ಲಿಂಗಾಯತ ಪ್ರತ್ಯೇಕ ಧರ್ಮ : ಟ್ವಿಟರ್ನಲ್ಲಿ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ಅಕ್ಟೋಬರ್ 21 : 'ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು. ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಹಸ್ತಕ್ಷೇಪ ಮಾಡಿ ತಪ್ಪು ಮಾಡಿದೆವು' ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ಈ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದೆ.
ತಮ್ಮ ಹೇಳಿಕೆ ಬಗ್ಗೆ ವ್ಯಾಪಕ ಚರ್ಚೆ ಆರಂಭವಾದ ಬಳಿಕ ಸ್ಪಷ್ಟೀಕರಣ ನೀಡಿದ್ದ ಡಿ.ಕೆ.ಶಿವಕುಮಾರ್ ಅವರು, 'ಇದರಲ್ಲಿ ನಾವು ಹಸ್ತಕ್ಷೇಪ ಮಾಡಬಾರದಿತ್ತು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ನನ್ನ ಆತ್ಮಸಾಕ್ಷಿಯ ಅಭಿಪ್ರಾಯ. ಅದನ್ನು ನಾನು ಹೇಳಿದ್ದೆನೆ' ಎಂದು ಹೇಳಿದ್ದರು.
ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕಾಂಗ್ರೆಸ್ ಪಕ್ಷದ ನಾಯಕರಾದ ಎಂ.ಬಿ.ಪಾಟೀಲ್, ವಿನಯ್ ಕುಲಕರ್ಣಿ ಸೇರಿದಂತೆ ಹಲವು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಡಿ.ಕೆ.ಶಿವಕುಮಾರ್ ಅವರ ತನ್ನ ಹೇಳಿಕೆಗೆ ಬದ್ಧ ಎಂದು ಹೇಳುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಮೌನ ಮುರಿದಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಅವರು ಟ್ವೀಟ್ ಮಾಡಿದ್ದಾರೆ.....
|
ಸಿದ್ದರಾಮಯ್ಯ ಟ್ವೀಟ್ ಏನು?
ಸ್ವತಂತ್ರ ಲಿಂಗಾಯತ ಧರ್ಮ ಅದು ನನ್ನೊಬ್ಬನ ತೀರ್ಮಾನವಲ್ಲ. ಅದಕ್ಕೆ ಈಗಲೂ ನಾನು ಬದ್ಧನಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಆರ್.ಅಶೋಕ ಹೇಳಿದ್ದೇನು?
ಬಿಜೆಪಿ ನಾಯಕ ಆರ್.ಅಶೋಕ ಅವರು ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಮಾತನಾಡಿದ್ದು, 'ಕಾಂಗ್ರೆಸ್ನ ಪರಿಸ್ಥಿತಿ ಅದ್ವಾನವಾಗಿ ಹೋಗಿದೆ. ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ಜಾತಿ ಒಡೆದಿದ್ದಾರೆ ಎಂದು ಅವರ ಪಕ್ಷದ ಮುಖಂಡರೇ ಹೇಳಿದ್ದಾರೆ. ಜಾತಿ ಒಡೆದರು ಎಂಬ ಹಣೆಪಟ್ಟಿ ಸಿದ್ದರಾಮಯ್ಯಗೆ ಬಂದಿದೆ. ಈ ಹಣೆಪಟ್ಟಿ ಅವರು ಸಾಯೋವರೆಗೂ ಹೋಗಲ್ಲ' ಎಂದು ಹೇಳಿದರು.

ಡಿ.ಕೆ.ಶಿವಕುಮಾರ್ ಪಶ್ಚಾತಾಪ ಪಟ್ರೆ ಸಾಕಾಗಲ್ಲ
'ಬರೀ ಡಿ.ಕೆ.ಶಿವಕುಮಾರ್ ಅವರು ಪಶ್ಚಾತಾಪ ಪಟ್ರೆ ಸಾಕಾಗಲ್ಲ. ಕಾಂಗ್ರೆಸ್ ಪಕ್ಷದ ಎಲ್ಲರೂ ಪಶ್ಚಾತಾಪ ಪಡಬೇಕು. ಆಗ ಮಾತ್ರ ಕಾಂಗ್ರೆಸ್ ಮತ್ತು ದೇಶಕ್ಕೆ ಒಳ್ಳೆದಾಗತ್ತೆ. ಕಳೆದ ನಾಲ್ಕು ದಶಕದಿಂದ ಕಾಂಗ್ರೆಸ್ ಹಿಂದೂ ಧರ್ಮವನ್ನು ಒಡೆಯುವ ಕೆಲಸವನ್ನು ಮಾಡುತ್ತಾ ಬಂದಿದೆ. ಇನ್ನು ಮುಂದೆಯಾದರೂ ಹಿಂದೂಗಳ ವಿರುದ್ಧ ಮುಸ್ಲಿಂಮರನ್ನು ಎತ್ತಿ ಕಟ್ಟುವುದನ್ನು ಬಿಡಲಿ' ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಎಂ.ಬಿ.ಪಾಟೀಲ್ ಹೇಳಿದ್ದೇನು?
'ಲಿಂಗಾಯತ ಸ್ವತಂತ್ರ ಧರ್ಮ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ನಾನು ಈಗಾಗಲೇ ಪ್ರತಿಕ್ರಿಯೆ ನೀಡಿದ್ದೇನೆ. ಪಕ್ಷದ ಮುಖಂಡರ ಜೊತೆ ಚರ್ಚಿಸುತ್ತೇನೆ. ಶಾಮನೂರು ಶಿವಶಂಕರಪ್ಪ ಅವರು ಹಿರಿಯರು. ಅವರಿಗೆ ಅರೆವು ಮರೆವು ಆಗಿದೆ. ಅದಕ್ಕೆ ಈ ರೀತಿ ಮಾತನಾಡುತ್ತಿದ್ದಾರೆ' ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.












Click it and Unblock the Notifications