ಕನ್ನಡದ ಸಾಹಿತಿ ನಾ. ಡಿಸೋಜ ನಿಧನ: ರಾಜಕೀಯ ಗಣ್ಯರಿಂದ ಸಂತಾಪ
ಬೆಂಗಳೂರು,ಜನವರಿ 06: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪರಸ್ಕೃತ, ಹಿರಿಯ ಸಾಹಿತಿ ನಾ ಡಿಸೋಜ ಅವರು ಭಾನುವಾರ (ಜನವರಿ 5) ಸಂಜೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಹಿರಿಯ ಸಾಹಿತಿ ನಾ ಡಿಸೋಜ ಅವರು ವಯೋಸಹಜ ಕಾಯಿಲೆಯಿಂದ ಅವರು ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇಂದು (ಜನವರಿ 6, ಸೋಮವಾರ) ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿರುವ ಅವರ ಸ್ವಗೃಹದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ ಎಂದು ಡಿಸೋಜ ಅವರ ಪುತ್ರ ನವೀನ್ ನಾ ಡಿಸೋಜ ಅವರು ಮಾಹಿತಿ ನೀಡಿದ್ದಾರೆ

ಸಾಹಿತ್ಯ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿರುವ ಡಿಸೋಜ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ, ಹಿರಿಯ ಸಾಹಿತಿ ನಾ ಡಿಸೋಜಾ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಸಾಹಿತ್ಯ ಕೃಷಿಯ ಜೊತೆಯಲ್ಲಿ ಪರಿಸರ ರಕ್ಷಣೆಯ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ನಾ.ಡಿಸೋಜಾ ಅವರು ಜನಪರ ಕಾಳಜಿಯ ಲೇಖಕ. ನಾ.ಡಿಸೋಜಾ ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಟ್ವಿಟ್ ಮಾಡಿದ್ದಾರೆ.
ನಾ.ಡಿಸೋಜ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ
ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಖ್ಯಾತ ಕನ್ನಡ ಸಾಹಿತಿ ಡಾ. ನಾ.ಡಿಸೋಜಾ ಅವರ ನಿಧನದ ಸುದ್ದಿ ತಿಳಿದು ಅತ್ಯಂತ ವೇದನೆಯಾಯಿತು. ಸರಳ ಸಜ್ಜನಿಕೆಯ ಬಹುಮುಖ ಪ್ರತಿಭೆಯ ಡಿಸೋಜಾ ಅವರು ಕನ್ನಡ ನಾಡು ಕಂಡ ಅಪರೂಪದ ಸಾಹಿತಿಯಾಗಿದ್ದರು. ಮಲೆನಾಡಿನ ಸೊಬಗನ್ನು ಮೈಗೂಡಿಸಿಕೊಂಡು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಶೈಲಿಯಿಂದ ಸರ್ವಜನರ ಹೃದಯವನ್ನು ತಟ್ಟಿ ಸಾಹಿತ್ಯ ಪ್ರೇಮಿಗಳಿಗೆ ಹಾಗೂ ಸಾಹಿತ್ಯದ ವಿದ್ಯಾರ್ಥಿಗಳಿಗೆ ಆದರ್ಶದ ಬೆಳಕಾಗಿದ್ದ ಅವರು ಜಾತಿ, ಮತ, ಧರ್ಮದ ಎಲ್ಲೆಯನ್ನು ಮೀರಿದ ಕನ್ನಡ ವಾಗ್ದೇವಿಯ ಸುಪುತ್ರರಾಗಿದ್ದರು.
ನಾಡು ಮೆಚ್ಚಿದ ಜನಮೆಚ್ಚಿದ ಸಾಹಿತಿಯಾಗಿ ನೈಜ ವೈಚಾರಿಕ ಪ್ರಜ್ಞೆಯ ಚಿಂತಕರಾಗಿ ಸರ್ವಧರ್ಮ ಸಮಭಾವದ ಪ್ರತಿಪಾದಕರಾಗಿ, ವಿಶ್ವಮಾನವತ್ವ ಮೈಗೂಡಿಸಿಕೊಂಡು ದಾರ್ಶನಿಕ ಸಾಹಿತಿಯಾಗಿದ್ದ ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.
ಪರಿಸರ ಕಾಳಜಿ, ಕನ್ನಡ ಕಳಕಳಿ ಅವರ ಆದ್ಯತೆಯಾಗಿತ್ತು, ತಮ್ಮ ಸಾಹಿತ್ಯದ ಮೂಲಕ ಸಾಮಾಜಿಕ ವ್ಯವಸ್ಥೆಗೆ ಚಿಕಿತ್ಸೆ ನೀಡಬೇಕೆನ್ನುವುದು ಅವರ ಅಭಿಲಾಷೆಯಾಗಿತ್ತು, ಈ ನಿಟ್ಟಿನಲ್ಲಿ ಅವರು ಇಟ್ಟ ಹೆಜ್ಜೆ ಗುರುತುಗಳು ಕನ್ನಡ ಸಾಹಿತ್ಯ ಪ್ರಪಂಚ ಇರುವವರಿಗೆ ಅಜರಾಮರ. ಅವರ ಅಗಲಿಕೆಯಿಂದ ಅವರ ಅಭಿಮಾನಿಗಳು ಹಾಗೂ ಕುಟುಂಬ ವರ್ಗದವರಿಗೆ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಿ ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ.
ಇನ್ನೂ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದು, ಕನ್ನಡ ಸಾರಸ್ವತ ಲೋಕದ ಬಹುದೊಡ್ಡ ಹೆಸರು, ಬಹುಮುಖ ಪ್ರತಿಭೆಯ ಬರಹಗಾರರು ಆಗಿದ್ದ ಡಾ.ನಾ ಡಿಸೋಜ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು.
ಆರು ದಶಕಗಳ ಕಾಲ ಕನ್ನಡ ಸಾಹಿತ್ಯಸಿರಿಯನ್ನು ಶ್ರೀಮಂತಗೊಳಿಸಿದ ಶ್ರೀಯುತರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿ ಅನೇಕ ಪ್ರತಿಷ್ಠಿತ ಗೌರವಗಳಿಗೆ ಪಾತ್ರರಾಗಿದ್ದಾರೆ. ಮಂಜಿನ ಕಾನು, ಈ ನೆಲ ಈ ಜಲ, ನೆಲೆ, ಗಾಂಧಿ ಬಂದರು, ದ್ವೀಪ, ಜೀವಕಳೆ, ಚೆನ್ನಮ್ಮ ಚೆನ್ನಮ್ಮಾಜಿ, ಒಡ್ಡು ಸೇರಿ 40ಕ್ಕೂ ಹೆಚ್ಚು ಕೃತಿಗಳನ್ನು ಬರೆದಿರುವ ಅವರ ಕೊಡುಗೆ ಅನನ್ಯ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.












Click it and Unblock the Notifications