ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಮತ್ತೊಬ್ಬ ಶಾಸಕ!
ಬೆಂಗಳೂರು, ಜುಲೈ 07 : ಕರ್ನಾಟಕ ಕಾಂಗ್ರೆಸ್ಗೆ ಮತ್ತೊಂದು ಆಘಾತ ಕಾದಿದ್ದು ಶಾಸಕರೊಬ್ಬರು ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈಗಾಗಲೇ 9 ಶಾಸಕರು ರಾಜೀನಾಮೆ ನೀಡಿದ್ದು, ಪಕ್ಷಕ್ಕೆ ದೊಡ್ಡ ಹಿನ್ನಡೆ ಉಂಟಾಗಿದೆ.
ಭಾನುವಾರ ಶಿವಾಜಿನಗರದ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ರೋಷನ್ ಬೇಗ್ ಈಗಾಗಲೇ ಪಕ್ಷದಿಂದ ಅಮಾನತುಗೊಂಡಿದ್ದಾರೆ.
ಕ್ಷಿಪ್ರ ರಾಜಕೀಯ ಬೆಳವಣಿಗೆ: ಖರ್ಗೆ ಹೇಳುವುದೇನು?
ಮಾಧ್ಯಮಗಳ ಜೊತೆ ಮಾತನಾಡಿದ ರೋಷನ್ ಬೇಗ್ ಅವರು, 'ಸೋಮವಾರ ಅಥವ ಮಂಗಳವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ. ನನ್ನ ರಾಜೀನಾಮೆಗೆ ಸಿದ್ದರಾಮಯ್ಯ ಅವರು ನೇರಹೊಣೆ' ಎಂದು ಹೇಳಿದರು.
ಕಾಂಗ್ರೆಸ್-ಜೆಡಿಎಸ್ ಶಾಸಕರ ರಾಜೀನಾಮೆ : ಯಾರು, ಏನು ಹೇಳಿದರು?
'ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ನಡವಳಿಕೆ ಬಹಳಷ್ಟು ಜನರಿಗೆ ಬೇಸರವಾಗಿದೆ. ನನ್ನ ಕ್ಷೇತ್ರದ ಜನ ಲೋಕಸಭಾ ಚುನಾವಣೆಯಲ್ಲಿ ಹೆಚ್ವಿನ ಮತ ನೀಡಿದ್ದಾರೆ. ಸುಮಲತ ಪರ ಪ್ರಚಾರ ಮಾಡಿದ್ದ ಕಾಂಗ್ರೆಸ್ ನಾಯಕರ ವಿರುದ್ದ ಏಕೆ ಕ್ರಮ ಕೈಗೊಂಡಿಲ್ಲ' ಎಂದು ರೋಷನ್ ಬೇಗ್ ಪ್ರಶ್ನೆ ಮಾಡಿದರು.
ಶಾಸಕರ ರಾಜೀನಾಮೆ : ಸಿದ್ದರಾಮಯ್ಯ ಕಡೆ ನೋಡುವುದೇಕೆ?
'ನನ್ನನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಕಾಂಗ್ರೆಸ್ನಲ್ಲಿ ಪಕ್ಷದ ವ್ಯವಸ್ಥೆ ಹಾಳಾಗಲು ಸಿದ್ದರಾಮಯ್ಯ ನಡವಳಿಕೆ ಕಾರಣ. ಈ ವಿಚಾರದಲ್ಲಿ ಹೆಚ್ಚಿನ ಪ್ರತಿಕ್ರಿಯೆ ಬೇಕಿಲ್ಲ. ನಮಗೆ ಸಚಿವ ಸ್ಥಾನದ ಅಗತ್ಯವಿಲ್ಲ. ರಾಮಲಿಂಗಾರೆಡ್ಡಿ ಉತ್ತಮ ನಿರ್ಧಾರ ಕೈಗೊಂಡಿದ್ದಾರೆ' ಎಂದರು.
ಲೋಕಸಭಾ ಚುನಾವಣೆ ಮುಗಿದ ಬಳಿಕ ರೋಷನ್ ಬೇಗ್ ಅವರು ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಆದ್ದರಿಂದ, ಅವರಿಗೆ ಷೋಕಾಸ್ ನೋಟಿಸ್ ಜಾರಿ ಮಾಡಿ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಶನಿವಾರ 9 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದಾಗಲೇ ರೋಷನ್ ಬೇಗ್ ಸಹ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎಂದು ಅಂದಾಜಿಸಲಾಗಿತ್ತು.