Satish Jarkiholi: ಹೈಕಮಾಂಡ್ ಭೇಟಿಯಾಗಿ ಎರಡು ದೊಡ್ಡ ಬೇಡಿಕೆ ಇಟ್ಟ ಸತೀಶ್ ಜಾರಕಿಹೊಳಿ
ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಬೂದಿ ಮುಚ್ಚಿದ ಕೆಂಡದಂತಿದೆ. ಮತ್ತೊಂದೆಡೆ ಕಾಂಗ್ರೆಸ್ನ ದಲಿತ ನಾಯಕರು ಕೂಡ ಸದ್ದಿಲ್ಲದೆ ತಯಾರಿ ನಡೆಸಿದ್ದು, ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಅಲ್ಲದೆ ಹೈಕಮಾಂಡ್ ಮುಂದೆ ಎರಡು ದೊಡ್ಡ ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ನ ದಲಿತ ನಾಯಕರ ಪೈಕಿ ಪ್ರಮುಖರು. ಮೊದಲಿನಿಂದಲೂ ರಾಜ್ಯ ಕಾಂಗ್ರೆಸ್ನಲ್ಲಿ ದಲಿತ ಸಿಎಂ ವಿಚಾರ ಮುನ್ನೆಲೆಗೆ ಬಂದಾಗ ಈ ಸಮುದಾಯದಿಂದ ಸತೀಶ್ ಜಾರಕಿಹೊಳಿ ಅವರ ಹೆಸರು ಚಾಲ್ತಿಯಲ್ಲಿರುತ್ತೆ. ಅವರು ಕೂಡ ಹಲವು ಬಾರಿ ಸಿಎಂ ಆಗುವ ಕನಸನ್ನು ಬಿಚ್ಚಿಟ್ಟಿದ್ದಾರೆ. ಸದ್ಯ ಕಾಂಗ್ರೆಸ್ ಸಿಎಂ ಬದಲಾವಣೆಯಾದರೆ, ಆ ಸ್ಥಾನದ ಮೇಲೂ ಅವರು ಕಣ್ಣಿಟ್ಟಿದ್ದಾರೆ ಎಂದು ಕಾಂಗ್ರೆಸ್ನಲ್ಲೇ ಮಾತಿದೆ.

ರಾಜ್ಯದಲ್ಲಿ ಈ ಬೆಳವಣಿಗೆಗಳ ನಡುವೆಯೇ ಸತೀಶ್ ಜಾರಕಿಹೊಳಿ ಅವರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ರಾಜ್ಯ ಕಾಂಗ್ರೆಸ್ನಲ್ಲಿ ಕೆಪಿಸಿಸಿ ಅಧ್ಯಕ್ಷರ ಸ್ಥಾನ ಹಾಗೂ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವುದಾದ್ರೆ, ದಲಿತ ನಾಯಕರನ್ನು ಈ ಸ್ಥಾನಗಳಿಗೆ ತುಂಬಬೇಕು ಎಂದು ಸತೀಶ್ ಜಾರಕಿಹೊಳಿ ಅವರು ಪ್ರಮುಖ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಕಾಂಗ್ರೆಸ್ನಲ್ಲಿ ದಲಿತರ ಬಲ ಪ್ರದರ್ಶನಕ್ಕೆ ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶ ನಡೆಸಲು ಒಪ್ಪಿಗೆ ಸೂಚಿಸುವಂತೆಯೂ ಅವರು ಹೈಕಮಾಂಡ್ ನಾಯಕರಿಗೆ ಕೇಳಿಕೊಂಡಿದ್ದಾರಂತೆ.

ರಾಜ್ಯ ಕಾಂಗ್ರೆಸ್ನಲ್ಲಿ ಏನೆಲ್ಲ ಬೆಳವಣಿಗೆ ನಡೆಯುತ್ತಿದೆ ಎಂದು ನಾಯಕರಿಗೆ ಮಾಹಿತಿ ನೀಡಿದ್ದಾರೆ. ಸಿಎಂ ಬದಲಾವಣೆ ವಿಚಾರದಲ್ಲಿ ಏನೆಲ್ಲ ಚರ್ಚೆಗಳು ನಡೆಯುತ್ತಿವೆ ಎಂಬುದನ್ನೂ ಅವರು ವಿವರಿಸಿದ್ದಾರಂತೆ. ಮುಖ್ಯವಾಗಿ ರಾಜ್ಯ ಕಾಂಗ್ರೆಸ್ನಲ್ಲಿ ಇದೀಗ ದಲಿತ ನಾಯಕರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಮುಂದಿನ ಬಾರಿ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಗಳನ್ನು ಸಮುದಾಯಕ್ಕೆ ತಂದುಕೊಡಲು ಅವಿರತ ಪ್ರಯತ್ನ ನಡೆಸುತ್ತಿದ್ದಾರೆ.
ಇತ್ತೀಚೆಗೆ ಗೃಹಸಚಿವ ಜಿ.ಪರಮೇಶ್ವರ್ ಅವರು ಕೂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸುವ ಮೂಲಕ ಅಚ್ಚರಿ ಮೂಡಿಸಿದ್ದರು. ಬೆಂಗಳೂರಿನಲ್ಲಿ ನಡೆದ ಈ ಉಭಯ ನಾಯಕರ ಚರ್ಚೆಯಲ್ಲೂ ದಲಿತ ನಾಯಕರಿಗೆ ಪಕ್ಷದ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಮಹತ್ವದ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.

ಇಲ್ಲಿವರೆಗೆ ಸಿದ್ದರಾಮಯ್ಯ ಬಣ ಹಾಗೂ ಡಿಕೆ ಶಿವಕುಮಾರ್ ಬಣ ಎಂದು ಹೇಳಲಾಗುತ್ತಿತ್ತು. ಇದೀಗ ದಲಿತ ನಾಯಕರು ಕೂಡ ಒಗ್ಗಟ್ಟು ಪ್ರದರ್ಶನ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್ ದಲಿತ ನಾಯಕರು ಸಾಲು ಸಾಲಾಗಿ ದೆಹಲಿ ಕಡೆ ಹೋಗುತ್ತಿದ್ದಾರೆ. ಸತೀಶ್ ಜಾರಕಿಹೊಳಿ ಅವರ ಬಳಿಕ ಕೆ.ಎನ್.ರಾಜಣ್ಣ, ಎಚ್ಸಿ ಮಹದೇವಪ್ಪ ಸೇರಿದಂತೆ ಹಲವು ದಲಿತ ನಾಯಕರು ಹೈಕಮಾಂಡ್ ನಾಯಕ ಭೇಟಿಗೆ ಕಾಲಾವಕಾಶ ಕೇಳಿದ್ದಾರೆ ಎನ್ನಲಾಗಿದೆ.












Click it and Unblock the Notifications