ಹಿರಿಯ ಪತ್ರಕರ್ತ ಸೋಮಶೇಖರ್ ಯಡವಟ್ಟಿ ನಿಧನ
ಬೆಂಗಳೂರು , ಆಗಸ್ಟ್ 16 : ಕೊರೊನಾ ಸೋಂಕಿತರಾಗಿದ್ದ ಹಿರಿಯ ಪತ್ರಕರ್ತ ಸೋಮಶೇಖರ್ ಯಡವಟ್ಟಿ ನಿಧನ ಹೊಂದಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪತ್ರಕರ್ತರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಸೋಮಶೇಖರ್ ಯಡವಟ್ಟಿ (50) ಪ್ರಸ್ತುತ ಸಂಯುಕ್ತ ಕರ್ನಾಟಕ ದಿನ ಪತ್ರಿಕೆ ಮುಖ್ಯ ವರದಿಗಾರರಾಗಿದ್ದರು. ಕೊರೊನಾ ಸೋಂಕಿತರಾಗಿದ್ದ ಅವರು ಭಾನುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಧಾರವಾಡ ಮೂಲದ ಸೋಮಶೇಖರ್ ಯಡವಟ್ಟಿ ಈ ಟಿವಿ, ಕರುನಾಡ ಸಂಜೆ, ಉದಯವಾಣಿ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದರು. ಶುಕ್ರವಾರದ ತನಕ ಕೆಲಸ ಮಾಡಿದ್ದ ಅವರು ಕೆಮ್ಮು, ಜ್ವರ, ನೆಗಡಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೋಮಶೇಖರ್ ಯಡವಟ್ಟಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಸಿಎಂ ಸಂತಾಪ : ಪತ್ರಕರ್ತ ಸೋಮಶೇಖರ್ ಯಡವಟ್ಟಿ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸರಳ, ಸಜ್ಜನ ವ್ಯಕ್ತಿಯಾಗಿದ್ದ ಸೋಮಶೇಖರ್ ಯಡವಟ್ಟಿ ನಿಷ್ಪಕ್ಷಪಾತ, ವಸ್ತುನಿಷ್ಠ ವರದಿಗಾರಿಕೆಗೆ ಮಾದರಿಯಾಗಿದ್ದರು.
ಇತ್ತೀಚೆಗೆ ಸರ್ಕಾರ 1 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪತ್ರಿಕೆಗೆ ಸಂದರ್ಶನ ನೀಡಿದ್ದು ನನ್ನ ನೆನಪಿನಂಗಳದಲ್ಲಿ ಹಚ್ಚ ಹಸಿರಾಗಿದೆ. ಯಡವಟ್ಟಿ ಅವರ ನಿಧನದಿಂದ ಮಾಧ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟವುಂಟಾಗಿದೆ.
ಭಗವಂತ ಮೃತರ ಆತ್ಮಕ್ಕೆ ಶಾಂತಿಯನ್ನು ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.












Click it and Unblock the Notifications