ಸಂತೋಷ್ ಆತ್ಮಹತ್ಯೆ ಪ್ರಕರಣ; ಈಶ್ವರಪ್ಪಗೆ ಬಿಗ್ ರಿಲೀಫ್
ಬೆಂಗಳೂರು, ಜುಲೈ 16; ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ, ಬಿಜೆಪಿ ನಾಯಕ ಕೆ. ಎಸ್. ಈಶ್ವರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯವು ಬಿ-ರಿಪೋರ್ಟ್ (ಸಾಕ್ಷ್ಯದ ಕೊರತೆಯಿಂದ ಮುಚ್ಚುವ ವರದಿ) ಅಂಗೀಕರಿಸಿದೆ. ಆದ್ದರಿಂದ ಈಶ್ವರಪ್ಪ ಇನ್ನು ಈ ಪ್ರಕರಣದಲ್ಲಿ ಆರೋಪಿಯಲ್ಲ.
ಬಿ-ರಿಪೋರ್ಟ್ ಅಂಗೀಕಾರವಾದ ಕಾರಣ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ, ಕೆ. ಎಸ್. ಈಶ್ವರಪ್ಪ ರಾಜೀನಾಮೆ ನೀಡಲು ಕಾರಣವಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಂತಾಗಿದೆ. 2022ರ ಏಪ್ರಿಲ್ನಲ್ಲಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದರು.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್, ರಾಜಕೀಯ ಪ್ರಭಾವಕ್ಕೆ ಒಳಗಾಗಿ ಎಸ್ಐಟಿ ಅಧಿಕಾರಿಗಳು ಬಿ-ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದರು. ಶನಿವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಬಿ-ರಿಪೋರ್ಟ್ ಅಂಗೀಕರಿಸಿದೆ.
ಶೇ 40ರಷ್ಟು ಕಮೀಷನ್ ಆರೋಪ; ಬಿಜೆಪಿ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯರತ್ ರಾಜ್ ಇಲಾಖೆ ಸಚಿವರಾಗಿದ್ದ, ಆಗ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಕೆ. ಎಸ್. ಈಶ್ವರಪ್ಪ ವಿರುದ್ಧ ಶೇಕಡ 40ರಷ್ಟು ಕಮೀಷನ್ ಆರೋಪ ಮಾಡಲಾಗಿತ್ತು.
ಕಾಮಗಾರಿ ನಡೆಸಿದ ಸಂಬಂಧ ಸರ್ಕಾರದಿಂದ ಬಿಲ್ ಮಂಜೂರು ಮಾಡಲು ಸಚಿವರಾಗಿದ್ದ ಕೆ. ಎಸ್. ಈಶ್ವರಪ್ಪ ಶೇ. 40ರಷ್ಟು ಕಮೀಷನ್ ಕೇಳಿದ್ದರು ಎಂದು ಮೃತ ಸಂತೋಷ್ ಪಾಟೀಲ್ ಆರೋಪಿಸಿದ್ದರು. ಇದರಿಂದ ಹಿಂದಿನ ಬಿಜೆಪಿ ಸರ್ಕಾರಕ್ಕೆ ಶೇ 40 ಪರ್ಸೆಂಟ್ ಕಮೀಷನ್ ಸರ್ಕಾರ ಎಂದು ಪ್ರತಿಪಕ್ಷಗಳು ಟೀಕಿಸಲು ಆರಂಭಿಸಿದ್ದವು.
ಪ್ರಕರಣ ಸಂಬಂಧ ಎಸ್ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ತನಿಖೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಲಾಗಿತ್ತು. ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ ಸಾಕ್ಷ್ಯಗಳೇ ಇಲ್ಲ ಎಂದು ಅಂತಿಮ ವರದಿಯಲ್ಲಿ ಉಡುಪಿ ಪೊಲೀಸರು ಉಲ್ಲೇಖಿಸಿದ್ದರು. ಆದರೆ ಇದನ್ನು ಪ್ರಶ್ನಿಸಿ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಸ್ಥರು ನ್ಯಾಯಾಲಯದ ಮೆಟ್ಟಿಲೇರಿದ್ದರು.
2022ರ ಏಪ್ರಿಲ್ನಲ್ಲಿ ಉಡುಪಿಯ ಲಾಡ್ಜ್ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಈಶ್ವರಪ್ಪರ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಇದರಿಂದಾಗಿ ಅಂದಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.












Click it and Unblock the Notifications