ಮುರುಘಾ ಮಠದಲ್ಲಿ ಸರಣಿ ಅಪರಾಧ ಕೃತ್ಯ: ಹೈಕೋರ್ಟ್ಗೆ ಹೇಳಿಕೆ
ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಚಿತ್ರದುರ್ಗದ ಮುರುಘಾ ಮಠದಲ್ಲಿ ಸರಣಿ ಅಪರಾಧಗಳು ನಡೆದಿವೆ ಎಂದು ಕರ್ನಾಟಕ ಹೈಕೋರ್ಟ್ಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರು, ಮಾರ್ಚ್ 03; ಚಿತ್ರದುರ್ಗದ ಮುರುಘಾ ಮಠದಲ್ಲಿ ಸರಣಿ ಅಪರಾಧಗಳು ನಡೆದ ಸರಮಾಲೆಯೇ ಇದೆ ಎಂಬುದು ತನಿಖಾಧಿಕಾರಿಗಳಿಗೆ ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗೆಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಕರ್ನಾಟಕ ಹೈಕೋರ್ಟ್ಗೆ ಮಾಹಿತಿ ನೀಡಿದ್ದಾರೆ. ಸರಣಿ ಅಪರಾಧಗಳ ಕಾರಣದಿಂದಾಗಿ ಆರೋಪ ಪಟ್ಟಿಯಲ್ಲಿ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆಯನ್ನೂ ಅಡಕಗೊಳಿಸಲಾಗಿದೆ. ಹೀಗಾಗಿಯೇ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪೀಠಾಧಿಪತಿ ಶಿವಮೂರ್ತಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿದೆ ಎಂದೂ ಸಹ ಅವರು ವಿವರಿಸಿದರು.
ಎಸ್ಜೆಎಂ ವಿದ್ಯಾಪೀಠದ ಅಧ್ಯಕ್ಷ ಎಚ್. ಎಂ. ವಿಶ್ವನಾಥ್ ಮತ್ತು ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯಪೀಠ ವಿಚಾರಣೆ ನಡೆಸಿತು. ಆಗ ವಿಚಾರಣೆಗೆ ಹಾಜರಾದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿರುವ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ ಸರಿ ಇದೆ ಎಂದು ಸಮರ್ಥಿಸಿಕೊಂಡರು.

'ಧಾರ್ಮಿಕ ಸಂಸ್ಥೆಗಳಲ್ಲಿ ಸರಣಿಯೋಪಾದಿಯಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂದಾಗ ಮಾತ್ರವೇ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ ಅನ್ವಯಿಸಲು ಸಾಧ್ಯ ಎಂಬ ಅರ್ಜಿದಾರರ ವಾದ ತಿರಸ್ಕರಿಸಿದರು. ಈ ಕಾಯ್ದೆಯನ್ನು ಮಠಕ್ಕೆ ಮಾತ್ರವೇ ನಿರ್ಬಂಧ ಮಾಡಬಹುದು. ಆದರೆ, ವಿದ್ಯಾಪೀಠಕ್ಕಲ್ಲ ಎಂಬ ವಾದದಲ್ಲಿ ಹುರುಳಿಲ್ಲ.
ಮಠ, ವಿದ್ಯಾಪೀಠ ಮತ್ತು ಟ್ರಸ್ಟ್ ಮೂರೂ ಅವಿಭಾಜ್ಯ ಅಂಗಗಳು. ವಿದ್ಯಾಪೀಠದ ಬೈ-ಲಾ ಪ್ರಕಾರ, ಸಂಸ್ಥಾಪಕ ಅಧ್ಯಕ್ಷರು ಮತ್ತು ಅವರ ನಂತರ ಕಾಲಕಾಲಕ್ಕೆ ಬರುವ ಬೃಹನ್ಮಠದ ಜಗದ್ಗುರುಗಳೇ ಅಧ್ಯಕ್ಷರಾಗಬೇಕೆಂಬ ನಿಯಮ ಇದೆ. ಹಾಗಾಗಿ, ಪೀಠಾಧಿಪತಿಯನ್ನು ಕೇವಲ ಮಠದ ಜವಾಬ್ದಾರಿಯಿಂದ ಮಾತ್ರವೇ ದೂರವಿಡುವಂತೆ ನಿರ್ಬಂಧಕಾಜ್ಞೆ ನೀಡಿದರೆ ಅದು ಅನಾಹುತಕಾರಿ ಪರಿಣಾಮ ಉಂಟು ಮಾಡುತ್ತದೆ ಎಂದರು.
ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ-1988ರ ಕಲಂ 8 (2)ರಡಿಯಲ್ಲಿ ಸಂಬಂಧಿಸಿದ ನ್ಯಾಯಾಲಯವು ಆರೋಪ ಪಟ್ಟಿಯನ್ನು ಮಾತ್ರ ಪರಿಶೀಲಿಸಿ ಮಧ್ಯಂತರ ನಿರ್ಬಂಧಕ ಆಜ್ಞೆಯನ್ನು ನೀಡಬಹುದಾಗಿದೆ. ಹಾಗಾಗಿ, ವಿಚಾರಣೆ ಆರಂಭವಾಗುವತನಕ ಕಾಯಬೇಕಿಲ್ಲ ಎಂದು ಪ್ರತಿಪಾದಿಸಿದರು. ಅಡ್ವೊಕೇಟ್ ಜನರಲ್ ವಾದಕ್ಕೆ ಪ್ರತಿ ಉತ್ತರ ನೀಡುವುದಾಗಿ ಅರ್ಜಿದಾರರ ವಕೀಲರು ಹೇಳಿದ ಹಿನ್ನೆಲೆಯಲ್ಲಿ ನ್ಯಾಯಪೀಠ ವಿಚಾರಣೆಯನ್ನು ಇದೇ ಮಾರ್ಚ್ 23ಕ್ಕೆ ಮುಂದೂಡಿತು.

ಪ್ರಕರಣಧ ಹಿನ್ನೆಲೆ: ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಶಿವಮೂರ್ತಿ ಶರಣರನ್ನು ಪೊಲೀಸರು 2022ರ ಸೆಪ್ಟೆಂಬರ್ 1ರಂದು ಬಂಧಿಸಿದ್ದು ಅಂದಿನಿಂದಲೂ ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ), ಅತ್ಯಾಚಾರ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ ಗುರುತರ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ.
ಪ್ರಕರಣದ ತನಿಖೆ ನಡೆಸಿರುವ ಪೊಲೀಸ್ ಅಧಿಕಾರಿಗಳು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆಯನ್ನೂ ಸೇರ್ಪಡೆ ಮಾಡಿದ್ದರು. ಈ ಕಾಯ್ದೆಯ ಅನ್ವಯ ಶರಣರನ್ನು ಪೀಠಾಧಿಪತಿ ಅಧಿಕಾರ ಚಲಾಯಿಸುವಿಕೆಯಿಂದ ನಿರ್ಬಂಧಿಸಬೇಕು ಎಂದು ಭಕ್ತರು ಸೆಷನ್ಸ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈ ದಾವೆಯ ಅನ್ವಯ ಸೆಷನ್ಸ್ ನ್ಯಾಯಾಲಯ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿಲಾಗಿದ್ದು, ಅದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ.












Click it and Unblock the Notifications