ಪ್ರತ್ಯೇಕ ರಾಜ್ಯ: ಆಗಸ್ಟ್ 2ರಂದು ಉತ್ತರ ಕರ್ನಾಟಕ ಬಂದ್
ಬೆಂಗಳೂರು, ಜು.25: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕು ಎಂದು ಒತ್ತಾಯಿಸಿ ಆ.2ರಂದು ಉತ್ತರ ಕರ್ನಾಟಕ ಭಾಗದ 13 ಜಿಲ್ಲೆಗಳಲ್ಲಿ ಬಂದ್ಗೆ ಕರೆ ನೀಡಲಾಗಿದೆ.
ಈ ಕುರಿತು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ್ ಮಾತನಾಡಿ, ಈ ಸಾಲಿ ಬಜೆಟ್ನಲ್ಲಿ ಕುಮಾರಸ್ವಾಮಿಯವರು ಉತ್ತರ ಕರ್ನಾಟಕ ಭಾಗವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ, ನಮಗೆ ಯಾವುದೇ ಯೋಜನೆಗಳು, ಪೂರಕವಾದ ಕೆಲಸವಾಗದೆ ಹಿನ್ನೆಲೆಯಲ್ಲಿ ನಮ್ಮ ಬಗ್ಗೆ ಕಾಳಜಿ ವಹಿಸುವ ಪ್ರತ್ಯೇಕ ರಾಜ್ಯವನ್ನು ನಾವು ಮಾಡಿಯೇ ತೀರುತ್ತೇವೆ ಎಂದು ಹೇಳಿದ್ದಾರೆ.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಎಬ್ಬಿಸಿದ ಆರ್.ಬಿ.ತಿಮ್ಮಾಪೂರ
ಹಿಂದಿನಿಂದಲೂ ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಲಾಗಿದೆ. ಹಾಗಾಗಿ ನಾವು ಪ್ರತ್ಯೇಕ ರಾಜ್ಯ ಮಾಡಬೇಕೆಂದು ಒತ್ತಾಯಿಸುತ್ತಿದ್ದೇವೆ. ಬಂದ್ ದಿನ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಈ ಮೊದಲು ಶಾಸಕರಾದ ಉಮೇಶ್ ಕತ್ತಿ, ಎ.ಎಸ್.ಪಾಟೀಲ್ ನಡಹಳ್ಳಿ, ಶ್ರೀರಾಮುಲು ಕೂಡ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯಿಸಿದ್ದರು. ಇದೀಗ ಆ ಭಾಗದ ಹಲವಾರು ಸಂಘಟನೆಗಳೂ ಕೂಡ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯಿಸಿ ಬಂದ್ಗೆ ಕರೆ ನೀಡಿವೆ.
ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ನಿರಂತರವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ನಿರ್ಲಕ್ಷ್ಯ ಮಾಡುತ್ತಲೇ ಬರಲಾಗಿದೆ ಎಂದು ಆರೋಪಿಸಿದರು.ಆ.2 ರಂದು ಉತ್ತರ ಕರ್ನಾಟಕ ಭಾಗದ 13 ಜಿಲ್ಲೆಗಳಲ್ಲಿ ಬಂದ್ಗೆ ಕರೆ ನೀಡಿದ್ದೇವೆ. ಇದಕ್ಕೆ ಉತ್ತರ ಕರ್ನಾಟಕ ರೈತ ಸಮಿತಿ, ಕನ್ನಡಪರ ಸಂಘಟನೆಗಳು, ವಿದ್ಯಾರ್ಥಿಗಳ ಒಕ್ಕೂಟ, ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿವೆ ಎಂದು ಹೇಳಿದರು.