Bhaskara Rao: ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರರಾವ್ ಏ.4ಕ್ಕೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ
ಬೆಂಗಳೂರು, ಏ. 03: ಬೆಂಗಳೂರು ಮೂಲದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರರಾವ್ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದು, ಸೋಮವಾರ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಲಿದ್ದಾರೆ.ಭಾರತೀಯ ಪೊಲೀಸ್ ಸೇವೆಗೆ ಸೇರಿದ್ದ ಭಾಸ್ಕರರಾವ್ ರೈಲ್ವೆ ಪೊಲೀಸ್ ಎಡಿಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. 2021 ರಲ್ಲಿ ಸ್ವಯಂ ನಿವೃತ್ತಿ ಬಯಸಿ 2021 ಸೆಪ್ಟೆಂಬರ್ನಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಸರ್ಕಾರ ಕಳೆದ ವಾರವಷ್ಟೇ ಭಾಸ್ಕರರಾವ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದು, ಇದೀಗ ರಾಜಕೀಯ ಭವಿಷ್ಯ ಅಗ್ನಿ ಪರೀಕ್ಷೆಗೆ ಇಳಿದಿದ್ದಾರೆ.
ನವ ದೆಹಲಿಯ ದೀನ್ ದಯಾಳ್ ಉಪಧ್ಯಾಯ ಮಾರ್ಗದಲ್ಲಿರುವ ಎಎಪಿ ಪಕ್ಷದ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ ಎಎಪಿ ಸೇರಲಿದ್ದಾರೆ. ದೆಹಲಿ ಸಿಎಂ ಅರವಿಂದ್ ಕ್ರೇಜಿವಾಲ್, ಎಎಪಿ ಹಿರಿಯ ಮುಖಂಡ ಮನೀಷ್ ಸಿಸೋಡಿಯಾ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ಖ್ಯಾತಿ ಗಳಿಸಿದ್ದ ಐಪಿಎಸ್ ಅಧಿಕಾರಿ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಸೇರ್ಪಡೆಯಾಗಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ಐಪಿಎಸ್ ಅಧಿಕಾರಿ ರೈಲ್ವೇ ಎಡಿಜಿಪಿ ಬಿ. ಭಾಸ್ಕರರಾವ್ ಸ್ವಯಂ ನಿವೃತ್ತಿ ಪಡೆದು ರಾಜಕೀಯ ಅಗ್ನಿ ಪರೀಕ್ಷೆಗೆ ಇಳಿದಿದ್ದಾರೆ. ಸ್ವಯಂ ನಿವೃತ್ತಿ ಬಯಸಿ ಭಾಸ್ಕರರಾವ್ ಅರ್ಜಿಯನ್ನು ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅಂಗೀಕರಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದ್ದರು. ಒಂದು ವಾರದ ಹಿಂದೆಷ್ಟೇ ರಾವ್ ಮನವಿ ಅಂಗೀಕರಿಸಿ ಸೇವೆಯಿಂದ ಬಿಡುಗಡೆ ಮಾಡಲಾಗಿದೆ.

ಹೊಸ ಪಯಣದ ಬಗ್ಗೆ ಭಾಸ್ಕರರಾವ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ನನ್ನ 32 ವರ್ಷಗಳ ಭಾರತೀಯ ಪೊಲೀಸ್ ಸೇವೆಗೆ ತೆರೆ ಎಳೆಯುತ್ತಿದ್ದೇನೆ. ನನ್ನ ಕುಟುಂಬಕ್ಕೆ, ಗೆಳೆಯರಿಗೆ, ಸಹೋದ್ಯೋಗಿಗಳಿಗೆ, ಹಿರಿಯ ಕಿರಿಯರಿಗೆ ಹಾಗೂ ಕರ್ನಾಟಕದ ಸರ್ಕಾರಕ್ಕೆ ಧನ್ಯವಾದ ಎಂದು ಟ್ವೀಟ್ ಮಾಡಿದ್ದರು. ಇದೀಗ ಆಮ್ ಆದ್ಮಿ ಸೇರ್ಪಡೆ ವಿಷಯ ಹೊರ ಬಿದ್ದಿದೆ.
ಯಾರು ಭಾಸ್ಕರರಾವ್?: ಬಿ. ಭಾಸ್ಕರರಾವ್ ಮೂಲತಃ ಬೆಂಗಳೂರಿನವರೇ. 1990 ರಲ್ಲಿ ಭಾರತೀಯ ಪೊಲೀಸ್ ಸೇವೆಗೆ ಸೇರ್ಪಡೆಯಾಗಿದ್ದರು. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಭಾಸ್ಕರ್ ರಾವ್ ಬೆಂಗಳೂರು ಕಮೀಷನರ್ ಅಗಿ ಒಂದು ವರ್ಷ ಸೇವೆ ಸಲ್ಲಿಸಿದ್ದು ವಿಶೇಷ. ಕರ್ನಾಟಕ ಸಶಸ್ತ್ರ ಮೀಸಲು ಪಡೆಯ ಎಡಿಜಿಪಿಯಾಗಿದ್ದ ಭಾಸ್ಕರರಾವ್ 2019 ಆ. 2 ರಂದು ಬೆಂಗಳೂರು ಪೊಲೀಸ್ ಕಮೀಷನರ್ ಆಗಿ ಅಧಿಕಾರ ಸ್ವೀಕರಿಸಿದ್ದರು. ಇದರ ಜತೆಗೆ ಆಂತರಿಕ ಭದ್ರತೆ, ರೈಲ್ವೇ ಎಡಿಜಿಪಿ ಸೇರಿದಂತೆ ಹಲವು ಹುದ್ದೆಗಳನ್ನು ಅಲಂಕರಿಸಿದ್ದರು. ಬೆಳಗಾವಿ ಪೊಲೀಸ್ ಕಮೀಷನರೇಟ್ ಆದ ಬಳಿಕ ಮೊದಲ ಕಮೀಷನರ್ ಆಗಿ ಭಾಸ್ಕರರಾವ್ ಸೇವೆ ಸಲ್ಲಿಸಿದ್ದರು.

ಮೊದಲೇ ರಾಜಕೀಯಕ್ಕೆ ಎಂಟ್ರಿ ಮಾತು: ಭಾಸ್ಕರರಾವ್ ಬೆಂಗಳೂರು ನಗರ ಪೊಲೀಸ್ ಆಯುಕ್ತ ಹುದ್ದೆಯಲ್ಲಿದ್ದಾಗಲೇ ಐಪಿಎಸ್ ನಿಂದ ಸ್ವಯಂ ನಿವೃತ್ತಿ ಪಡೆದು ರಾಜಕೀಯ ಸೇರುತ್ತಾರೆ ಎಂಬ ಮಾತು ಕೇಳಿ ಬರುತ್ತಿತ್ತು. ಅದರಲ್ಲಿ ಕಾಂಗ್ರೆಸ್ ಪಕ್ಷ ಸೇರುವ ಮೂಲಕ ಜಯನಗರ ಕ್ಷೇತ್ರದಿಂದ ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಎಂಬ ವಿಚಾರ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆನಾಂದಿ ಹಾಡಿತ್ತು.

ಕಾಂಗ್ರೆಸ್ನಲ್ಲಿ ಭವಿಷ್ಯವಿದೆಯಾ?: ಈಗಾಗಲೇ ರಾಮಲಿಂಗಾರೆಡ್ಡಿ ಅವರ ಪುತ್ರಿ ಜಯನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇನ್ನು ಬಿಜೆಪಿಗೆ ಸೇರಿದರೂ ಬಯಸಿದ ಕ್ಷೇತ್ರದಲ್ಲಿ ಟಿಕೆಟ್ ಸಿಗುವುದು ಕಷ್ಟ. ಕೆಲ ದಿನಗಳ ಹಿಂದಷ್ಟೇ ಹೊರ ಬಿದ್ದ ಪಂಚರಾಜ್ಯ ಚುನಾವಣೆ ಫಲಿತಾಂಶ ದೇಶದ ರಾಜಕೀಯ ದಿಕ್ಕಸೂಚಿಯನ್ನೇ ಬದಲಿಸಿತ್ತು. ಕಾಂಗ್ರೆಸ್ ನೆಲ ಕಚ್ಚಿದ್ದು, ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿತ್ತು. ಎಲ್ಲದಕ್ಕಿಂತೂ ಮಿಗಿಲಾಗಿ ಹೇಳುವ ವಿಚಾರವೆಂದರೆ ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿದಿದ್ದು. ರಾಷ್ಟ್ರೀಯ ಪಕ್ಷಗಳ ಬಗ್ಗೆ ಜನ ಬೇಸರಗೊಂಡಿದ್ದು, ಈ ಎಲ್ಲಾ ಬೆಳವಣಿಗೆ ನಡುವೆ ಭಾಸ್ಕರರಾವ್ ರಾಜಕೀಯ ಅಗ್ನಿ ಪರೀಕ್ಷೆ ಎದುರಿಸಲು ಆಮ್ ಆದ್ಮಿ ಆಯ್ಕೆ ಮಾಡಿಕೊಂಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಬೆಂಗಳೂರಿನಿಂದ ಭಾಸ್ಕರರಾವ್ ಆಮ್ ಅದ್ಮಿ ಪಕ್ಷ ಪ್ರತಿನಿಧಿಸಲಿದ್ದಾರೆ ಎಂದೇ ಹೇಳಲಾಗುತ್ತಿದೆ.












Click it and Unblock the Notifications