ಶಿರಾಡಿಯಲ್ಲಿ ವಾಹನ ಸಂಚಾರಕ್ಕೆ ಹೊಸ ಮುಹೂರ್ತ ಫಿಕ್ಸ್
ಹಾಸನ, ಜೂ. 16 : ಕುಂಟುತ್ತಾ ಸಾಗಿರುವ ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ರಸ್ತೆಯ ದುರಸ್ತಿ ಕಾರ್ಯ ಶೀಘ್ರವೇ ಪೂರ್ಣಗೊಳ್ಳಲಿದ್ದು, ಆಗಸ್ಟ್ 1ರಿಂದ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಎಂಬ ಭರವಸೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನೀಡಿದ್ದಾರೆ.
13 ಕಿ.ಮೀ.ಕಾಂಕ್ರಿಟ್ ರಸ್ತೆ ಕಾಮಗಾರಿಗಾಗಿ ಶಿರಾಡಿ ಘಾಟ್ನಲ್ಲಿ 2015ರ ಜನವರಿ 2ರಿಂದ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. 2015ರ ಮೇ 15ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಇತ್ತು. ಆದರೆ, ಗಡುವು ಮುಗಿದರೂ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. [ಕಾಂಕ್ರಿಟ್ ರಸ್ತೆ ಕಾಮಗಾರಿ ಚಿತ್ರಗಳು]
ಸೋಮವಾರ ಸಕಲೇಶಪುರದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು. ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಎಂದು ಆರಂಭವಾಗಲಿದೆ ಎಂದು ಖಚಿತವಾಗಿ ತಿಳಿಸಬೇಕು ಎಂದು ಒತ್ತಾಯಿಸಿದರು.[ಹೇಗೆ ಸಾಗುತ್ತಿದೆ ಶಿರಾಡಿ ಘಾಟ್ ಕಾಮಗಾರಿ]
ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧೀಕ್ಷಕ ಇಂಜಿನಿಯರ್ ರಾಘವನ್ ಅವರು, ಆಗಸ್ಟ್ 1ರಿಂದ ವಾಹನ ಸಂಚಾರ ಆರಂಭಿಸಲಾಗುತ್ತದೆ ಎಂದು ಭರವಸೆ ನೀಡಿದರು. ಕಾಮಗಾರಿ ವಿಳಂಬವಾಗಲು ಏಪ್ರಿಲ್ನಲ್ಲಿ ಸುರಿದ ಅಕಾಲಿಕ ಮಳೆಯೇ ಕಾರಣ ಎಂದು ವಿವರಣೆ ನೀಡಿದರು. ಚಿತ್ರಗಳಲ್ಲಿ ಶಿರಾಡಿ ಘಾಟ್ ಕಥೆ-ವ್ಯಥೆ.......

ಕಾಂಕ್ರಿಟ್ ರಸ್ತೆ ಕಾಮಗಾರಿ
ಶಿರಾಡಿ ಘಾಟ್ನ 26 ಕಿ.ಮೀ ಉದ್ದದ ರಸ್ತೆಯನ್ನು 13 ಕಿ.ಮೀ ನಂತೆ ಎರಡು ಭಾಗಗಳನ್ನಾಗಿ ಮಾಡಿಕೊಂಡು ಕಾಂಕ್ರಿಟ್ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಕೆಂಪುಹೊಳೆ ಚೆಕ್ಪೋಸ್ಟ್ನಿಂದ ಮಾರನಹಳ್ಳಿವರೆಗಿನ 13 ಕಿ.ಮೀ ರಸ್ತೆಯ ಕಾಮಗಾರಿ ನಡೆಯುತ್ತಿದೆ. ಸುಮಾರು 65 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ನಡೆಯುತ್ತಿದೆ.

2015ರ ಮೇ 15ರ ಗಡುವು
ಕಾಂಕ್ರಿಟ್ ರಸ್ತೆ ಕಾಮಗಾರಿಗಾಗಿ ಶಿರಾಡಿ ಘಾಟ್ನಲ್ಲಿ 2015ರ ಜನವರಿ 2ರಿಂದಲೇ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಮೊದಲು 2015ರ ಮೇ 15ರೊಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇತ್ತು. ಆದರೆ, ಕಾಮಗಾರಿ ಜೂನ್ ತಿಂಗಳಿನಲ್ಲೂ ಪೂರ್ಣಗೊಳ್ಳುವುದು ಅನುಮಾನವಾಗಿದೆ.

ಜೂನ್ 20ರ ಡೆಡ್ಲೈನ್ ನೀಡಲಾಗಿತ್ತು
ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಕಾಂಕ್ರಿಟ್ ಕಾಮಗಾರಿ ವಿಳಂಬವಾಗಿದೆ ಎಂದು ಹೇಳಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜೂನ್ 20ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿತ್ತು. ಸರ್ಕಾರ ಕಾಮಗಾರಿಯ ಗುಣಮಟ್ಟದ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಜೂನ್ 20ರ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದ್ದರು.

ಆಗಸ್ಟ್ 1ರ ಮುಹೂರ್ತ
ಮೇ 15 ಮತ್ತು ಜೂನ್ 20ರ ಗಡುವಿನ ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆಗಸ್ಟ್ 1ರಿಂದ ವಾಹನ ಸಂಚಾರ ಆರಂಭಿಸುವ ಭರವಸೆ ನೀಡಿದೆ. ಕಾಮಗಾರಿ ಪೂರ್ಣಗೊಂಡ ತಕ್ಷಣ ವಾಹನ ಸಂಚಾರ ಆರಂಭಿಸಲು ಸಾಧ್ಯವಿಲ್ಲ. ಆದ್ದರಿಂದ ಆಗಸ್ಟ್ 1ರ ಗಡುವು ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಎರಡು ಹಂತದ ಕಾಮಗಾರಿ ಇದೆ
ಒಟ್ಟು ಎರಡು ಹಂತದಲ್ಲಿ ಕಾಂಕ್ರಿಟ್ ಕಾಮಗಾರಿ ಕೈಗೊಳ್ಳಲಾಗುತ್ತದೆ. ಕೆಂಪುಹೊಳೆಯಿಂದ ಗುಂಡ್ಯ ತನಕದ 13 ಕಿ.ಮೀ ಮಾರ್ಗವನ್ನು 85.28 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಈ ಕಾಮಗಾರಿ 2016ರಲ್ಲಿ ಆರಂಭವಾಗುವ ಸಾಧ್ಯತೆ ಇದೆ.












Click it and Unblock the Notifications