ಚಂಡಮಾರುತ; ಕರ್ನಾಟಕದಲ್ಲಿ ಇನ್ನೂ 4 ದಿನ ಮಳೆ ಸಾಧ್ಯತೆ
ಬೆಂಗಳೂರು, ಅಕ್ಟೋಬರ್ 05; ಶಾಹೀನ್ ಚಂಡಮಾರುತದ ಪರಿಣಾಮ ಇನ್ನೂ ನಾಲ್ಕು ದಿನ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 5 ಮತ್ತು 6ರಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಕ್ಟೋಬರ್ 5ರಂದು ಯೆಲ್ಲೋ ಅಲರ್ಟ್, ಅಕ್ಟೋಬರ್ 6ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಅಂತ್ಯಗೊಂಡಿದೆ. ಆದರೆ ಚಂಡಮಾರುತದ ಪರಿಣಾಮ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಮಳೆ ಅವಾಂತರವನ್ನು ಸೃಷ್ಟಿಸಿತ್ತು.

ಎಲ್ಲೆಲ್ಲಿ ಮಳೆ; ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಅಕ್ಟೋಬರ್ 6ರಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನ ವ್ಯಾಪ್ತಿಯ ಕಲಬುರಗಿ, ಬೀದರ್, ವಿಜಯಪುರ, ರಾಯಚೂರು, ಯಾದಗಿರಿ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಯಲ್ಲಿ ಅಕ್ಟೋಬರ್ 5ರಂದು ಸಾಧಾರಣ ಮಳೆಯಾಗಲಿದೆ. ಚಿತ್ರದುರ್ಗ, ಬಳ್ಳಾರಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯಾಗಬಹುದು.
ಇನ್ನೂ ಎರಡು ದಿನ ಮಳೆ; ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಭಾನುವಾರ ಸುರಿದ ಮಳೆ ನಗರದಲ್ಲಿ ಅವಾಂತರ ಸೃಷ್ಟಿ ಮಾಡಿತ್ತು. ಸೋಮವಾರ ಮೋಡ ಕವಿದ ವಾತಾವರಣವಿದ್ದರೂ ಮಳೆ ಸುರಿದಿಲ್ಲ.
ಸೋಮವಾರ ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಶಿವಮೊಗ್ಗದಲ್ಲಿ ಕಳೆದ ಮೂರು ದಿನಗಳಿಂದ ಗುಡುಗು ಸಹಿತ ಮಳೆಯಾಗುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಸೋಮವಾರ ಅರ್ಧಗಂಟೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಕಿಕ್ರೆ ಹಳ್ಳದ ಸೇತುವೆ ಮೇಲೆ ನೀರು ನಿಂತು, ಸಂಚಾರಕ್ಕೆ ಅಡ್ಡಿಯಾಗಿತ್ತು.
ಬಳ್ಳಾರಿ ಜಿಲ್ಲೆಯಲ್ಲಿ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಸೋಮವಾರ ಸುರಿದ ಮಳೆ ನೆಮ್ಮದಿ ತಂದಿದೆ. ಒಂದು ವಾರಗಳ ಕಾಲ ಜಿಲ್ಲೆಯಲ್ಲಿ ತೀವ್ರ ಬಿಸಿಲು ಇತ್ತು. ಜಿಲ್ಲೆಯಲ್ಲಿ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.
ಮುಂಗಾರು ಅವಧಿಯಲ್ಲಿ ರೈತರು ಬೆಳೆದಿದ್ದ ಹತ್ತಿ, ಮೆಣಸಿನಕಾಯಿ, ಜೋಳ ಭತ್ತದ ಬೆಳೆಗಳು ನೀರಿನ ಅಭಾವದ ಕಾರಣ ಸೊರಗಿದ್ದವು. ಬಿಸಿಲು ಚೆನ್ನಾಗಿ ಇದ್ದ ಕಾರಣ ರೈತರು ಶೇಂಗಾ ಬೆಳೆದಿದ್ದರು. ಸೋಮವಾರ ಸುರಿದ ಮಳೆಯಿಂದ ಎಪಿಎಂಸಿ ಆವರಣದಲ್ಲಿ ಒಣಗಲು ಹಾಕಿದ್ದ ಶೇಂಗಾ ನೀರಿನಲ್ಲಿ ಒದ್ದೆಯಾಗಿದೆ.
ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಮಾತ್ರವಲ್ಲ ಅಸ್ಸಾಂ, ನಾಗಾಲ್ಯಾಂಡ್, ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್, ಲಕ್ಷದ್ವೀಪಗಳಲ್ಲಿ ಸಹ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.
ಉತ್ತರ ಪ್ರದೇಶ, ಉತ್ತರಾಖಂಡ್, ಬಿಹಾರ, ದಕ್ಷಿಣ ಗುಜರಾತ್, ಹಿಮಾಚಲ ಪ್ರದೇಶ ಮತ್ತು ಪಂಜಾಬ್ನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ ಚಂಡಮಾರುತದಿಂದಲೇ ವಿವಿಧ ರಾಜ್ಯದಲ್ಲಿ ಮಳೆಯಾಗಿತ್ತು. ಅಕ್ಟೋಬರ್ನಲ್ಲಿಯೂ ಅದು ಮುಂದುವರೆದಿದೆ.
ಕಾವೇರಿ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಶ್ರೀರಂಗಪಟ್ಟಣದಲ್ಲಿರುವ ಕೆಆರ್ಎಸ್ ಜಲಾಶಯಕ್ಕೆ ಸೋಮವಾರ 11,723 ಕ್ಯುಸೆಕ್ ಒಳಹರಿವು ದಾಖಲಾಗಿದೆ. ಕೆಆರ್ಎಸ್ ಜಲಾಶಯ ಇನ್ನೂ ಭರ್ತಿಯಾಗಿಲ್ಲ. 34.59 ಮೀಟರ್ ನೀರಿನ ಸಂಗ್ರಹವಿದೆ.
ಮಲೆನಾಡಿನಲ್ಲಿಯೂ ಮಳೆಯಾಗುತ್ತಿದ್ದು ಲಿಂಗನಮಕ್ಕಿ ಜಲಾಶಯಕ್ಕೆ 8260 ಕ್ಯುಸೆಕ್ ಒಳಹರಿವು ದಾಖಲಾಗಿದೆ. 554.44 ಮೀಟರ್ ಎತ್ತರದ ಜಲಾಶಯದಲ್ಲಿ 553.47 ಮೀಟರ್ ನೀರಿನ ಸಂಗ್ರಹವಿದೆ.












Click it and Unblock the Notifications