ಕೆ.ಸಿ.ವೇಣುಗೋಪಾಲ್ ಭೇಟಿ ಮಾಡಿದ ಸತೀಶ್ ಜಾರಕಿಹೊಳಿ
ನವದೆಹಲಿ, ಸೆಪ್ಟೆಂಬರ್ 20 : 'ಜಾರಕಿಹೊಳಿ ಸಹೋದರರು ಉಪ ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಟ್ಟಿಲ್ಲ. ಲೋಕಸಭೆ ಚುನಾವಣೆ ಕುರಿತು ಅವರ ಜೊತೆ ಚರ್ಚೆ ನಡೆಸಿದ್ದೇನೆ' ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದರು.
ನವದೆಹಲಿಯಲ್ಲಿ ಗುರುವಾರ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿದರು. 'ಯಾವುದೇ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗುವುದಿಲ್ಲ' ಎಂದು ಸ್ಪಷ್ಟಪಡಿಸಿದರು.
ಸತೀಶ್ ಜಾರಕಿಹೊಳಿ ಅವರು ಕೆ.ಸಿ.ವೇಣುಗೋಪಾಲ್ ಅವರ ಆಹ್ವಾನದ ಮೇರೆಗೆ ದೆಹಲಿಗೆ ತೆರಳಿದ್ದರು. ಇಂದು ಅವರನ್ನು ಭೇಟಿಯಾಗಿ ಹಲವಾರು ವಿಚಾರಗಳ ಕುರಿತು ಚರ್ಚೆ ನಡೆಸಿದರು. 'ನಮ್ಮಲ್ಲಿ ಕೆಲವು ಅಸಮಾಧಾನವಿತ್ತು. ಅದು ಈಗ ಬಗೆಹರಿದಿದೆ' ಎಂದು ಭೇಟಿ ಬಳಿಕ ಸತೀಶ್ ಜಾರಕಿಹೊಳಿ ತಿಳಿಸಿದರು.

ಸತೀಶ್ ಜಾರಕಿಹೊಳಿ ಭೇಟಿ ಬಳಿಕ ಮಾತನಾಡಿದ ಕೆ.ಸಿ.ವೇಣುಗೋಪಾಲ್ ಅವರು, '2019ರ ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ನಡೆದಿದೆ. ಜಾರಕಿಹೊಳಿ ಸಹೋದರರು ಉಪ ಮುಖ್ಯಮಂತ್ರಿ ಪಟ್ಟಕ್ಕಾಗಿ ಬೇಡಿಕೆ ಇಟ್ಟಿಲ್ಲ' ಎಂದರು.
ಆಪರೇಷನ್ ಕಮಲಕ್ಕೆ ಅವಕಾಶವಿಲ್ಲ : ಕರ್ನಾಟಕದ ಕಾಂಗ್ರೆಸ್ ನಾಯಕರ ಜೊತೆ ಬುಧವಾರ ಸಂಜೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಭೆ ನಡೆಸಿದ್ದರು. ಸುಮಾರು 1 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಆಪರೇಷನ್ ಕಮಲ ಆಗದಂತೆ ಎಚ್ಚರಿಕೆ ವಹಿಸಿ, ಸರ್ಕಾರದ ಸ್ಥಿರತೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚನೆ ನೀಡಿದ್ದರು.












Click it and Unblock the Notifications