ಹಂಗಾಮಿ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಗೆ ಹೈಕಮಾಂಡ್ ಬುಲಾವ್
ಬೆಂಗಳೂರು,ಡಿಸೆಂಬರ್ 12: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಹಂಗಾಮಿ ಸಭಾಪತಿ ರಘುನಾಥ ರಾವ್ ಮಲ್ಕಾಪುರೆ ಮತ್ತು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಮಧ್ಯೆ ಭಾರೀ ಪೈಪೋಟಿ ನಡೆಯುತ್ತಿರುವ ಬೆನ್ನೆಲ್ಲೆ, ಬಿಜೆಪಿ ವರಿಷ್ಠರಿಂದ ಬುಲಾವ್ ಮೇರೆಗೆ ರಘುನಾಥ ರಾವ್ ಮಲ್ಕಾಪುರೆ ದೆಹಲಿಗೆ ಪ್ರಯಾಣಿಸಿದ್ದಾರೆ.
ಬಿಜೆಪಿಯಲ್ಲಿ 2 ಬಾರಿ ಪ್ರಧಾನ ಕಾರ್ಯದರ್ಶಿ, ಯುವಮೋರ್ಚಾ ರಾಜ್ಯಾಧ್ಯಕ್ಷ ಆಗಿಯೂ ಕಾರ್ಯನಿರ್ವಹಿಸಿರುವ ಮಲ್ಕಾಪುರೆ ಪಕ್ಷದ ಹಿರಿಯ ಸದಸ್ಯರಾಗಿದ್ದಾರೆ. ಸದ್ಯ ಹಂಗಾಮಿ ಸಭಾಪತಿಯಾಗಿ ಜವಾಬ್ದಾರಿ ನಿರ್ವಹಣೆ ಮಾಡುತ್ತಿದ್ದಾರೆ. ಆದರೆ ಮತ್ತೊಂದು ಕಡೆ ಮಾತುಕೊಟ್ಟು ಬಸವರಾಜ ಹೊರಟ್ಟಿ ಅವರನ್ನು ಜೆಡಿಎಸ್ ನಿಂದ ಬಿಜೆಪಿಗೆ ಕರೆತರಲಾಗಿದ್ದು, ಬಿಜೆಪಿಗೆ ಬರುವ ಕಾರಣದಿಂದಲೇ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ ನೀಡಿದ್ದರು.
ಹೊರಟ್ಟಿ ಸ್ಥಾನಕ್ಕೆ ಹಂಗಾಮಿಯಾಗಿ ಮಲ್ಕಾಪುರೆ ಅವರನ್ನು ನೇಮಿಸಲಾಗಿದೆ. ಈಗ ಕೊಟ್ಟ ಮಾತಿನಂತೆ ಹೊರಟ್ಟಿಗೆ ಸಭಾಪತಿ ಸ್ಥಾನ ನೀಡಿ ಮಾತು ಉಳಿಸಿಕೊಳ್ಳುವ ಜವಾಬ್ದಾರಿ ರಾಜ್ಯ ಬಿಜೆಪಿ ನಾಯಕರ ಮೇಲಿದೆ. ಹಾಗಾಗಿ ಈ ವಿಚಾರದಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದು, ರಘುನಾಥ್ ರಾವ್ ಮಲ್ಕಾಪುರೆ ಜೊತೆ ಮಹತ್ವದ ಮಾತುಕತೆ ನಡೆಸಿ ಮನವೊಲಿಸುವ ಮೂಲಕ ಹೊರಟ್ಟಿ ಹಾದಿ ಸುಗಮ ಮಾಡಿಕೊಡಲಿದೆ ಎನ್ನಲಾಗ್ತಿದೆ.

ನವೆಂಬರ್ 19 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಡಿಸೆಂಬರ್ 21 ಕ್ಕೆ ಸಭಾಪತಿ ಚುನಾವಣೆ ನಿಗದಿ ಮಾಡಲಾಗಿದೆ. ಬಿಜೆಪಿ ನಾಯಕರ ಸೂಚನೆ ಮೇರೆಗೆ ಚುನಾವಣಾ ವೇಳಾಪಟ್ಟಿಯನ್ನು ಸರ್ಕಾರ ಪ್ರಕಟಿಸಿದ್ದು, ಇದಕ್ಕೆ ಮಲ್ಕಾಪುರೆ ಅಸಮಾಧಾನಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಮಲ್ಕಾಪುರೆ ಬದಲಾವಣೆಗೆ ಕುರುಬ ಸಮುದಾಯದ ನಾಯಕರ ತೀವ್ರ ವಿರೋಧ
ಹಂಗಾಮಿ ಸಭಾಪತಿ ಮಲ್ಕಾಪುರೆ ಬದಲಾವಣೆಗೆ ಕುರುಬ ಸಮುದಾಯದ ನಾಯಕರ ತೀವ್ರ ವಿರೋಧ ವ್ಯಕ್ತವಾಗಿದೆ. ಬಹಿರಂವಾಗಿಯೇ ಮಲ್ಕಾಪುರೆ ಬದಲಾವಣೆ ಮಾಡದಂತೆ ಆಗ್ರಹಿಸಿದ್ದಾರೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಯಾವುದೇ ಸಮುದಾಯದ ಅಸಮಾಧಾನ ಕಟ್ಟಿಕೊಳ್ಳಲು ಸಿದ್ಧರಿಲ್ಲದ ಬಿಜೆಪಿ ವರುಷ್ಠರು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸಲು ನಿರ್ಧರಿಸಿದ್ದಾರೆ. ಕುರುಬ ಮತ್ತು ಮೂಲ ಬಿಜೆಪಿ ನಾಯಕರ ಬೇಸರವನ್ನೂ ಪರಿಗಣಿಸಿ ಮನವೊಲಿಕೆ ಕಾರ್ಯ ನಡೆಸಲಿದ್ದಾರೆ ಎನ್ನಲಾಗಿದೆ.

ಪಕ್ಷನಿಷ್ಠ ರಘುನಾಥ್ ರಾವ್ ಮಲ್ಕಾಪುರೆ ಬದಲಾವಣೆ ಮಾಡುವುದಕ್ಕೆ ಪಕ್ಷ ನಿಷ್ಠ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. ಮೇಲ್ವರ್ಗದ ಬಸವರಾಜ್ ಹೊರಟ್ಟಿಗೆ ಸಂಪುಟದಲ್ಲಿ ಅವಕಾಶ ಕೊಡಿ. ಸಂವಿಧಾನಬದ್ಧ ಸಭಾಪತಿ ಸ್ಥಾನದಲ್ಲಿ ಮಲ್ಕಾಪುರೆ ಮುಂದುವರಿಸಿ ಎಂದು ಆಗ್ರಹಿಸಿದ್ದಾರೆ. ಈ ಹಿನ್ನೆಲೆ ಮಲ್ಕಾಪುರೆ ಜೊತೆ ವರಿಷ್ಠರು ಮಾತುಕತೆ ನಡೆಸಲಿದ್ದು, ಸಭಾಪತಿ ಸ್ಥಾನದ ಚುನಾವಣೆಯಲ್ಲಿ ಸುಗಮಗೊಳಿಸಲು ಹೈಕಮಾಂಡ್ ಮುಂದಾಗಿದ್ದು, ಮುಂದಿನ ವಿಧಾನಸಭಾ ಚುನಾವನೆಯಲ್ಲಿ ಪ್ರತಿಕೂಲ ಪರಿಣಾಮ ಆಗುವುದನ್ನ ತಡೆಯಲು ವರಿಷ್ಠರು ರಘುನಾಥ ರಾವ್ ಮಲ್ಕಾಪುರೆಯವರನ್ನ ಕರೆಸಿಕೊಂಡಿದ್ದಾರೆ ಎನ್ನಲಾಗಿದೆ.












Click it and Unblock the Notifications