ಐಎಎಸ್ ಅಧಿಕಾರಿ ಎಲ್. ಕೆ. ಅತೀಕ್ ವರ್ಗಾವಣೆ
ಬೆಂಗಳೂರು, ಮೇ 31; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಮುಗಿದು ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಿರೀಕ್ಷೆಯಂತೆ ಆಡಳಿತ ಯಂತ್ರದಲ್ಲಿ ಹಲವು ಬದಲಾವಣೆಗಳು ಆಗುತ್ತಿವೆ. ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆಯಾಗುತ್ತಿದೆ. ಹಿರಿಯ ಐಎಎಸ್ ಅಧಿಕಾರಿ ಎಲ್. ಕೆ. ಅತೀಕ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಸರ್ಕಾರ ಬುಧವಾರ 1991ನೇ ಬ್ಯಾಚ್ನ ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿ ಎಲ್. ಕೆ. ಅತೀಕ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಹಣಕಾಸು ಇಲಾಖೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ಅವರನ್ನು ನೇಮಿಸಲಾಗಿದೆ.

ಹಾಲಿ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಐಎಸ್ಎನ್ ಪ್ರಸಾದ್ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಅವರು ಜೂನ್ 30ರಂದು ನಿವೃತ್ತರಾಗಲಿದ್ದು, ಅವರ ಸ್ಥಾನಕ್ಕೆ ಎಲ್. ಕೆ. ಅತೀಕ್ ನೇಮಿಸಲಾಗಿದೆ. ಜೂನ್ 30ರಂದು ಅತೀಕ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಎಲ್. ಕೆ. ಅತೀಕ್ ಪ್ರಸ್ತುತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ. ಎಲ್. ಕೆ. ಅತೀಕ್ ಅದುವರೆಗೂ ಹಣಕಾಸು ಇಲಾಖೆ ವಿಶೇಷ ಕರ್ತವ್ಯಾಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಬಳಿಕ ಪ್ರಧಾನ ಕಾರ್ಯದರ್ಶಿಯಾಗಲಿದ್ದಾರೆ.

2022ರ ಮಾರ್ಚ್ನಲ್ಲಿ ಎಲ್. ಕೆ. ಅತೀಕ್ ಬಡ್ತಿ ಪಡೆದಿದ್ದರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದರು ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿಯೇ ಮುಂದುವರೆದಿದ್ದರು. ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಅವರು ಬಹಳ ಸಕ್ರಿಯರಾಗಿದ್ದು, ಗ್ರಾಮೀಣ ಬದುಕಿನ ಹಲವು ಚಿತ್ರಣಗಳನ್ನು ಹಂಚಿಕೊಳ್ಳುತ್ತಾರೆ.
1965ರಲ್ಲಿ ಜನಿಸಿದ ಎಲ್. ಕೆ. ಅತೀಕ್ 1991ರಲ್ಲಿ ಐಎಎಸ್ ಅಧಿಕಾರಿಯಾದರು. ಕೃಷಿ ಮತ್ತು ಅರ್ಥಶಾಸ್ತ್ರ ವಿಷಯದಲ್ಲಿ ಅವರು ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಮುಗಿದಿದ್ದು ಹೊಸದಾಗಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಸರ್ಕಾರ ಮುನ್ನಡೆಸುತ್ತಿದ್ದಾರೆ. ಪರಿಪೂರ್ಣ ಮಂತ್ರಿ ಮಂಡಲವೂ ರಚನೆಯಾಗಿದೆ.
ಹೊಸ ಸರ್ಕಾರ ಬಂದಾಗ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಸಹಜವಾಗಿದೆ. ಮಂಗಳವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆಯಾಗಿತ್ತು.
ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ವರ್ಗಾವಣೆಗೆ ಮಂಗಳವಾರ ಒಪ್ಪಿಗೆ ನೀಡಿತ್ತು. ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ (ಪ್ರ.) ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವಾ ನಿಯಮಗಳು-1) ಹೇಮಲತ ಜಿ. ಈ ಕುರಿತು ಆದೇಶ ಹೊರಡಿಸಿದ್ದರು.
ಸರ್ಕಾರಿ ನೌಕರರ ವರ್ಗಾವಣೆ ಕುರಿತಂತೆ ವಿಸ್ತ್ರತವಾದ ಮಾರ್ಗಸೂಚಿಗಳನ್ನು ಕೊಡಲಾಗಿದೆ. ಈ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಸದರಿ ಮಾರ್ಗಸೂಚಿಗಳಲ್ಲಿರುವ ಷರತ್ತುಗಳಿಗೊಳಪಟ್ಟು ಮಾಡಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿತ್ತು.
2023-24ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ/ ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6ರನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲು ಆದೇಶದಲ್ಲಿ ಒಪ್ಪಿಗೆ ನೀಡಲಾಗಿತ್ತು.
2023-24ನೇ ಸಾಲಿಗೆ ಗ್ರೂಪ್-ಎ, ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ/ ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6 ರಷ್ಟನ್ನು ಮೀರದಂತೆ ದಿನಾಂಕ 01/06/2023 ರಿಂದ ದಿನಾಂಕ 15/06/2023ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖೆ ಸಚಿವರಿಗೆ ಅಧಿಕಾರ ನೀಡಲಾಗಿದೆ.












Click it and Unblock the Notifications