ತಪ್ಪಾಗಿ ಸ್ವಯಂ ಘೋಷಿತ ಆಸ್ತಿ ತೆರಿಗೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ದಂಡ ಬಡ್ಡಿಯಿಂದ ವಿನಾಯತಿ?
ಬೆಂಗಳೂರು, ಆ. 16: ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ನಗರ ಪ್ರದೇಶಗಳಲ್ಲಿ ಕಸದ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಪಾಲಿಕೆಗಳ ಆಯುಕ್ತರಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಖಡಕ್ ಆದೇಶ ಮಾಡಿದ್ದಾರೆ. ಪ್ರತ್ಯೇಕ ಸಭೆ ನಡೆಸಿರುವ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಬೆಂಗಳೂರಿನಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಡಿ ವಲಯ ವರ್ಗೀಕರಣವನ್ನು ತಪ್ಪಾಗಿ ಘೋಷಿಸಿಕೊಂಡು ದಂಡ ಮತ್ತು ದಂಡದ ಬಡ್ಡಿ ಸುಳಿಗೆ ಸಿಲುಕಿರುವ ಆಸ್ತಿ ಮಾಲೀಕರಿಗೆ ವಿನಾಯಿತಿ ಕೊಡಿಸುವ ಭರವಸೆಯನ್ನು ಕೊಟ್ಟಿದ್ದಾರೆ.
ಇಲಾಖೆ ಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ಮೊದಲ ಬಾರಿ ಬೈರತಿ ಬಸವರಾಜ ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಜೊತೆಗೆ ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಬಸವರಾಜ ಹಾಗೂ ಕಂದಾಯ ವಿಭಾಗದ ಜಂಟಿ ಆಯುಕ್ತ ವೆಂಕಟಾಚಲಪತಿ ಮುಂತಾದ ಅಧಿಕಾರಿಗಳೊಂದಿಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಪ್ರತ್ಯೇಕ ಸಭೆ ನಡೆಸಿದ್ದಾರೆ.
ಆಯಾ ಪಾಲಿಕೆ ಆಯುಕ್ತರಿಗೆ ಕಟ್ಟುನಿಟ್ಟಿನ ಸೂಚನೆ!
ರಾಜ್ಯದ ಎಲ್ಲಾ ಮಹಾನಗರಗಳ ಪಾಲಿಕೆ ಪ್ರದೇಶದ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ದೃಷ್ಟಿಯಿಂದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಮಹತ್ವದ ಆದೇಶ ಮಾಡಿದ್ದಾರೆ. ಆಯಾ ಪಾಲಿಕೆಗಳ ಆಯುಕ್ತರು ಪ್ರತಿ ದಿನ ಒಂದು ಗಂಟೆ ತಮ್ಮ ವ್ಯಾಪ್ತಿಯ ನಗರದಲ್ಲಿ ಸಂಚರಿಸುವ ಮೂಲಕ ಸ್ವಚ್ಚತಾ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಬೈರತಿ ಬಸವರಾಜ ಸೂಚಿಸಿದ್ದಾರೆ.
ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಅನುಷ್ಠಾನಕ್ಕೆ ಈಗಾಗಲೇ ಸರ್ಕಾರದ ಅನುಮೋದನೆ ದೊರೆತಿದ್ದು, ಆದಷ್ಟು ಬೇಗ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಯೋಜನೆಯನ್ನು ಕಾಲ ಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೀದಿ ದೀಪಗಳ ದುರಸ್ತಿ ಮತ್ತು ನಿರ್ವಹಣೆ ಸರಿಯಾಗಿ ಆಗಬೇಕು. ಹಲವು ಹೊಸ ಬಡಾವಣೆ, ಪ್ರದೇಶಗಳಲ್ಲಿ ಬೀದಿ ದೀಪಗಳು ಇಲ್ಲ ಎಂಬ ದೂರುಗಳು ಬಂದಿದ್ದು, ಅದನ್ನು ನಿವಾರಣೆ ಮಾಡಬೇಕು ಎಂದು ಬೈರತಿ ಬಸವರಾಜ ಕಟ್ಟುನಿಟ್ಟಿನ ಆದೇಶ ಮಾಡಿದ್ದಾರೆ.
ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್
ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಖಾಸಗಿ ಸ್ವತ್ತುಗಳ ಅಸ್ತಿ ತೆರಿಗೆಯನ್ನು ಸರಿಯಾಗಿ ಸಂದಾಯ ಆಗುವ ರೀತಿಯಲ್ಲಿ ನೋಡಿಕೊಳ್ಳಬೇಕು. ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ಜಾರಿ ಮಾಡುವ ಮೂಲಕ ವಸೂಲಿಗೆ ಮುಂದಾಗಬೇಕು. ಯಾವುದೇ ರೀತಿಯ ಒತ್ತಡಕ್ಕೆ ಮಣಿಯಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಾರ್ವಜನಿಕರಿಂದ ವ್ಯಾಪಕವಾಗಿ ದೂರುಗಳು ಬರುತ್ತಿದೆ. ಅವರ ಕುಂದುಕೊರತೆಗಳನ್ನು ನಿವಾರಿಸಲು ಮುಂದಾಗಬೇಕು. ಸ್ಥಳೀಯ ಸಮಸ್ಯೆಗಳು ವಿಧಾನಸೌಧದ ತಮ್ಮ ಕಚೇರಿಯವರೆಗೆ ಬರದ ಹಾಗೆ ಪಾಲಿಕೆ ಆಯುಕ್ತರು ಸ್ಥಳೀಯ ಮಟ್ಟದಲ್ಲಿ ಅದನ್ನು ಪರಿಹರಿಸಬೇಕು. ಸಂಬಂಧ ಕಲ್ಪಿಸುವ ಅಧಿಕಾರಿ ವರ್ಗದವರು ಸಾರ್ವಜನಿಕರಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಸ್ಪಂದಿಸದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ಸೂಚಿಸಿದ್ದಾರೆ.
ಲಾಕ್ಡೌನ್ ಕಾರಣಕ್ಕೆ ಆಸ್ತಿ ಮಾಲೀಕರಿಗೆ ಸಂಕಷ್ಟ
ಜೊತೆಗೆ ಬೆಂಗಳೂರಿನಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಡಿ ವಲಯ ವರ್ಗೀಕರಣವನ್ನು ತಪ್ಪಾಗಿ ಘೋಷಿಸಿಕೊಂಡು ದಂಡ ಮತ್ತು ದಂಡದ ಬಡ್ಡಿ ಕಟ್ಟಬೇಕಾಗಿರುವ ಆಸ್ತಿ ಮಾಲೀಕರಿಗೆ ವಿನಾಯಿತಿ ಕೊಡಿಸುವ ಭರವಸೆಯನ್ನು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಕೊಟ್ಟಿದ್ದಾರೆ. ಆಸ್ತಿ ಮಾಲೀಕರಿಗೆ ವಿನಾಯಿತಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸುವುದಾಗಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ.
"ಕೊರೊನಾ ವೈರಸ್ ಸಂಕಷ್ಟ, ಲಾಕ್ಡೌನ್ ಕಾರಣಕ್ಕೆ ಆಸ್ತಿ ಮಾಲೀಕರು ಸಂಕಷ್ಟಕ್ಕೆ ಗುರಿಯಾಗಿದ್ದು, ಇದೇ ವೇಳೆ ದಂಡ ಮತ್ತು ಬಡ್ಡಿಗೆ ಗುರಿಯಾಗಿದ್ದಾರೆ. ಹೀಗಾಗಿ ಕಷ್ಟದಲ್ಲಿರುವ ಆಸ್ತಿ ಮಾಲೀಕರಿಗೆ ರಿಯಾಯಿತಿ ನೀಡುವ ಬಗ್ಗೆ ಪರಿಶೀಲನೆ ಮಾಡುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ಸೂಚಿಸಿದ್ದೆ. ಆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ಅಗತ್ಯವಿದೆ" ಎಂದು ಹೇಳಿದ್ದಾರೆ.
Recommended Video
ಮುಖ್ಯಮಂತ್ರಿ ಜೊತೆ ಚರ್ಚಿಸಿ ಸಮಸ್ಯೆ ಪರಿಹಾರ!
ಈಗಾಗಲೇ ಮಲ್ಲೇಶ್ವರ ಮಾತ್ರವಲ್ಲದೆ, ನಗರದ ವಿವಿಧ ವಲಯಗಳ ಜನರು ತಮಗೆ ಮನವಿ ಕೊಟ್ಟಿದ್ದು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕಷ್ಟದಿಂದ ತಮ್ಮನ್ನು ಪಾರು ಮಾಡಬೇಕೆಂದು ಕೋರಿದ್ದಾರೆ. ಈ ಎಲ್ಲ ಅಂಶಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಬಿಬಿಎಂಪಿಯು ಆರು ವರ್ಷಗಳಿಂದ ಸಮರ್ಪಕವಾಗಿ ತೆರಿಗೆ ವಸೂಲಿ ಮಾಡದೇ ಬಿಟ್ಟಿದ್ದು ಲೋಪ. ಈಗ ಏಕಾಏಕಿ ದಂಡ-ಬಡ್ಡಿ ಒಟ್ಟಿಗೆ ವಿಧಿಸಿದರೆ ಜನರಿಗೆ ಕಷ್ಟವಾಗುತ್ತದೆ ಎಂದು ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ. ಸಭೆಯಲ್ಲಿ ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಬಸವರಾಜ ಹಾಗೂ ಕಂದಾಯ ವಿಭಾಗದ ಜಂಟಿ ಆಯುಕ್ತ ವೆಂಕಟಾಚಲಪತಿ ಮುಂತಾದ ಅಧಿಕಾರಿಗಳು ಇದ್ದರು.