ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಕೋವಿಡ್ಗೆ ಬಲಿ; ಸಿಎಂ ಸಂತಾಪ
ಬೆಂಗಳೂರು, ಮೇ 14; ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ವಿಧಿವಶರಾಗಿದ್ದಾರೆ. ಕೋವಿಡ್ ಸೋಂಕು ತಗುಲಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
Recommended Video
ಶುಕ್ರವಾರ ಮಹದೇವ ಪ್ರಕಾಶ್ (65) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕೋವಿಡ್ ಸೋಂಕು ತಗುಲಿದ್ದ ಅವರು ಕಳೆದ 10 ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಸಹ ಮಹದೇವ ಪ್ರಕಾಶ್ ಕೆಲಸ ಮಾಡಿದ್ದರು. 'ಈ ಭಾನುವಾರ' ಎಂಬ ಪತ್ರಿಕೆಯ ಸಂಪಾದಕರಾಗಿದ್ದರು. ವಿವಿಧ ವಾಹಿನಿಗಳಲ್ಲಿ ರಾಜಕೀಯ ವಿಶ್ಲೇಷಣೆಯನ್ನು ಮಾಡುತ್ತಿದ್ದರು.

ಮಹದೇವ ಪ್ರಕಾಶ್ ನಿಧನಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಸಚಿವರಾದ ಜಗದೀಶ್ ಶೆಟ್ಟರ್, ಕೆ. ಎಸ್. ಈಶ್ವರಪ್ಪ, ಸಂಸದ ಡಿ. ಕೆ. ಸುರೇಶ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಸೇರಿದಂತೆ ಹಲವಾರು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.
ಖ್ಯಾತ ಲೇಖಕ, ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ನನ್ನ ಮಾಧ್ಯಮ ಸಲಹೆಗಾರರಾಗಿಯೂ ಅವರು ಕೆಲಸ ಮಾಡಿದ್ದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ.
— B.S. Yediyurappa (@BSYBJP) May 14, 2021
ಸಂಕ್ಷಿಪ್ತ ಪರಿಚಯ; ಮಹದೇವ ಪ್ರಕಾಶ್ 1975ರಲ್ಲಿ ಲೋಕವಾಣಿ ದಿನಪತ್ರಿಕೆ ಮೂಲಕ ಪತ್ರಿಕೋದ್ಯಮಕ್ಕೆ ಪಾದಾರ್ಪಣೆ ಮಾಡಿದ್ದರು. ವಿಜಯ ಕರ್ನಾಟಕದಲ್ಲಿ ಹೊರಳು ನೋಟ ಎಂಬ ಅಂಕಣ ಬರೆಯುತ್ತಿದ್ದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದಾಗ ಮಾಧ್ಯಮ ಸಲಹೆಗಾರರಾಗಿ ಕಾರ್ಯ ನಿರ್ವಹಣೆ ಮಾಡಿದ್ದರು. ಒಂದು ವರ್ಷದ ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಭಾನುವಾರ ಎಂಬ ಪತ್ರಿಕೆಯನ್ನು ಹೊರತರುತ್ತಿದ್ದರು.
ಬಿ. ಎಸ್. ಯಡಿಯೂರಪ್ಪ ಒಂದು ವರ್ಷದ ಆಡಳಿತದ ಕುರಿತು ದಣಿವರಿಯದ ಧೀಮಂತ ಎಂಬ ಹೊತ್ತಿಗೆಯನ್ನು ಹೊರತಂದಿದ್ದರು. ವಿವಿಧ ವಾಹಿನಿಗಳಲ್ಲಿ ರಾಜಕೀಯ ವಿಶ್ಲೇಷಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದರು.












Click it and Unblock the Notifications