ಕೊವಿಡ್ ನಿಯಮ ಉಲ್ಲಂಘಿಸಿದರೆ ರಾಜಕಾರಣಿಗಳ ವಿರುದ್ಧ ಕಠಿಣ ಕ್ರಮಕ್ಕೆ ಹೈಕೋರ್ಟ್ ಆದೇಶ
ಬೆಂಗಳೂರು, ಜುಲೈ 17: ಕೊವಿಡ್ ನಿಯಮಗಳನ್ನು ಉಲ್ಲಂಘಿಸುವ ರಾಜಕಾರಣಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶ ಮಾಡಿದೆ.
ರಾಜಕಾರಣಿಗಳು ಸಾರ್ವಜನಿಕವಾಗಿ ತೆರಳುವಾಗ ಮಾಸ್ಕ್ ಧರಿಸುವುದಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದಿಲ್ಲ ಎನ್ನುವ ದೂರು ಹೈಕೋರ್ಟ್ವರೆಗೂ ಬಂದಿತ್ತು, ಇದೀಗ ನ್ಯಾಯಾಲಯವು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ನಿಯಮಗಳನ್ನು ಉಲ್ಲಂಘಿಸುವ ರಾಜಕಾರಣಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದೆ.
ಭಾರತದಲ್ಲಿ 10 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರು
ರಾಜಕಾರಣಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ಸಭೆ ಸಮಾರಂಭದ ವೇಳೆ ಮಾಸ್ಕ್ ಧರಿಸುತ್ತಿಲ್ಲ ಎಂದು ಪಿಐಎಲ್ನಲ್ಲಿ ಆಪಾದಿಸಲಾಗಿತ್ತು. ಬಳ್ಳಾರಿಯ ಪರಮೇಶ್ವರ್ ನಾಯಕ್ ಅವರ ಮಗನ ಮದುವೆ ಕಾರ್ಯಕ್ರಮವನ್ನು ಅರ್ಜಿದಾರರು ಪ್ರಸ್ತಾಪಿಸಿದ್ದರು.
ಈ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಪಾಲ್ಗೊಂಡಿದ್ದರು. ಈ ವೇಳೆ ಕೇಂದ್ರ ಸರ್ಕಾರ ಹೊರಡಿಸಿದ ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನ ಗಾಳಿಗೆ ತೂರಲಾಗಿದೆ. ಕೆಂಪೇಗೌಡ ಪುತ್ಥಳಿ ಸಮಾರಂಭದಲ್ಲೂ ಉಲ್ಲಂಘನೆಯಾಗಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಎತ್ತಿತೋರಿಸಾಗಿತ್ತು.
ಕೊರೊನಾ ನಿಯಮಗಳನ್ನ ಯಾರೇ ಉಲ್ಲಂಘಿಸಿದರೂ, ಅವರು ಎಷ್ಟೇ ಪ್ರಭಾವಿಯಾಗಿದ್ದರೂ ಅವರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ ಅಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಹೈಕೋರ್ಟ್ ನ್ಯಾಯಪೀಠ ಸೂಚಿಸಿದೆ.
ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಒಕಾ, ನ್ಯಾ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ಹೊರಡಿಸಿದೆ. ವಕೀಲರಾದ ಪುತ್ತಿಗೆ ರಮೇಶ್ ಮತ್ತು ಜಿ.ಆರ್. ಮೋಹನ್ ಅವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ಬಳಿಕ ನ್ಯಾಯಪೀಠ ಈ ಅಭಿಪ್ರಾಯ ನೀಡಿತು.