ಮೃತ ಬಾಲಕಿಯ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವೆ ಶಶಿಕಲಾ ಜೊಲ್ಲೆ: ಕಾಂಗ್ರೆಸ್ ಖಂಡನೆ!
ಬೆಂಗಳೂರು, ಆ. 15: ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಹಾರೋಗೆರಿ ಗ್ರಾಮದಲ್ಲಿ ಇತ್ತೀಚೆಗೆ ಕೊಲೆಯಾಗಿದ್ದ ಬಾಲಕಿ ಮನೆಗೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಭೇಟಿ ಕೊಟ್ಟು ಕುಟುಂಬಕ್ಕೆ ಸಾಂತ್ವನ ಹೇಳಿ ವಯಕ್ತಿಕ ಧನ ಸಹಾಯ ಮಾಡಿದ್ದಾರೆ. "ಹಾರೊಗೆರಿಯ ಅಪ್ರಾಪ್ತ ಬಾಲಕಿ ಲಕ್ಷ್ಮೀ ಶೇಖರ್ ರದ್ರನ್ನವರ್ ಮೇಲೆ ಅಮಿರ್ ಜಮಾದಾರ್ ಎನ್ನುವ ಯುವಕ ಕಿರುಕುಳ ನೀಡಿ ಕೊಲೆ ಮಾಡಿದ್ದಾನೆ ಎಂದು ಪೋಲೀಸರು ಈಗಾಗಲೇ ಆರೋಪಿಯನ್ನು ಬಂಧಿಸಿದ್ದಾರೆ" ಎಂದು ಸಚಿವೆ ಶಶಿಕಲಾ ಜೊಲ್ಲೆ ಭೇಟಿ ಬಳಿಕ ತಿಳಿಸಿದ್ದಾರೆ.
"ಬಾಲಕಿಯ ತಂದೆ ತಾಯಿಗಳು ಅತ್ಯಂತ ಬಡವರಾಗಿದ್ದು, ಜೀವನ ನಿರ್ವಹಣೆಗೆ ಕೂಲಿ ಕೆಲಸ ಮಾಡಿಕೊಂಡಿದ್ದಾರೆ. ಈ ಕುಟುಂಬದವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ತನಿಖೆ ಮಾಡಿ. ಆರೋಪಿಯ ಹಿಂದೆ ಯಾರ ಕೈವಾಡ ಇದೆ ಎನ್ನುವುದನ್ನು ಪತ್ತೆ ಹಚ್ಚಬೇಕು. ಆರೋಪಿಗೆ ಆದಷ್ಟು ಬೇಗ ಶಿಕ್ಷೆಯಾಗಬೇಕು. ಈ ರೀತಿಯ ಘಟನೆ ಮಾಡುವವರಿಗೆ ಒಂದು ಪಾಠ ಆಗಬೇಕು. ಶೀಘ್ರ ತನಿಖೆ ಮುಗಿಸಿ ಚಾರ್ಜ್ ಶೀಟ್ ಸಲ್ಲಿಸಬೇಕು. ಮೃತ ಬಾಲಕಿಗೆ ಮೂವರು ತಂಗಿಯರಿದ್ದು ಅವರಿಗೂ ಸಾಧ್ಯವಾದಷ್ಟು ಸಹಾಯ ನೀಡುವುದಾಗಿ" ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಸಚಿವೆ ಜೊಲ್ಲೆ ಭೇಟಿಗೆ ಕಾಂಗ್ರೆಸ್ ಪಕ್ಷದ ಖಂಡನೆ: ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಹಾರೋಗೇರಿ ಗ್ರಾಮದಲ್ಲಿ ಹತ್ತನೇ ತರಗತಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಘಟನೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ಆದರೆ ಮುಜರಾಯಿ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ ಅವರು ಸಂತ್ರಸ್ಥರ ಗುರುತು ಬಹಿರಂಗಪಡಿಸಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವುದು ಖಂಡನೀಯ ಎಂದು ರಾಜ್ಯ ಕಾಂಗ್ರೆಸ್ ಖಂಡಿಸಿದೆ.

ಸಂತ್ರಸ್ಥರ ಕುಟುಂಬ ವರ್ಗದವರನ್ನು ಭೇಟಿ ಮಾಡಿ ಅವರಿಗೆ ಸಾಂತ್ವಾನ ಹೇಳಿರುವುದನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ. ಮಾನವೀಯ ನೆಲೆಯಲ್ಲಿ ಅವರ ಕುಟುಂಬ ಸದಸ್ಯರಿಗೆ ತಾತ್ಕಾಲಿಕ ಪರಿಹಾರ ನೀಡಿರುವುದನ್ನು ಗೌರವಿಸುತ್ತೇವೆ. ಆದರೆ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿರುವ ವಿಡಿಯೋ, ಆಡಿಯೋ ರೆಕಾರ್ಡ್ ಮಾಡಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವುದು ಸರಿಯಲ್ಲ. ಸಚಿವರು ಹೇಳಿಕೆಯಲ್ಲಿ ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ಹೆಸರನ್ನೂ ಸಹ ಉಲ್ಲೇಖಿಸಿರುವುದು ಖಂಡನೀಯ ಎಂದು ಕಾಂಗ್ರೆಸ್ ಹೇಳಿದೆ.
ಈ ಹಿಂದೆಯೂ ಕೂಡ ಇದೇ ರೀತಿ ಸಂತ್ರಸ್ತ ಬಾಲಕೀಯರ ಕುಟುಂಬಗಳಿಗೆ ಸಚಿವೆ ಶಶಿಕಲಾ ಜೊಲ್ಲೆ ಅವರು ಭೇಟಿ ಕೊಟ್ಟು ಸಾಂತ್ವನ ಹೇಳಿದ್ದರು. ಆದರೆ ಇದೀಗ ಸಚಿವೆ ಶಶಿಕಲಾ ಜೊಲ್ಲೆ ಅವರ ನಡೆಯನ್ನು ಖಂಡಿಸಿದೆ.












Click it and Unblock the Notifications