ಎಸ್ಸಿ, ಎಸ್ಟಿ ಕಾಯ್ದೆ ಸಾರ್ವಜನಿಕ ಸ್ಥಳದಲ್ಲಿ ಅನ್ವಯ; ಹೈಕೋರ್ಟ್
ಬೆಂಗಳೂರು, ಡಿಸೆಂಬರ್ 13; ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯಿದೆಯಡಿ ಅಪರಾಧ ಕೃತ್ಯವು ಸಾರ್ವಜನಿಕ ಸ್ಥಳದಲ್ಲಿ ನಡೆದಿರಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ಅಲ್ಲದೆ, ಅದೇ ಕಾರಣಕ್ಕೆ ಕರ್ನಾಟಕ ಗಾಲ್ಪ್ ಅಸೋಸಿಯೇಷನ್ನ ನಾಲ್ವರು ಪದಾಧಿಕಾರಿಗಳ ವಿರುದ್ಧ ಮಾಜಿ ಸದಸ್ಯರೊಬ್ಬರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯಿದೆಯಡಿ ದಾಖಲಿಸಿದ್ದ ದೂರು ಹಾಗೂ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.
'ಅರ್ಜಿದಾರರು ಎಸಗಿದ್ದಾರೆನ್ನಲಾದ ಆರೋಪಗಳಿಗೆ ಸಂಬಂಧಿಸಿದ ಕೃತ್ಯ ಸಭಾ ಕೊಠಡಿಯಲ್ಲಿನಡೆದಿದೆ. ದೂರಿನ ಪ್ರಕಾರ ಅರ್ಜಿದಾರರಿದ್ದ ಕೊಠಡಿಗೆ ದೂರುದಾರರೇ ಹೋಗಿದ್ದಾರೆ. ಹಾಗಾಗಿ, ಸಭಾ ಕೊಠಡಿ ಜನರಿದ್ದ ಜಾಗ ಅಥವಾ ಸಾರ್ವಜನಿಕ ಸ್ಥಳವಲ್ಲ. ದೌರ್ಜನ್ಯ ತಡೆ ಕಾಯಿದೆಯಡಿಯ ಅಪರಾಧ ಕೃತ್ಯವು ಸಾರ್ವಜನಿಕ ಸ್ಥಳದಲ್ಲಿನಡೆದಿರಬೇಕು. ಇನ್ನೂ ಸಿಸಿಟಿವಿ ದೃಶ್ಯಗಳು ನೋಡಿದರೆ, ಅರ್ಜಿದಾರರು ದೂರುದಾರ ಮೇಲೆ ಯಾವುದೇ ನಿಂದನೆ ಮಾಡಿಲ್ಲವೆಂಬುದು ಸ್ಪಷ್ಟವಾಗಿದೆ' ಎಂದು ನ್ಯಾಯಪೀಠ ಹೇಳಿದೆ.

ಎ. ಎಂ. ಸುರೇಶ್ ರಾಜ್ ದಾಖಲಿಸಿದ್ದ ದೂರು ರದ್ದು ಕೋರಿ ಡಾ. ಎಂ. ಜಿ. ಭಟ್ ಸೇರಿ ಅಸೋಸಿಯೇಷನ್ನ ನಾಲ್ವರು ಪದಾಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ಧ ಏಕಸದಸ್ಯಪೀಠ ಈ ಆದೇಶ ಮಾಡಿದೆ.
ಅಜೀವ ಸದಸ್ಯತ್ವ ನೀಡದಿದ್ದರೆ ಬೆದರಿಕೆ: ಅಲ್ಲದೆ, ತಮಗೆ ಆಜೀವ ಸದಸ್ಯತ್ವ ನೀಡದೆ ಹೋದರೆ ದೌರ್ಜನ್ಯ ಪ್ರಕರಣ ದಾಖಲಿಸುವುದಾಗಿ ಅರ್ಜಿದಾರರಿಗೆ ದೂರುದಾರರೇ ಬೆದರಿಕೆ ಹಾಕಿದ್ದು ತಿಳಿದಿದೆ. ಸದಸ್ಯತ್ವದ ಅರ್ಜಿಯ ನಮೂನೆ ಪರಿಶೀಲಿಸಿದರೆ ಸದಸ್ಯರ ಜಾತಿ ಹೆಸರು ಕೇಳುವಂತಹ ಯಾವುದೇ ಕಾಲಂ ಇಲ್ಲ. ಪರಿಶಿಷ್ಟ ಜಾತಿಗೆ ಸೇರಿದ್ದೇನೆ ಎಂಬ ಕಾರಣಕ್ಕೆ ತನಗೆ ಸದಸ್ಯತ್ವ ನೀಡಿಲ್ಲವೆಂಬುದು ದೂರುದಾರರ ಕಲ್ಪನೆಯಾಗಿದೆ. ಆದ್ದರಿಂದ ಅರ್ಜಿದಾರರ ವಿರುದ್ಧ ಪ್ರಕರಣ ಮುಂದುವರಿಸುವುದು ಕಾನೂನು ಪ್ರಕ್ರಿಯೆ ದುರ್ಬಳಕೆಯಾಗಲಿದೆ ಎಂದು ತಿಳಿಸಿ ದೂರನ್ನು ರದ್ದುಪಡಿಸಿದೆ.
ಪ್ರಕರಣವೇನು?; ಎ. ಎಂ. ಸುರೇಶ್ ರಾಜ್ 2014ರಿಂದ ಅಸೋಸಿಯೇಷನ್ ತಾತ್ಕಾಲಿಕ ಸದಸ್ಯರಾಗಿದ್ದರು. 2019ರಲ್ಲಿನಡೆದ ಘಟನೆಯೊಂದರ ವಿಚಾರಣೆ ನಡೆಸಿ ಸುರೇಶ್ ರಾಜ್ ಸದಸ್ಯತ್ವವನ್ನು 2019ರ ಮಾ.13ರಂದು ಅಮಾನತುಪಡಿಸಲಾಗಿತ್ತು.
ಈ ನಡುವೆ 2008ರ ಸೆ.1ರಂದು ಅಸೋಸಿಯೇಷನ್ ಆಜೀವ ಸದಸ್ಯತ್ವ ಕೋರಿ ಅರ್ಜಿ ಸಲ್ಲಿಸಿದ್ದರು. 2020ರ ಅ.14ರಂದು ಆಜೀವ ಸದಸ್ಯತ್ವ ಪಡೆಯಲು ಅಗತ್ಯ ಮತಗಳನ್ನು ಪಡೆದಿಲ್ಲ ಎಂದು ತಿಳಿಸಿ ಸುರೇಶ್ ರಾಜ್ಗೆ ಅಸೋಸಿಯೇಷನ್ ಪತ್ರ ಬರೆದಿತ್ತು.
ಸುರೇಶ್ ರಾಜ್ ಸಭೆ ನಡೆಯುತ್ತಿದ್ದ ಕೊಠಡಿಗೆ ಏಕಾಏಕಿ ನುಗ್ಗಿ ಉಪನೋಂದಣಾಧಿಕಾರಿಗಳ ಆದೇಶವನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಬಳಿಕ ದೂರುದಾರರು ಜೀವನ್ ಭೀಮಾ ನಗರ ಪೊಲೀಸ್ ಠಾಣೆಗೆ ತೆರಳಿ, ಅರ್ಜಿದಾರರ ವಿರುದ್ಧ ಜೀವ ಬೆದರಿಕೆ, ಹಲ್ಲೆಮತ್ತು ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯಿದೆಯಡಿ ದೂರು ಸಲ್ಲಿಸಿದ್ದರು. ಆ ದೂರು ರದ್ದು ಕೋರಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.












Click it and Unblock the Notifications