ಡಿಸೆಂಬರ್ ಅಂತ್ಯದವರೆಗೂ ಶಾಲೆಗಳನ್ನು ತೆರೆಯುವುದಿಲ್ಲ: ಸರ್ಕಾರದ ಮಹತ್ವದ ತೀರ್ಮಾನ
ಬೆಂಗಳೂರು, ನವೆಂಬರ್ 23: ಈ ವರ್ಷದ ಅಂತ್ಯದವರೆಗೂ ಯಾವುದೇ ಶಾಲೆ, ಕಾಲೇಜುಗಳನ್ನು ತೆರೆಯುವುದಿಲ್ಲ ಎಂದು ರಾಜ್ಯ ಸರ್ಕಾರ ನಿರ್ಧರಿಸಿದೆ.
Recommended Video
ಶಾಲೆ ಆರಂಭದ ಬಗ್ಗೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸೋಮವಾರ ವಿಧಾನಸೌಧದಲ್ಲಿ ನಡೆದ ಸಭೆಯ ಬಳಿಕ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್, ಈ ಬಗ್ಗೆ ವಿವರಣೆ ನೀಡಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಶಾಲೆಗಳ ಆರಂಭದ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಂಡಿಲ್ಲ ಎಂಬ ಮಾಹಿತಿ ನೀಡಿದ್ದಾರೆ.
ಶಾಲಾ ಆರಂಭದ ಬಗ್ಗೆ ಸುಧೀರ್ಘ ಚರ್ಚೆ ನಡೆಸಿದ್ದೇವೆ. ಡಿಸೆಂಬರ್ನಲ್ಲಿ ಯಾವುದೇ ಶಾಲೆ ಅಥವಾ ಪದವಿಪೂರ್ವ ಕಾಲೇಜುಗಳನ್ನು ತೆರೆಯುವುದಿಲ್ಲ. ಕೊರೊನಾ ವೈರಸ್ ಎರಡನೇ ಅಲೆಯ ಬಗ್ಗೆ ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ವರ್ಷ 1 ರಿಂದ 8ನೇ ತರಗತಿಯವರೆಗಿನ ಮಕ್ಕಳಿಗೆ ಈ ವರ್ಷ ಶಾಲೆ ಆರಂಭಿಸುವ ಯೋಚನೆ ಇಲಾಖೆಗೆ ಇಲ್ಲ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಬಹಳ ಕಡಿಮೆ ಕೋವಿಡ್ ಪರಿಣಾಮ ಇರುವ ಜಿಲ್ಲೆಗಳಲ್ಲಿ ಶಾಲೆ ತೆರೆಯುವ ಅಭಿಪ್ರಾಯಕ್ಕೂ ತಜ್ಞರು ಅನುಮತಿ ನೀಡಿಲ್ಲ. ಡಿಸೆಂಬರ್ ಮೂರನೇ ವಾರದಲ್ಲಿ ಸಭೆ ಸೇರಿ ಅವಲೋಕನ ತೆಗೆದುಕೊಳ್ಳೋಣ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ ಎಂದು ಸುರೇಶ್ ಕುಮಾರ್ ಹೇಳಿದರು. ಮುಂದೆ ಓದಿ.

ಮಕ್ಕಳ ಹಿತಕ್ಕಾಗಿ ನಿರ್ಧಾರ
ಸಧ್ಯಕ್ಕೆ ಡಿಸೆಂಬರ್ ತಿಂಗಳಿನಲ್ಲಿ ಯಾವುದೇ ಶಾಲೆ-ಪದವಿಪೂರ್ವ ಕಾಲೇಜು ತೆರೆಯುವುದಿಲ್ಲ. ಶಾಲೆಗಳು ಮುಚ್ಚಿದ್ದರಿಂದ ಗ್ರಾಮೀಣ ಭಾಗದಲ್ಲಿ ಬಾಲಕಾರ್ಮಿಕ ಪದ್ದತಿ ಹೆಚ್ಚಿದೆ ಎಂಬ ಮಾಹಿತಿಯೂ ಬಂದಿದೆ. ಆದರೂ ಮಕ್ಕಳ ಹಿತ ಹಾಗೂ ಯೋಗಕ್ಷೇಮ ಗಮನದಲ್ಲಿಟ್ಟುಕೊಂಡು ಶಾಲೆ ಆರಂಭಿಸದೆ ಇರುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಮತ್ತೊಮ್ಮೆ ಸಭೆ ನಡೆಸಿ ತೀರ್ಮಾನ
ಡಿಸೆಂಬರ್ 3ನೇ ವಾರದಲ್ಲಿ ಮತ್ತೊಮ್ಮೆ ಎಲ್ಲ ಇಲಾಖೆಗಳು, ಸಿಎಂ ಯಡಿಯೂರಪ್ಪ ಅವರೊಂದಿಗೆ ಮತ್ತೆ ಸಭೆ ನಡೆಸಿ ಶಾಲೆ ಮತ್ತು ಕಾಲೇಜುಗಳ ಆರಂಭದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು. ವಿದ್ಯಾಗಮ ಕಾರ್ಯಕ್ರಮದ ಕುರಿತು ಕೂಡ ಈಗ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿಸಿದರು.

ಚಳಿ ಹೆಚ್ಚಿರುವುದರಿಂದ ಶಾಲೆ ಬೇಡ
ಡಿಸೆಂಬರ್ ತಿಂಗಳಲ್ಲಿ ಚಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಡಿಸೆಂಬರ್ನಲ್ಲಿ ಶಾಲೆ ಮತ್ತು ಕಾಲೇಜುಗಳನ್ನು ತೆರೆಯುವುದು ಬೇಡ ಎಂದು ಆರೋಗ್ಯ ಅಧಿಕಾರಿಗಳು ಸಲಹೆ ನೀಡಿದ್ದರು. ಚಂದನ ವಾಹಿನಿಯಲ್ಲಿ ಸುವೇಧಾ ಕಾರ್ಯಕ್ರಮ ಮುಂದುವರಿಯಲಿದೆ. ಒಂದನೇ ತರಗತಿಯಿಂದ ಪಿಯುಸಿವರೆಗೆ ಯಾವುದೇ ತರಗತಿ ಇರುವುದಿಲ್ಲ. ಸದ್ಯಕ್ಕೆ ಶಾಲೆ ಬೇಡ ಎಂದು ತಜ್ಞರು ಸಲಹೆ ನೀಡಿದ್ದಾರೆ.

ssls, puc ಪರೀಕ್ಷೆ
ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗುವುದು. ಈ ಸಂದರ್ಭದಲ್ಲಿ ಶಾಲೆ ತೆರೆಯುವುದು ಸಾಧ್ಯವಿಲ್ಲ. ಯಾವುದೇ ಸಂದರ್ಭದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಬಹುದು ಎಂದು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದರು. ಜೂನ್ನಲ್ಲಿ ಪರೀಕ್ಷೆಗೆ ಯೋಜನೆ ಮಾಡಲಾಗಿದೆ.












Click it and Unblock the Notifications