ಸೆ.26ರ ಕರ್ನಾಟಕ ಬಂದ್ : ವಾಟಾಳ್ ನಾಗರಾಜ್ ಸಂದರ್ಶನ
ಬೆಂಗಳೂರು, ಸೆಪ್ಟೆಂಬರ್ 23 : ಕಳಸಾ-ಬಂಡೂರಿ ನಾಲಾ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಸೆ.26ರ ಶನಿವಾರ ಕನ್ನಡ ಒಕ್ಕೂಟ ಕರ್ನಾಟಕ ಬಂದ್ಗೆ ಕರೆ ನೀಡಿದೆ. ಜೆಡಿಎಸ್ ಪಕ್ಷ ಮತ್ತು 1000ಕ್ಕೂ ಅಧಿಕ ಸಂಘಟನೆಗಳು ಈ ಬಂದ್ಗೆ ಬೆಂಬಲ ನೀಡಿವೆ.
ಮಹಾದಾಯಿ ನದಿ ನೀರನ್ನು ಬಳಸಿಕೊಂಡು ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದೇ ಮಹಾದಾಯಿ ಅಥವ ಕಳಸಾ-ಬಂಡೂರಿ ಯೋಜನೆ. ಈ ಯೋಜನೆಗೆ ಗೋವಾ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಇದನ್ನು ಖಂಡಿಸಿ ಉತ್ತರ ಕರ್ನಾಟಕ ಭಾಗದಲ್ಲಿ ಎರಡು ತಿಂಗಳಿನಿಂದ ಪ್ರತಿಭಟನೆಗಳು ನಡೆಯುತ್ತಿವೆ. [ಸೆ.26ರ ಬಂದ್ ಗೆ ಜೆಡಿಎಸ್ ಬೆಂಬಲ]
ಕಳಾಸಾ ಬಂಡೂರಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ಸಭೆ ಕರೆಯಬೇಕು ಎಂದು ಕರ್ನಾಟಕದ ಸರ್ವಪಕ್ಷ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆಲವು ದಿನಗಳ ಹಿಂದೆ ಭೇಟಿ ಮಾಡಿತ್ತು. ಆದರೆ, ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸಂದನೆ ಸಿಕ್ಕಿಲ್ಲ. [ಏನಿದು ಕಸಳಾ-ಬಂಡೂರಿ ಯೋಜನೆ]
ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕನ್ನಡ ಒಕ್ಕೂಟ ಸೆ.26 ರ ಶನಿವಾರ ಕರ್ನಾಟಕ ಬಂದ್ಗೆ ಕರೆ ನೀಡಿವೆ. ಈ ಬಂದ್ ಏಕೆ?, ಏನು? ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಒನ್ ಇಂಡಿಯಾ ಕನ್ನಡದ ಜೊತೆ ಮಾತನಾಡಿದ್ದಾರೆ. ಸಂದರ್ಶನದ ವಿವರಗಳು ಚಿತ್ರಗಳಲ್ಲಿ....

ಸೆ.26 ಶನಿವಾರದ ಕರ್ನಾಟಕ ಬಂದ್ ಏಕೆ?
ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಒತ್ತಾಯಿಸಿ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಮೇಕೆದಾಟು ಮತ್ತು ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಒತ್ತಾಯಿಸಿ ಈ ಬಂದ್. ಕರ್ನಾಟಕ ಸರ್ಕಾರ ಮೂರು ದಿನಗಳ ವಿಶೇಷ ವಿಧಾನಸಭೆ ಅಧಿವೇಶನ ಕರೆದು ಕಳಸಾ ಬಂಡೂರಿ, ಮೇಕೆದಾಟು ಯೋಜನೆ ಕುರಿತು ತನ್ನ ನಿಲುವನ್ನು ಪ್ರಕಟಿಸಬೇಕು ಎಂಬುದು ನಮ್ಮ ಬೇಡಿಕೆ. ಹಾಗೆಯೇ, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಕುರಿತು ಶ್ವೇತ ಪತ್ರವನ್ನು ಹೊರಡಿಸಬೇಕು ಎಂಬುದು ಒತ್ತಾಯವಾಗಿದೆ.

ಸಂಪೂರ್ಣ ಕರ್ನಾಟಕ ಬಂದ್ ಆಗಲಿದೆಯೇ?
ಸೆ.26ರ ಶನಿವಾರ ಕರ್ನಾಟಕ ಬಂದ್ ಆಗುವುದು ಖಚಿತ. ಬೀದರ್ನಿಂದ ಚಾಮರಾಜನಗರದ ತನಕ ಸಂಪೂರ್ಣ ಬಂದ್ ಆಗಲಿದೆ. ಕನ್ನಡ ಒಕ್ಕೂಟದ ಕಾರ್ಯಕರ್ತರು ಪ್ರತಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಯಲಿದೆ.

ಎಷ್ಟು ಸಂಘಟನೆಗಳ ಬೆಂಬಲ ನೀಡಿವೆ?
ಕನ್ನಡ ಒಕ್ಕೂಟ ಕರೆ ನೀಡಿರುವ ಕರ್ನಾಟಕ ಬಂದ್ಗೆ ಲಾರಿ, ಬಸ್ಸು, ಆಟೋ, ಚಿತ್ರರಂಗ ಸೇರಿದಂತೆ 1000ಕ್ಕೂ ಅಧಿಕ ಸಂಘಟನೆಗಳು ಬೆಂಬಲ ನೀಡಿವೆ. ಆದ್ದರಿಂದ ಸಂಪೂರ್ಣ ಕರ್ನಾಟಕ ಬಂದ್ ಆಗಲಿದೆ. ಜನರು ಸಹ ಸ್ವಯಂ ಪ್ರೇರಿತವಾಗಿ ಬಂದ್ಗೆ ಬೆಂಬಲ ನೀಡಬೇಕು.

ಬಂದ್ ದಿನ ಆಟೋ, ಬಸ್ಸು ಸಂಚಾರ ಇರೋದಿಲ್ವಾ?
ಶನಿವಾರ ಬಂದ್, ಸಂಪೂರ್ಣ ಬಂದ್. ಬಸ್ಸು, ಆಟೋಗಳು ಸಂಚಾರ ನಡೆಸುವುದಿಲ್ಲ. ಆದ್ದರಿಂದ, ಸಾರಿಗೆ ಸಂಪರ್ಕ ಸ್ಧಗಿತಗೊಳ್ಳಲಿದೆ. ಸಂಜೆ 6 ಗಂಟೆಯ ತನಕ ಸಂಚಾರ ಸ್ಥಗಿತಗೊಳ್ಳುವುದರಿಂದ ಜನರು ಮನೆಯಲ್ಲಿಯೇ ಇರಬೇಕು ಎಂದು ಮನವಿ ಮಾಡುತ್ತಿದ್ದೇವೆ. ಬೆಂಗಳೂರು ಮತ್ತು ವಿವಿಧ ಜಿಲ್ಲೆಗಳಲ್ಲಿ ಆಟೋ ಸಂಘಟನೆಗಳು ನಮ್ಮ ಬಂದ್ ಕರೆಗೆ ಬೆಂಬಲ ನೀಡಿವೆ.

ನಿಮ್ಮ ಪ್ರತಿಭಟನೆ ಯಾರ ವಿರುದ್ಧ?
ಕರ್ನಾಟಕ ಬಂದ್ ಗೋವಾ ಸರ್ಕಾರ ವಿರುದ್ಧ. ಕಳಸಾ ಬಂಡೂರಿ ಯೋಜನೆ ವಿರೋಧಿಸುತ್ತಿರುವ ಗೋವಾ ಸರ್ಕಾರದ ವಿರುದ್ಧ ನಮ್ಮ ಪ್ರತಿಭಟನೆ. ಕುಡಿಯುವ ನೀರಿಗಾಗಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ತಕ್ಷಣ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಲಾಗುತ್ತದೆ. ಕರ್ನಾಟಕ ಸರ್ಕಾರವೂ ಯೋಜನೆ ಬಗ್ಗೆ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂಬುದು ನಮ್ಮ ಬೇಡಿಕೆ.

ಕರ್ನಾಟಕ ಬಂದ್ ಬಗ್ಗೆ ಜನರಿಗೆ ನಿಮ್ಮ ಮನವಿ ಏನು?
ಸೆ.26 ರ ಕರ್ನಾಟಕ ಬಂದ್ ಕನ್ನಡಿಗರ ಶಕ್ತಿ ಪ್ರದರ್ಶನವಾಗಬೇಕು. ಕಳಸಾ ಬಂಡೂರಿ ಯೋಜನೆ ವಿರೋಧಿಸುತ್ತಿರುವ ಗೋವಾ ಸರ್ಕಾರಕ್ಕೆ ನಮ್ಮ ಶಕ್ತಿ ಏನೆಂದು ತೋರಿಸಬೇಕು. ಆದ್ದರಿಂದ, ಜನರು ಶಾಂತಿಯುತವಾಗಿ ಬಂದ್ಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡುತ್ತೇವೆ. ಬೆಂಗಳೂರಿನಲ್ಲಿ ಜಾಗೃತಿ ಜಾಥಾ ನಡೆಸಿ ಬಂದ್ ಬೆಂಬಲ ನೀಡುವಂತೆ ಜನರಿಗೆ ಮಾಹಿತಿ ನೀಡಲಾಗುತ್ತಿದೆ.

ಯಾವ ಸೇವೆಗಳಿಗೆ ಬಂದ್ನಿಂದ ವಿನಾಯ್ತಿ ಇದೆ?
ಸಂಪೂರ್ಣ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಸರ್ಕಾರಿ ಮತ್ತು ಖಾಸಗಿ ಬಸ್ ಸೇವೆ ಸ್ಥಗಿತಗೊಳ್ಳಲಿದೆ. ವ್ಯಾಪಾರಿಗಳು ಮತ್ತು ಹೋಟೆಲ್ ಮಾಲೀಕರಿಗೆ ಬಂದ್ಗೆ ಸ್ವಯಂ ಪ್ರೇರಿತವಾಗಿ ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ. ಆಸ್ಪತ್ರೆ, ಹಾಲು, ಔಷಧ, ಆಂಬ್ಯುಲೆನ್ಸ್, ಮಾಧ್ಯಮಗಳ ವಾಹನಗಳಿಗೆ ಬಂದ್ನಿಂದ ವಿನಾಯಿತಿ ನೀಡಲಾಗುತ್ತದೆ.












Click it and Unblock the Notifications