Breaking; ಮೈಸೂರು-ಚೆನ್ನೈ ವಂದೇ ಭಾರತ್, ಶತಾಬ್ದಿ ವೇಳಾಪಟ್ಟಿ ಬದಲು?
ಬೆಂಗಳೂರು, ಡಿಸೆಂಬರ್ 21; ಮೈಸೂರು ಮತ್ತು ಪುರುಚ್ಚಿ ತಲೈವರ್ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ವೇಳಾಪಟ್ಟಿ ಬದಲಾವಣೆಯಾಗುವ ನಿರೀಕ್ಷೆ ಇದೆ.
ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಬುಧವಾರ ವಿಧಾನ ಪರಿಷತ್ನಲ್ಲಿ ಮರಿತಿಬ್ಬೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಮೂಲ ಸೌಲಭ್ಯ ಅಭಿವೃದ್ಧಿ, ವಸತಿ ಸಚಿವ ವಿ. ಸೋಮಣ್ಣ ಉತ್ತರ ನೀಡಿದ್ದಾರೆ.
ಮೈಸೂರು-ಚೆನ್ನೈ ನಡುವಿನ ವಂದೇ ಭಾರತ್, ಜನ ಶತಾಬ್ದಿ ಸೂಪರ್ ಫಾಸ್ಟ್ ರೈಲುಗಳ ವೇಳಾಪಟ್ಟಿ ಬದಲಾವಣೆ ಮಾಡಲು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ರೈಲ್ವೆ ಮಂತ್ರಾಲಯಕ್ಕೆ ಈಗಾಗಲೇ ಪತ್ರವನ್ನು ಬರೆದು ಮೈಸೂರು-ಚೆನ್ನೈ ನಡುವಿನ ವಂದೇ ಭಾರತ್, ಜನ ಶತಾಬ್ದಿ ರೈಲುಗಳ ವೇಳಾಪಟ್ಟಿ ಬದಲಾವಣೆ ಮಾಡಬೇಕು ಎಂದು ಮನವಿ ಮಾಡಲಾಗಿದೆ.
ರೈಲ್ವೆ ಇಲಾಖೆ ಅಧಿಕಾರಿಗಳು ವೇಳಾಪಟ್ಟಿ ಬದಲಾವಣೆ ಕಷ್ಟ ಎಂದು ಹೇಳುತ್ತಿದ್ದಾರೆ. ಈ ಕುರಿತು ಮಾನ್ಯ ಮುಖ್ಯಮಂತ್ರಿಗಳು, ರೈಲ್ವೆ ಸಚಿವರ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುತ್ತದೆ ಎಂದರು.
ಮೈಸೂರು-ಚೆನ್ನೈ ನಡುವಿನ ವಂದೇ ಭಾರತ್, ಜನ ಶತಾಬ್ದಿ ಎರಡೂ ರೈಲುಗಳನ್ನು ಮಂಡ್ಯದಲ್ಲಿ ನಿಲ್ಲಿಸಬೇಕು ಎಂಬ ಬೇಡಿಕೆಯೂ ಇದೆ. ಈ ಕುರಿತು ಸಹ ರೈಲ್ವೆ ಮಂತ್ರಾಲಯಕ್ಕೆ ಪತ್ರದಲ್ಲಿ ವಿವರಣೆ ನೀಡಲಾಗಿದೆ ಎಂದು ವಿ. ಸೋಮಣ್ಣ ಹೇಳಿದರು.
ನವೆಂಬರ್ ತಿಂಗಳಿನಲ್ಲಿ ಮೈಸೂರು-ಚೆನ್ನೈ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭವಾದ ಬಳಿಕವೂ ಜನ ಶತಾಬ್ದಿ, ವಂದೇ ಭಾರತ್ ರೈಲಿಗೆ ಪೂರ್ಣ ಪ್ರಮಾಣದಲ್ಲಿ ಪ್ರಯಾಣಿಕರು ಬರುತ್ತಿದ್ದಾರೆ. ಆದ್ದರಿಂದ ಯಾವುದೇ ಆರ್ಥಿಕ ನಷ್ಟವಾಗುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ ಎಂದು ಸಚಿವ ಸೋಮಣ್ಣ ಸದನಕ್ಕೆ ವಿವರಣೆ ನೀಡಿದರು.
ನವೆಂಬರ್ 11ಕ್ಕೆ ಚಾಲನೆ; ಪ್ರಧಾನಿ ನರೇಂದ್ರ ಮೋದಿ ಮೈಸೂರು-ಬೆಂಗಳೂರು-ಚೆನ್ನೈ ಸೆಂಟ್ರಲ್ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ನವೆಂಬರ್ 11ರಂದು ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿದ್ದಾರೆ. ಇದು ದೇಶದ 5ನೇ ಮತ್ತು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲಾಗಿದೆ.
ಮೈಸೂರು-ಚೆನ್ನೈ ನಡುವಿನ ಶತಾಬ್ದಿ ರೈಲು ಮತ್ತು ವಂದೇ ಭಾರತ್ ರೈಲು ಒಂದೇ ಸಮಯದಲ್ಲಿ ಸಂಚಾರ ನಡೆಸಲಿವೆ. ಆದ್ದರಿಂದ ರೈಲುಗಳ ವೇಳಾಪಟ್ಟಿ ಬದಲಾವಣೆ ಮಾಡಬೇಕು ಎಂಬ ಬೇಡಿಕೆ ಇದೆ.












Click it and Unblock the Notifications