ಗೌರಿ ಲಂಕೇಶ್ ಹತ್ಯೆ : ಹೊಟ್ಟೆ ಮಂಜನ ಜಾಮೀನು ಅರ್ಜಿ ವಜಾ
ಬೆಂಗಳೂರು, ಜುಲೈ 09 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಆರೋಪಿ ಕೆ.ಟಿ.ನವೀನ್ ಕುಮಾರ್ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ ಮೊದಲ ಆರೋಪಿ ನವೀನ್ ಕುಮಾರ್.
ಬೆಂಗಳೂರಿನ ಸೆಷನ್ಸ್ ಕೋರ್ಟ್ ಸೋಮವಾರ ಕೆ.ಟಿ.ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಜುಲೈ 7ರಂದು ಅರ್ಜಿಯ ವಿಚಾರಣೆ ಮುಕ್ತಾಯಗೊಳಿಸಿದ್ದ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು.
ಸೋಮವಾರ ನ್ಯಾಯಾಧೀಶ ರಾಮಲಿಂಗೇಗೌಡ ಅವರು ತೀರ್ಪು ಪ್ರಕಟಿಸಿದರು. ಕೆ.ಟಿ.ನವೀನ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಇದರಿಂದಾಗಿ ನವೀನ್ ಕುಮಾರ್ ಜೈಲುವಾಸ ಮುಂದುವರೆಯಲಿದೆ.

2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸದ ಮುಂದೆ ಗೌರಿ ಲಂಕೇಶ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸರ್ಕಾರ ಎಸ್ಐಟಿಗೆ ವಹಿಸಿದೆ.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಟಿ.ನವೀನ್ ಕುಮಾರ್ ಅವರನ್ನು ಮೊದಲು ಬಂಧಿಸಲಾಗಿತ್ತು. ಪರುಶರಾಮ್ ವಾಘ್ಮೋರೆ, ಮನೋಹರ ದುಂಡಪ್ಪ ಯಡವೆ, ಅಮೋಲ್ ಕಾಳೆ, ಅಮಿತ್ ದಗ್ವೇಕರ್, ಸುಜಿತ್ ಕುಮಾರ್ ಅವರನ್ನು ಬಂಧಿಸಲಾಗಿದೆ.












Click it and Unblock the Notifications