ಎಸ್ಸಿ, ಎಸ್ಟಿ ಮಹಿಳೆಯರನ್ನು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿ: ಸಿಎಂ ಬೊಮ್ಮಾಯಿ
ಬೆಂಗಳೂರು, ಸೆ. 09: ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ಮಹಿಳೆಯರನ್ನು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಗುರುವಾರ ಟಾಟಾ ಸ್ಟೀಲ್ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಹಾಗೂ ನಡ್ಜ್ ಪ್ರತಿಷ್ಠಾನದ ಸದಸ್ಯರಾದ ಬಿ. ಮುತ್ತುರಾಮನ್ ಅವರ ನೇತೃತ್ವದ ನಿಯೋಗದೊಂದಿಗೆ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ.
ಅತಿ ಹೆಚ್ಚು ತಲಾ ಆದಾಯ ಹೊಂದಿರುವ ಐದು ರಾಜ್ಯಗಳ ಪೈಕಿ ಕರ್ನಾಟಕವೂ ಒಂದು. ಈ ಕೊಡುಗೆ ನೀಡುವುದು ಶೇ.30 ರಷ್ಟು ಮಹಿಳೆಯರು ಪರಿಶಿಷ್ಟ ಸಮುದಾಯದವರಾಗಿದ್ದು, ಕೌಶಲ್ಯವನ್ನು ಹೊಂದಿದವರಾಗಿದ್ದಾರೆ ಎಂದರು. ರಾಜ್ಯದಲ್ಲಿರುವ 7500 ಸ್ವಸಹಾಯ ಗುಂಪುಗಳನ್ನು ಆರ್ಥಿಕ ಚಟುವಟಿಕೆಗಲ್ಲಿ ತೊಡಗಿಸಬೇಕು ಎಂದು ತಿಳಿಸಿದರು. ನಡ್ಜ್ ಪ್ರತಿಷ್ಠಾನದ ಸಿ.ಇ.ಒ. ಅತುಲ್ ಸತೀಜಾ ಮಾತನಾಡಿ, ಬಡತನವನ್ನು ನಿವಾರಿಸುವ ಉದ್ದೇಶದಿಂದ ನಡ್ಜ್ ಸಂಸ್ಥೆಯನ್ನು ಸ್ಥಾಪಿಸಲಾಗಿದ್ದು, ಕರ್ನಾಟಕವೂ ಸೇರಿದಂತೆ ಭಾರತದಾದ್ಯಂತ ಬಡತನ ನಿವಾರಣೆ ಮತ್ತು ಜೀವನೋಪಾಯದ ಮೂಲಕ ದೊಡ್ಡ ಪ್ರಮಾಣದ ಸಾಮಾಜಿಕ ಪರಿವರ್ತನೆ ತರುವುದಾಗಿದೆ ಎಂದರು.
ಕಳೆದ 6 ವರ್ಷಗಳಲ್ಲಿ, ಕೌಶಲ್ಯ ಅಭಿವೃದ್ಧಿ, ಸಾಮಾಜಿಕ ಉದ್ಯಮಶೀಲತೆ ಮತ್ತು ಗ್ರಾಮೀಣ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ನಡ್ಜ್ ಸಂಸ್ಥೆಯನ್ನು ಬೆಂಗಳೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಕೌಶಲ್ಯಾಭಿವೃದ್ಧಿಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸಲು ಉತ್ಸುಕವಾಗಿರುವುದಾಗಿ ತಿಳಿಸಿದರು.

ನಡ್ಜ್ ಪ್ರತಿಷ್ಠಾನದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ವಿನೋದ್ , ಸಿ.ಇ.ಒ ಅತುಲ್ ಸತೀಜಾ, ಸುಧಾ ಶ್ರೀನಿವಾಸನ್, ಯೋಜನಾ ಹಾಗೂ ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
ಹಾರ್ಡವೇರ್ ಪಾರ್ಕ್ ನಿರ್ಮಾಣಕ್ಕೆ ನಿರ್ಧಾರ:
ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಬೆಂಗಳೂರು-ಕೋಲಾರ ಮಧ್ಯ ಭಾಗದಲ್ಲಿ ಹಾರ್ಡವೇರ್ ಪಾರ್ಕ್ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ಕೇಂದ್ರ ಐಟಿ-ಬಿಟಿ ಮತ್ತು ಕೌಶಲ್ಯ ಅಭಿವೃದ್ಧಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಭೇಟಿ ಮಾಡಿ ಈ ವಿಷಯದ ಕುರಿತು ಚರ್ಚೆ ಮಾಡಿದ್ದೇನೆ. ಈ ಯೋಜನೆ ಜಾರಿಗೆ ಅವರು ಆಸಕ್ತಿ ತೋರಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಡಿಜಿಟಲ್ ಸೌಲಭ್ಯ ಹಾಗೂ ಆಪ್ಟಿಕಲ್ ಫೈಬರ್ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಮಾತುಕತೆ ನಡೆಸಲಾಗಿದೆ ಎಂದು ಬೊಮ್ಮಾಯಿ ಹೇಳಿದರು.
ಈ ಕುರಿತಾಗಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಚರ್ಚೆ ನಡೆಸಿ ಮುಂದುವರೆಯಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಸ್ಕಿಲ್ ಯುನಿವರ್ಸಿಟಿ ಪ್ರಾರಂಭ ಮಾಡುವ ಉದ್ದೇಶವನ್ನು ಕೇಂದ್ರ ಸಚಿವರು ಹೊಂದಿದ್ದಾರೆ. ಎಲ್ಲರೂ ಸೇರಿ ಈ ಕುರಿತಾಗಿ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸೆಟಲೈಟ್ ಟೌನ್ ರಿಂಗ್ ರೋಡ್ (ದಾಬಸ್ ಪೇಟೆಯಿಂದ ಮೈಸೂರು ರೋಡ್ ವರೆಗೂ) ನಿರ್ಮಾಣ ಕಳೆದ ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಸದ್ಯ ಕೆಲ ತಿಂಗಳಲ್ಲಿ ಕೆಲಸ ಆರಂಭವಾಗಲಿದೆ ಎಂದು ಹೇಳಿದರು.
ಉತ್ತರ ಕರ್ನಾಟಕದ ವಿಜಯಪುರ- ಸಂಕೇಶ್ವರ್ ಹೈವೇ ಡಿಪಿಆರ್ ಆಗುತ್ತಿದ್ದು , ಎರಡನೇ ಹಂತದ ಭಾರತ ಮಾಲಾದ ಅಡಿಯಲ್ಲಿ ಇನ್ನೂ 5 ರಸ್ತೆ ಕಾಮಗಾರಿ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಅವರು ತಿಳಿಸಿದರು.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಸಂಬಂಧಪಟ್ಟಂತೆ ರೂ.400 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಇನ್ನು 1500 ಕೋಟಿ ರೂ. ಹಣ ಬಿಡುಗಡೆ ಆಗಬೇಕಿದೆ ಎಂದು ಹೇಳಿದರು.












Click it and Unblock the Notifications