಚಟುವಟಿಕೆ ಮತ್ತೆ ಆರಂಭಿಸುವುದಾಗಿ ಬ್ರಿಗೇಡ್ ಸದಸ್ಯರು ಎಚ್ಚರಿಕೆ ನೀಡಿದ್ದರು. ಆದರೆ, ಇಂದು ದಿಢೀರ್ ಆಗಿ ಬೆಂಗಳೂರಿನಲ್ಲಿ ಸಭೆ ನಡೆಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಬ್ರಿಗೇಡ್ ಸಭೆಯಲ್ಲಿ ಯಾವ ನಿರ್ಣಯವನ್ನು ಕೈಗೊಳ್ಳಲಾಗುತ್ತದೆ? ಎಂಬ ಬಗ್ಗೆ ಇನ್ನೂ ತಿಳಿದುಬಂದಿಲ್ಲ. ಕರ್ನಾಟಕ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ವಿರುದ್ಧ ಸಭೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಭೆಯಲ್ಲಿ ಕೆ.ಎಸ್.ಈಶ್ವರಪ್ಪ ಅವರು ಪಾಲ್ಗೊಂಡಿಲ್ಲ.
ಯಡಿಯೂರಪ್ಪ ಪ್ರತಿಕ್ರಿಯೆ : ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, 'ನಾನು ಮತ್ತು ಈಶ್ವರಪ್ಪ ಅಣ್ಣ-ತಮ್ಮಂದಿರುವ ಇದ್ದಂತೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ' ಎಂದು ಹೇಳಿದರು.












Click it and Unblock the Notifications