ಸಮ್ಮಿಶ್ರ ಸರ್ಕಾರದಿಂದ ಅನುದಾನವೇ ಬರುತ್ತಿಲ್ಲ: ಸತೀಶ್ ಜಾರಕಿಹೊಳಿ
Recommended Video

ಬೆಂಗಳೂರು, ನವೆಂಬರ್ 23: ಸಮ್ಮಿಶ್ರ ಸರ್ಕಾರದಲ್ಲಿ ಸಂಪುಟ ವಿಸ್ತರಣೆ ಇನ್ನೂ ನಡೆಯದೆ ಇರುವುದರ ಬಗ್ಗೆ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಮತ್ತೊಮ್ಮೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಮೈತ್ರಿ ಸರ್ಕಾರದಲ್ಲಿ ಸಂಪುಟ ವಿಸ್ತರಣೆ ಆಗದೆ ಇರುವುದರ ಬಗ್ಗೆ ಶಾಸಕರಲ್ಲಿ ಅಸಮಾಧಾನವಿದೆ. ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ. ಅದು ನಿಧಾನವಾಗಿ ಟೇಕಾಫ್ ಆಗಲಿದೆ. ಅದಕ್ಕೆ ಸ್ವಲ್ಪ ಕಾಲಾವಕಾಶ ಬೇಕು. ಸಂಪುಟ ವಿಸ್ತರಣೆ ಬೇಗ ಆದರೆ ಒಳ್ಳೆಯದು ಎಂದು ಸತೀಶ್ ಹೇಳಿದ್ದಾರೆ.
ಸಮ್ಮಿಶ್ರ ಸರ್ಕಾರದಲ್ಲಿ ಸಮಸ್ಯೆ ಇಲ್ಲ. ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ವಿಚಾರ ಸುದ್ದಿಯಾಯಿತು. ಅದು ಅಷ್ಟೇ ಬೇಗ ಆ ಸುದ್ದಿ ಮಾಯವಾಯಿತು ಎಂದಿದ್ದಾರೆ.
ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಭೇಟಿ ನೀಡುವುದರಿಂದ ನಮಗೆ ಹಿನ್ನಡೆಯಾಗಿಲ್ಲ ಎಂದು ತಿಳಿಸಿದ್ದಾರೆ.
ಬೆಳಗಾವಿಗೆ ಶುಕ್ರವಾರ ಭೇಟಿ ನೀಡಿದ್ದ ಡಿ.ಕೆ. ಶಿವಕುಮಾರ್, ರೈತರ ಜತೆ ಸಭೆ ನಡೆಸಿ ಪ್ರತಿಭಟನೆ ವಾಪಸ್ ಪಡೆಯುವಂತೆ ಮನವೊಲಿಸಿದ್ದರು.

ಅನುದಾನ ಬರುತ್ತಿಲ್ಲ
ಸಿದ್ದರಾಮಯ್ಯ ಅವರ ಸರ್ಕಾರದ ಆಡಳಿತದಲ್ಲಿ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಬರುತ್ತಿತ್ತು. ಆದರೆ, ಮೈತ್ರಿ ಸರ್ಕಾರದಲ್ಲಿ ಹೆಚ್ಚು ಅನುದಾನ ಲಭಿಸುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಆಡಳಿತದಲ್ಲಿ 40 ಕೋಟಿ ರೂ. ಅನುದಾನ ಬರುತ್ತಿತ್ತು. ಈಗ 10 ಕೋಟಿ ರೂ. ಮಾತ್ರ ಸಿಗುತ್ತಿದೆ ಎಂದು ಅವರು ಹೇಳಿದ್ದಾರೆ.

ಸಚಿವರಾಗಿ ಬರುವುದು ಸಹಜ
ಡಿಕೆ ಶಿವಕುಮಾರ್ ಸಚಿವರಾಗಿ ರಾಜ್ಯ ಪ್ರವಾಸದಲ್ಲಿರುವುದು ಸಹಜ. ಅವರು ಬೇರೆ ಜಿಲ್ಲೆಗೆ ಭೇಟಿ ನೀಡುವುದು ಹೊಸದೇನೂ ಅಲ್ಲ. ಹಾಗೆಯೇ ಬೆಳಗಾವಿಗೆ ಭೇಟಿ ನೀಡಿ, ಕಬ್ಬು ಬೆಳೆಗಾರರೊಂದಿಗೆ ಮಾತನಾಡಿದ್ದಾರೆ.
ರಮೇಶ್ ಜಾರಕಿಹೊಳಿ ಮಾಡಬೇಕಿದ್ದ ಕೆಲಸವನ್ನು ಡಿಕೆ ಶಿವಕುಮಾರ್ ಮಾಡಿದ್ದಾರೆ. ರಮೇಶ್ ಮತ್ತು ಡಿಕೆ ಶಿವಕುಮಾರ್ 20 ವರ್ಷಗಳಿಂದ ಸ್ನೇಹಿತರು. ಬೆಳಗಾವಿ ಭೇಟಿ ವಿಚಾರವನ್ನು ಚರ್ಚಿಸಲು ಡಿಕೆ ಶಿವಕುಮಾರ್ ಅವರು ರಮೇಶ್ ನಿವಾಸಕ್ಕೆ ಹೋಗಿರಲಿಲ್ಲ. ಬೇರೆ ಕಾರಣಕ್ಕೆ ಭೇಟಿ ಮಾಡಿದ್ದಾರೆ ಎಂದಿದ್ದಾರೆ.

ಸಚಿವ ಸ್ಥಾನದ ಆಕಾಂಕ್ಷಿ
ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಹೌದು. ಸಂಪುಟ ವಿಸ್ತರಣೆ ವೇಳೆ ಸ್ಥಾನ ಕೊಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲಿಯವರೆಗೂ ಕಾದು ನೋಡುತ್ತೇನೆ ಎಂದು ಹೇಳಿದ್ದಾರೆ. ಈ ಹಿಂದೆ ಸಂಪುಟ ವಿಸ್ತರಣೆ ವಿಳಂಬವಾದ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ಸಹೋದರರು ಸರ್ಕಾರದ ಮೇಲೆ ಒತ್ತಡ ಹೇರಿದ್ದರು.

ಸರ್ಕಾರಕ್ಕೆ ಸಂಬಂಧವಿಲ್ಲ
ಸರ್ಕಾರಕ್ಕೂ ಸಕ್ಕರೆ ಕಾರ್ಖಾನೆಗಳಿಗೂ ಯಾವುದೇ ಸಂಬಂಧ ಇಲ್ಲ. ಆದರೂ ರೈತರಿಗೆ ಉಳಿಸಿಕೊಂಡಿರುವ ಬಾಕಿ ಹಣವನ್ನು ಪಾವತಿ ಮಾಡುವಂತೆ ಸಿಎಂ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಡೆಸಿದ ಸಭೆಯಲ್ಲಿ ನಾನೂ ಭಾಗವಹಿಸಿದ್ದೆ ಎಂದು ಸತೀಶ್ ತಿಳಿಸಿದ್ದಾರೆ.












Click it and Unblock the Notifications