ಸಂತೋಷ್ ಲಾಡ್ ರಾಜೀನಾಮೆಗೆ ಸಿಎಂ ಸೂಚನೆ?
ಬೆಂಗಳೂರು, ನ. 22 : ಪ್ರತಿಪಕ್ಷಗಳ ಒತ್ತಾಯಕ್ಕೆ ಮಣಿದಿರುವ ಸಿಎಂ ಸಿದ್ದರಾಮಯ್ಯ ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಸಚಿವ ಸಂತೋಷ್ ಲಾಡ್ ಅವರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ಸಂಜೆ ಅಥವ ಶನಿವಾರ ಸಂತೋಷ್ ಲಾಡ್ ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಗುರುವಾರ ರಾತ್ರಿ ಸಿಎಂ ಸಿದ್ದರಾಮಯ್ಯ ವಾರ್ತಾ ಮತ್ತು ಮೂಲ ಸೌಕರ್ಯ ಸಚಿವ ಸಂತೋಷ್ ಲಾಡ್ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಶನಿವಾರ ತಮ್ಮ ಸ್ಥಾನಕ್ಕೆ ಲಾಡ್ ರಾಜೀನಾಮೆ ನೀಡಲಿದ್ದು, ಈ ಮೂಲಕ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಗೊಳ್ಳಲಿದೆ.
ನ.25ರ ಸೋಮವಾರದಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಅಲ್ಲಿ ಪ್ರತಿಪಕ್ಷಗಳಿಂದ ಆಗುವ ಮುಜುಗರ ತಪ್ಪಿಸಿಕೊಳ್ಳಲು ಸಿದ್ದರಾಮಯ್ಯ ಅವರು ಈ ಕ್ರಮ ಕೈಗೊಂಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಸಂತೋಷ್ ಲಾಡ್ ವಿರುದ್ಧ ಅಕ್ರಮ ಗಣಿಗಾರಿಕೆ ಆರೋಪ ಮಾಡಿದ್ದ ಎಸ್.ಆರ್.ಹಿರೇಮಠ್ ಕಾಂಗ್ರೆಸ್ ಹೈ ಕಮಾಂಡ್ ನಾಯಕರಿಗೂ ದಾಖಲೆಗಳನ್ನು ಸಲ್ಲಿಸಿದ್ದರು.
ದಾಖಲೆಗಳನ್ನು ಪರಿಶೀಲಿಸಿದ ನಾಯಕರು ಸಂತೋಷ್ ಲಾಡ್ ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿರಬಹುದು ಎಂದು ತಿಳಿದು ಬಂದಿದೆ. ಸಿಎಂ ಸಿದ್ದರಾಮಯ್ಯ ಸಂತೋಷ್ ಲಾಡ್ ಅವರಿಗೆ ಕಾಲಾವಕಾಶ ನೀಡಿದ್ದು, ಶುಕ್ರವಾರ ಸಂಜೆ ಅಥವ ಶನಿವಾರ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. (ಸಂತೋಷ್ ಲಾಡ್ ರಾಜೀನಾಮೆಗೆ ಒತ್ತಾಯಗಳು )
ರಾಜೀನಾಮೆಗೆ ಹಿರೇಮಠ್ ಒತ್ತಾಯ
ಸಮಾಜ ಪರಿವರ್ತನಾ ಸಮಿತಿ ಅಧ್ಯಕ್ಷ ಎಸ್.ಆರ್.ಹಿರೇಮಠ್ ಮೊದಲು ಸಂತೋಷ್ ಲಾಡ್ ವಿರುದ್ಧ ಹೋರಾಟ ಆರಂಭಿಸಿದರು. ಲಾಡ್ ಬೆಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಹಿರೇಮಠ್, ದಾಖಲೆ ಬಿಡುಗಡೆ ಮಾಡಿದ್ದರು. ಲೋಕಾಯುಕ್ತ ವರದಿಯಲ್ಲಿ ವಿ.ಎಸ್.ಲಾಡ್ ಅಂಡ್ ಕಂಪನಿ ಅಕ್ರಮ ಅದಿರು ದಾಸ್ತಾನು ಅವ್ಯವಹಾರದಲ್ಲಿ ಭಾಗಿಯಾಗಿದೆ ಎಂದು ಉಲ್ಲೇಖಿಸಿದೆ. ಲೋಕಾಯುಕ್ತ ವರದಿಯ 2ನೇ ಅಧ್ಯಾಯದಲ್ಲಿ ಸಂತೋಷ್ ಲಾಡ್ ಒಡೆತನದ ವಿ.ಎಸ್.ಲಾಡ್ ಕಂಪನಿಯ ಕುರಿತು ಉಲ್ಲೇಖಿಸಲಾಗಿದೆ ಹಿರೇಮಠ್ ಅಗತ್ಯ ದಾಖಲೆ ಬಿಡುಗಡೆ ಮಾಡಿದ್ದರು.
ಅಖಾಡಕ್ಕಿಳಿದ ಬಿಜೆಪಿ
ಅ.23ರಂದು ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಸಚಿವ ಸಂತೋಷ್ ಲಾಡ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಫ್ರೀಡಂ ಪಾರ್ಕ್ ನಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಬಿಜೆಪಿ ನಾಯಕರನ್ನು ಪೊಲೀಸರು ತಡೆದು ತಮ್ಮ ವಶಕ್ಕೆ ಪಡೆದಿದ್ದರು. ಬಿಜೆಪಿ ನಾಯಕರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಲಾಡ್ ಅವರನ್ನು ಸಂಪುಟದಿಂದ ವಜಾಗೊಳಿಸಲು ಒತ್ತಾಯಿಸಿತ್ತು.
ದೊರೆಸ್ವಾಮಿ ಒತ್ತಾಯ
ಬೇಲೇಕೇರಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಲಾಡ್ ಪಾತ್ರ ಕುರಿತು ಸ್ಪಷ್ಟನೆ ನೀಡಬೇಕೆಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಸಿಎಂ ಸಿದ್ದರಾಮಯ್ಯ ಅವರಿಗೆ ಮೂರು ಪತ್ರ ಬರೆದಿದ್ದರು. ಲಾಡ್ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಅವರು ಸಲಹೆ ನೀಡಿದ್ದರು.
ಟಿ.ಜೆ.ಅಬ್ರಾಹಂ ದೂರು
ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ರಾಜ್ಯಪಾಲರನ್ನು ಭೇಟಿ ಮಾಡಿ, ಸಿಎಂ ಮತ್ತು ಸಂತೋಷ್ ಲಾಡ್ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಲು ಅನುಮತಿ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದರು. ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತ ಹಾಗೂ ಸಿಇಸಿ ವರದಿಯಲ್ಲಿ ಸಚಿವ ಸಂತೋಷ್ ಲಾಡ್ ಬಳ್ಳಾರಿಯಲ್ಲಿ 1.78 ಕೋಟಿ ರೂ. ಮೌಲ್ಯದ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಿದ್ದಾರೆ ಎಂದು ಉಲ್ಲೇಖಿಸಿದೆ. ಆದರೂ, ಸಿಎಂ ಅವರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಆದ್ದರಿಂದ ಇಬ್ಬರ ವಿರುದ್ಧವೂ ದೂರು ಸಲ್ಲಿಸುತ್ತೇನೆ ಎಂದು ಮನವಿ ಮಾಡಿದ್ದರು.
ರಾಜ್ಯಪಾಲರು ಹೇಳಿದ್ದೇನು?
ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಸಚಿವ ಸಂತೋಷ್ ಲಾಡ್ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿ ನನಗೆ ಅನೇಕ ದೂರುಗಳು ಬಂದಿವೆ ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಗುರುವಾರ ಹೇಳಿದ್ದರು. ನನಗೆ ಬಂದ ದೂರುಗಳನ್ನು ಸಿಎಂ ಸಿದ್ದರಾಮುಯ್ಯ ಅವರಿಗೆ ಕಳುಹಿಸಿದ್ದೇನೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿಸಿದ್ದರು. ಕೆಲವು ದಿನಗಳ ಹಿಂದೆ ರಾಜ್ಯಪಾಲರನ್ನು ಭೇಟಿಯಾಗಿದ್ದ ಸಿದ್ದರಾಮಯ್ಯ ಲಾಡ್ ಅವರನ್ನು ಸಮರ್ಥಿಸಿಕೊಂಡಿದ್ದರು.
ಅನಿಲ್ ಲಾಡ್ ಆರಂಭಿಸಿದ ಅಭಿಯಾನ
ಬಳ್ಳಾರಿ ನಗರ ಕ್ಷೇತ್ರದ ಶಾಸಕ ಅನಿಲ್ ಲಾಡ್ ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತರು ನೀಡಿರುವ ವರದಿಯಲ್ಲಿ ಸಂತೋಷ್ ಲಾಡ್ ಹೆಸರಿದೆ. ಆದರೂ, ಅವರು ಸಚಿವರಾಗಿದ್ದು ಹೇಗೆ?, ನನಗೆ ಏಕೆ ಸಚಿವ ಸ್ಥಾನ ನೀಡಲಿಲ್ಲ ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸುವ ಮೂಲಕ ಸಂತೋಷ್ ಲಾಡ್ ವಿರುದ್ಧದ ಅಭಿಯಾನ ಆರಂಭಿಸಿದ್ದರು.
ಸಂತೋಷ್ ಲಾಡ್ ಹೇಳಿದ್ದೇನು?
ಸಚಿವ ಸಂತೋಷ್ ಲಾಡ್ ಮೊದಲಿನಿಂದಲೂ ತಮ್ಮ ಮೇಲಿನ ಅಕ್ರಮ ಗಣಿಗಾರಿಕೆ ಆರೋಪಗಳನ್ನು ತಳ್ಳಿಹಾಕುತ್ತಾ ಬಂದಿದ್ದಾರೆ. ಎಸ್.ಆರ್.ಹಿರೇಮಠ್ ತಮ್ಮ ವಿರುದ್ಧ ಆರೋಪ ಮಾಡಿದಾಗ ದಾಖಲೆ ಬಿಡುಗಡೆ ಮಾಡುವಂತೆ ಸವಾಲು ಹಾಕಿದ್ದರು. ಅದಕ್ಕೆ ಪ್ರತಿಯಾಗಿ ಮೂರು ಬಾರಿ ಲಾಡ್ ವಿರುದ್ಧ ದಾಖಲೆ ಬಿಡುಗಡೆ ಮಾಡಿದ ಹಿರೇಮಠ್, ಅವುಗಳನ್ನು ಸಿಎಂ, ಕಾಂಗ್ರೆಸ್ ಹೈಕಮಾಂಡ್, ರಾಜ್ಯಪಾಲರು ಮತ್ತು ಸ್ವತಃ ಸಂತೋಷ್ ಲಾಡ್ ಅವರ ಕಚೇರಿಗೂ ತಲುಪಿಸಿದ್ದರು.
ಸೋನಿಯಾ ಗಾಂಧಿಗೂ ದಾಖಲೆ
ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಸಚಿವ ಸಂತೋಷ್ ಲಾಡ್ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದಾರೆ ಎಂಬ ದಾಖಲೆಗಳನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ಕಳುಹಿಸಿದ್ದರು. ಆದ್ದರಿಂದ ಕೇಂದ್ರ ನಾಯಕರ ಆದೇಶದಂತೆ ಸಿಎಂ ಲಾಡ್ ರಾಜೀನಾಮೆಗೆ ಸೂಚಿಸಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಅಧಿವೇಶನಕ್ಕೆ ನಿರಾಳ
ನ.25ರ ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಪ್ರತಿಪಕ್ಷದವರು ಸಂತೋಷ್ ಲಾಡ್ ವಿಚಾರವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರಕ್ಕೆ ಮುಜುಗರ ಉಂಟುಮಾಡಬಹುದು ಎಂದು ಸಿಎಂ ಅವರ ರಾಜೀನಾಮೆ ಪಡೆಯಲು ಮುಂದಾಗಿರಬಹುದು.
ಡಿ.ಕೆ.ಶಿವಕುಮಾರ್ ಸಂಪುಟಕ್ಕೆ?
ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಮನ್ವಯ ಸಮತಿ ಸಭೆಯಲ್ಲಿ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಸಂತೋಷ್ ಲಾಡ್ ಅವರ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಸೇರ್ಪಡೆಗೊಳ್ಳುತ್ತಾರಾ? ಎಂದು ಕಾದು ನೋಡಬೇಕಿದೆ.