ಸಿಎಂ ಬದಲಾವಣೆ: ಕಾಂಗ್ರೆಸ್ ನಾಯಕರ ಸಾಲು ಸಾಲು ಮೀಟಿಂಗ್; ಮುಂದಿನ ಸಿಎಂ ಇವರೇನಾ?
ಬೆಂಗಳೂರು, ಅಕ್ಟೋಬರ್ 08: ಮುಡಾ ಹಗರಣದಿಂದಾಗಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ತೀವ್ರ ಒತ್ತಡ ಕೇಳಿ ಬಂದಿದೆ. ಕಾಂಗ್ರೆಸ್ ರಾಜ್ಯ ರಾಜಕೀಯದಲ್ಲಿನ ಬೆಳವಣೆಗೆಯಿಂಗಾಗಿ ಸದ್ಯ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಅವರೇನಾ ಎಂಬ ಪ್ರಶ್ನೆ ಉದ್ಭವಿಸಿದೆ.
ಸಚಿವ ಸತೀಶ್ ಜಾರಕಿಹೊಳಿ ಸೆಂಟರ್ ಪಾಯಿಂಟ್ ಆಗ್ತಿದ್ದಾರೆ. ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಬದಲಾವಣೆಯ ಚರ್ಚೆ ನಡೆಯುತ್ತಿರುವ ಹೊತ್ತಲಿ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರನ್ನ ಸಚಿವ ಹಾಗೂ ದಲಿತ ನಾಯಕ ಸತೀಶ್ ಜಾರಕಿಹೊಳಿ ಅವರು ಭೇಟಿ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಇದೀಗ ಕಾಂಗ್ರೆಸ್ ಪಾಳಯದಲ್ಲಿ ಸಾಲು ಸಾಲು ರಹಸ್ಯ ಸಭೆಗಳು ನಡೆಯುತ್ತಿರುವುದನ್ನ ಗಮನಿಸಿದ್ರೆ ಮುಖ್ಯಮಂತ್ರಿ ಬದಲಾವಣೆ ಪಕ್ಕಾ ನಾ ಎನ್ನಲಾಗಿದೆ.

ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿದ್ದಂತೆ ದಲಿತ ಸಿಎಂ ಕೂಗು ಮತ್ತೆ ಮುನ್ನಲೆಗೆ ಬಂದಿದೆ. ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ ಮತ್ತು ರಾಜ್ಯ ನಾಯಕರನ್ನು ನಿರಂತವಾಗಿ ಭೇಟಿ ಮಾಡುತ್ತಿರುವುದು ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಹೈಕಮಾಂಡ್ ನಾಯಕರನ್ನ ಭೇಟಿಯಾದ ಬಳಿಕ ಗೃಹ ಸಚಿವರಾದ ಪರಮೇಶ್ವರ್ ಅವರನ್ನ ಸತೀಶ್ ಜಾರಕಿಹೊಳಿ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಮಾಜಿ ಸಂಸದ ಡಿಕೆ ಸುರೇಶ್ ಅವರು ಸತೀಶ್ ಜಾರಕಿಹೊಳಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈಗಾಗಲೇ ಗೃಹ ಸಚಿವರಾದ ಪರಮೇಶ್ವರ್ ಅವರನ್ನ ನಾಲ್ಕೈದು ಬಾರಿ ಸತೀಶ್ ಜಾರಕಿಹೊಳಿ ಅವರು ಭೇಟಿ ಮಾಡಿರುವುದು ತೀವ್ರ ಅನುಮಾನಗಳಿಗೆ ಕಾರಣವಾಗಿದೆ. ಏಕೆಂದರೆ, ದಲಿತ ನಾಯಕರಾಗಿರುವ ಡಾ. ಜಿ ಪರಮೇಶ್ವರ್ ಅವರು ಸಹ ಮುಖ್ಯಮಂತ್ರಿ ಸ್ಥಾನದ ರೇಸ್ ನಲ್ಲಿದ್ದಾರೆ. ಇತ್ತ ಪರಮೇಶ್ವರ್ ಅವರನ್ನ ಭೇಟಿ ಮಾಡಿದ ಬಳಿಕ, ಸತೀಶ್ ಜಾರಕಿಹೊಳಿ ಅವರ ನಿವಾಸಕ್ಕೆ ಡಿ ಕೆ ಸುರೇಶ್ ಅವರು ಭೇಟಿ ಮಾಡಿ ಕೆಲ ಹೊತ್ತು ಸತೀಶ್ ಜಾರಕಿಹೊಳಿ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಇನ್ನೂ ಸಚಿವ ಸತೀಶ್ ಜಾರಕಿಹೊಳಿ ಅವರ ಭೇಟಿಯ ಬಳಿಕ ಮಾಧ್ಯಮಗಳ ಜೊತೆಗೆ ಡಿ ಕೆ ಸುರೇಶ್ ಅವರು ಮಾತನಾಡಿ, ನಮ್ಮ ಪಕ್ಷದ ನಾಯಕರನ್ನು ನಾವು ಭೇಟಿ ಮಾಡುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನಮ್ಮ ಪಕ್ಷದ ನಾಯಕರು, ನಮ್ಮದೇ ಪಕ್ಷದ ನಾಯಕರನ್ನು ಭೇಟಿ ಮಾಡುತ್ತಿದ್ದೇವೆ. ಒಂದು ವೇಳೆ ನಾವು ಯಡಿಯೂರಪ್ಪ ಅಥವಾ ಕುಮಾರಸ್ವಾಮಿ ಅವರನ್ನು ಗೌಪ್ಯವಾಗಿ ಭೇಟಿ ಮಾಡಿ ಸಭೆ ನಡೆಸಿದರೆ ಆಗ ವಿಶೇಷ ಅರ್ಥ ಕಲ್ಪಿಸಬಹುದು. ನಾವು ಪಕ್ಷ, ಸಂಘಟನೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಈ ಭೇಟಿಯನ್ನು ಅನುಮಾನದಿಂದ ನೋಡುವುದು ಸರಿಯಲ್ಲ ಎಂದು ತಿಳಿಸಿದರು.
ಈ ಭೇಟಿಯಲ್ಲಿ ರಾಜಕೀಯ ಇಲ್ಲ. ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಪ್ರಭಾವಿ ಸಚಿವರು. ಕನಕಪುರ ವಿಧಾನ ಸಭಾ ಕ್ಷೇತ್ರದ ಕೆಲವು ಅಭಿವೃದ್ಧಿ ಯೋಜನೆಗಳ ಮಂಜೂರಾತಿ ಬಗ್ಗೆ ಅವರ ಜತೆ ಚರ್ಚೆ ಮಾಡಲಾಯಿತು. ಅವರು ನಮ್ಮ ಮನವಿಗೆ ಒಪ್ಪಿದ್ದು, ಮುಖ್ಯಮಂತ್ರಿಗಳು ಅನುದಾನ ಬಿಡುಗಡೆ ಮಾಡಿದ ತಕ್ಷಣ ಮಂಜೂರಾತಿ ನೀಡುವುದಾಗಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದೇ ವೇಳೆ ರಾಮನಗರ ಜಿಲ್ಲೆಯ ಅಭಿವೃದ್ಧಿ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಇದಕ್ಕೂ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮಾಜಿ ಸಂಸದರಾದ ಡಿ ಕೆ ಸುರೇಶ್ ತಿಳಿಸಿದರು.












Click it and Unblock the Notifications