ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ರಚನೆ ರಹಸ್ಯ ಬಯಲು!
ಬೆಂಗಳೂರು, ಆಗಸ್ಟ್ 16 : 'ಬಿಜೆಪಿಯಲ್ಲಿ ಕೆ.ಎಸ್.ಈಶ್ವರಪ್ಪ ಅವರನ್ನು ಮೂಲೆಗೆ ತಳ್ಳಲಾಗುತ್ತಿದೆ. ತಮ್ಮ ರಾಜಕೀಯ ಭವಿಷ್ಯ ಉಳಿಸಿಕೊಳ್ಳಲು ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ರಚನೆ ಮಾಡುತ್ತಿದ್ದಾರೆ. ಈ ಬ್ರಿಗೇಡ್ ಯಶಸ್ವಿಯಾಗುವುದಿಲ್ಲ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, 'ಹಿಂದುಳಿದ ವರ್ಗಗಳನ್ನು ಸೇರಿಸಿಕೊಂಡು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ರಚನೆ ಮಾಡಲು ಈಶ್ವರಪ್ಪ ಮುಂದಾಗಿದ್ದಾರೆ. ಈ ಬ್ರಿಗೇಡ್ ಅವರ ಅಸ್ತಿತ್ವ ಉಳಿಸಿಕೊಳ್ಳಲು ಮಾತ್ರ' ಎಂದು ಲೇವಡಿ ಮಾಡಿದರು.[ಅಹಿಂದ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಈಶ್ವರಪ್ಪ]

'ಈಶ್ವರಪ್ಪ ಅವರು ಆಗಲಿ, ಬಿಜೆಪಿಯಾಗಲಿ ಇದುವರೆಗೂ ಹಿಂದುಳಿದ ವರ್ಗಗಳ ಬಗ್ಗೆ ಗಮನ ಕೊಟ್ಟಿಲ್ಲ. ಈಗ ಚುನಾವಣೆ ಕಾಲ ಹತ್ತಿರವಾಗುತ್ತಿದೆ ಎಂದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ರಚನೆ ಮಾಡಲು ಮುಂದಾಗಿದ್ದಾರೆ. ಈ ಬ್ರಿಗೇಡ್ ಯಶಸ್ವಿಯಾಗುವುದಿಲ್ಲ' ಎಂದರು.[ಕಾಂಗ್ರೆಸ್, ಬಿಜೆಪಿಗೆ ಬಿಸಿ ತುಪ್ಪವಾದ ಭಿನ್ನಮತ!]
'ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋದರೂ ಬಿಜೆಪಿಗೆ ಹೆಚ್ಚಿನ ಮತಗಳು ಸಿಗುವುದಿಲ್ಲ. ಯಡಿಯೂರಪ್ಪ ಅವರು ನಡೆಸಿದ ಭ್ರಷ್ಟಾಚಾರದ ಆಡಳಿತವನ್ನು ಜನರು ನೋಡಿದ್ದಾರೆ' ಎಂದು ದಿನೇಶ್ ಗುಂಡೂರಾವ್ ಹೇಳಿದರು.[ಕರ್ನಾಟಕ ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ]
ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು, ಆಗಸ್ಟ್ ಮೊದಲ ವಾರದಲ್ಲಿ ಬೆಂಗಳೂರಿನ ಕಬ್ಬನ್ ಪಾರ್ಕ್ನ ಸೆಕ್ರೆಟರಿಯೇಟ್ ಕ್ಲಬ್ನಲ್ಲಿ ಕುರುಬ ಸಮುದಾಯದ ನಾಯಕರ ಸಭೆ ನಡೆಸಿದ್ದರು. ಹಿಂದುಳಿದ ವರ್ಗಗಳನ್ನು ಸೇರಿಸಿ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್' ರಚನೆ ಮಾಡಲು ಪೂರ್ವಭಾವಿ ಸಭೆ ನಡೆಸಿದ್ದರು.












Click it and Unblock the Notifications