ಜಾರಕಿಹೊಳಿ ಮನವೊಲಿಕೆ, ರಾಜೀನಾಮೆ ವಾಪಸ್?
ಬೆಂಗಳೂರು, ಜ.29 : ಅಬಕಾರಿ ಸಚಿವ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡಿರುವ ನಂತರ ಉಂಟಾಗಿರುವ ಬಿಕ್ಕಟ್ಟು ಶಮನಗೊಂಡಿದೆ. ಶುಕ್ರವಾರ ಸಂಜೆ ಸತೀಶ್ ಜಾರಕಿಹೊಳಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದ್ದು, ನಂತರ ತಮ್ಮ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಬೆಳಗಾವಿಯಿಂದ ಆಗಮಿಸಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದ ತಂಡ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ವಿವಿಧ ಸಚಿವರೊಂದಿಗೆ ನಡೆಸಿದ ಸರಣಿ ಸಭೆಗಳು ಫಲ ನೀಡಿವೆ. ಸಿಎಂ ಸಿದ್ದರಾಮಯ್ಯ ಅವರು ನಿಯೋಗದ ಮುಂದೆಯೇ ಸತೀಶ್ ಜಾರಕಿಹೊಳಿ ಅವರಿಗೆ ಕರೆ ಮಾಡಿ ಶುಕ್ರವಾರ ಬೆಂಗಳೂರಿಗೆ ಆಗಮಿಸುವಂತೆ ತಿಳಿಸಿದ್ದಾರೆ. [ರಾಜೀನಾಮೆ, ಗುರುವಾರ ಪ್ರಮುಖ ಬೆಳವಣಿಗೆಗಳು]

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೂರವಾಣಿ ಕರೆಗೆ ಸ್ಪಂದಿಸಿರುವ ಸತೀಶ್ ಜಾರಕಿಹೊಳಿ ಅವರು, ಮಾತುಕತೆಗೆ ಬೆಂಗಳೂರಿಗೆ ಆಗಮಿಸಲು ಒಪ್ಪಿಗೆ ನೀಡಿದ್ದಾರೆ. ಆದರೆ, ರಾಜೀನಾಮೆ ಹಿಂಪಡೆಯುವ ಬಗ್ಗೆ ಸ್ಪಷ್ಟವಾದ ನಿರ್ಧಾರವನ್ನು ಪ್ರಕಟಿಸಿಲ್ಲ, ಮುಖ್ಯಮಂತ್ರಿ ಅವರೊಂದಿಗಿನ ಮಾತುಕತೆ ಬಳಿಕ ಈ ಬಗ್ಗೆ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. [ಜಾರಕಿಹೊಳಿ ರಾಜೀನಾಮೆ : ಯಾರು, ಏನು ಹೇಳಿದರು?]
ಬೆಳಗಾವಿಯಿಂದ ಆಗಮಿಸಿದ್ದ ನಿಯೋಗ ಸಿಎಂ ಸಿದ್ದರಾಮಯ್ಯ ಅವರ ಜೊತೆ ಜಾರಕಿಹೊಳಿ ಅವರ ಅಸಮಾಧಾನಕ್ಕೆ ಕಾರಣವಾಗಿರುವ ಅಂಶಗಳ ಬಗ್ಗೆ ಚರ್ಚೆ ನಡೆಸಿದರು. ಸಿಎಂ ಈ ಬಗ್ಗೆ ನೇರವಾಗಿ ಸತೀಶ್ ಜಾರಕಿಹೊಳಿ ಅವರ ಜೊತೆ ಚರ್ಚಿಸುತ್ತೇನೆ ಎಂದು ನಿಯೋಗಕ್ಕೆ ತಿಳಿಸಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಶಾಸಕರು ಹಾಗೂ ಸಚಿವರೊಂದಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಸಭೆ ನಡೆಸಲಿದ್ದು, ಆ ಸಭೆಗೆ ಜಾರಕಿಹೊಳಿ ಅವರು ಆಗಮಿಸುವ ಸಾಧ್ಯತೆ ಇದೆ. ಸಭೆಯ ಬಳಿಕ ಸಂಜೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದ್ದಾರೆ.












Click it and Unblock the Notifications