ಶಿವಮೊಗ್ಗ ಟಿಕೆಟ್; ಯಡಿಯೂರಪ್ಪ ಭೇಟಿಯಾದ ಈಶ್ವರಪ್ಪ ಪುತ್ರ!
ಬೆಂಗಳೂರು, ಏಪ್ರಿಲ್ 13; ಕರ್ನಾಟಕ ಬಿಜೆಪಿ 2ನೇ ಪಟ್ಟಿಯಲ್ಲಿಯೂ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಹಾಲಿ ಶಾಸಕ, ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದು, ಈ ಬಾರಿಯ ಚುನಾವಣೆಗೆ ಪಕ್ಷದ ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಕೆ. ಎಸ್. ಈಶ್ವರಪ್ಪ ಪುತ್ರ ಕೆ. ಈ. ಕಾಂತೇಶ್ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅವರು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದ್ದಾರೆ. ಬಿಜೆಪಿ 189, 23 ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಶಿವಮೊಗ್ಗಕ್ಕೆ ಅಭ್ಯರ್ಥಿ ಹೆಸರಿಸಿಲ್ಲ.

ಮಾಧ್ಯಮಗಳ ಜೊತೆ ಮಾತನಾಡಿದ ಕೆ. ಈ . ಕಾಂತೇಶ್, "ಬಿಜೆಪಿ, ಆರ್ಎಸ್ಎಸ್ ನನ್ನ ತಂದೆ ಮತ್ತು ಕುಟುಂಬವನ್ನು ಸಂಸ್ಕಾರದಿಂದ ಬೆಳೆಸಿದೆ. ನನಗೆ ಸಂಪೂರ್ಣವಾದ ನಂಬಿಕೆ ಇದೆ. ಮುಂದಿನ ದಿನಗಳಲ್ಲಿ ಒಳ್ಳೆಯದಾಗಲಿದೆ, ಪಕ್ಷ ನಮ್ಮ ಕೈ ಬಿಡಲ್ಲ. ನನಗೆ ಒಂದು ಅವಕಾಶ ಸಿಗುವ ನಂಬಿಕೆಯಲ್ಲಿ ನಾನು ಇದ್ದೇನೆ. ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾನು ಬದ್ಧ" ಎಂದು ಹೇಳಿದರು.
"ನಮ್ಮ ತಂದೆ ನಿರ್ಧಾರಕ್ಕೆ ನಾವು ಎಲ್ಲರೂ ಬದ್ಧರಾಗಿದ್ದೇವೆ. ಸಾವಿರಾರು ಕಾರ್ಯಕರ್ತರಿಗೆ ನಮ್ಮ ತಂದೆ ಮಾದರಿ, ಪಕ್ಷ ಟಿಕೆಟ್ ಕೊಡದಿದ್ದರೆ ಅದಕ್ಕೂ ಬದ್ಧ ಆಗಿರುತ್ತೇನೆ. ಸಾಯೋವರೆಗೂ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಮುಂದಿನ ದಿನಗಳಲ್ಲಿ ಒಳ್ಳೇದಾಗಬಹುದೆಂಬ ನಿರೀಕ್ಷೆಯಲ್ಲಿದ್ದೇನೆ" ಎಂದು ಕೆ. ಈ. ಕಾಂತೇಶ್ ತಿಳಿಸಿದರು.

"ಆಯನೂರು ಮಂಜುನಾಥ್ ಎಲ್ಲೂ ಹೋಗಲ್ಲ, ಅವರು ಬಿಜೆಪಿಯಲ್ಲೇ ಉಳಿಯುತ್ತಾರೆ. ಪಕ್ಷ ಯಾರನ್ನೇ ಅಭ್ಯರ್ಥಿ ಮಾಡಿದರೂ ಆಯನೂರು ಬೆಂಬಲಿಸುತ್ತಾರೆ" ಎಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಕೆ. ಈ. ಕಾಂತೇಶ್ ಹೇಳಿದರು.
ಯಾರು ಆಕಾಂಕ್ಷಿಗಳು?; ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಖ್ಯಾತ ವೈದ್ಯ ಡಾ. ಧನಂಜಯ್ ಸರ್ಜಿ, ಕೆ. ಈ. ಕಾಂತೇಶ್, ಆಯನೂರು ಮಂಜುನಾಥ್ ಪ್ರಬಲ ಆಕಾಂಕ್ಷಿಗಳು. ಡಾ. ಧನಂಜಯ್ ಸರ್ಜಿ ಚನ್ನಗಿರಿಯಿಂದ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ ಬಿಜೆಪಿ 2ನೇ ಪಟ್ಟಿಯಲ್ಲಿ ಕ್ಷೇತ್ರಕ್ಕೆ ಶಿವಕುಮಾರ್ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ಆದ್ದರಿಂದ ಶಿವಮೊಗ್ಗ ನಗರದಿಂದಲೇ ಡಾ. ಧನಂಜಯ್ ಸರ್ಜಿಗೆ ಟಿಕೆಟ್ ಸಿಗುವ ನಿರೀಕ್ಷೆ ಇದೆ.
ಶಿವಮೊಗ್ಗ ನಗರ ಕ್ಷೇತ್ರದ ಹಾಲಿ ಶಾಸಕ ಕೆ. ಎಸ್. ಈಶ್ವರಪ್ಪ ಮಂಗಳವಾರ ಬಿಜೆಪಿ ಮೊದಲ ಪಟ್ಟಿ ಬಿಡುಗಡೆಗೆ ಮುನ್ನ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾಗೆ ಪತ್ರವನ್ನು ಬರೆದು ಯಾವ ಕ್ಷೇತ್ರಕ್ಕೂ ನನ್ನ ಹೆಸರು ಪರಿಗಣಿಸಬೇಡಿ ಎಂದು ಮನವಿ ಮಾಡಿದ್ದರು.
ಕೆ. ಎಸ್. ಈಶ್ವರಪ್ಪ ಈ ಬಾರಿಯ ಚುನಾವಣೆಯಲ್ಲಿ ಕೆ. ಈ . ಕಾಂತೇಶ್ಗೆ ಟಿಕೆಟ್ ನೀಡುವಂತೆ ಹೈಕಮಾಂಡ್ಗೆ ಮನವಿ ಮಾಡಿದ್ದರು. ಇದರ ನಡುವೆಯೇ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದರು. ಆದರೆ ಈಶ್ವರಪ್ಪ ಪುತ್ರನಿಗೆ ಟಿಕೆಟ್ ನೀಡುವ ಕುರಿತು ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಈಗಾಗಲೇ ಶಿಕಾರಿಪುರ ಕ್ಷೇತ್ರದ ಶಾಸಕ ಬಿ. ಎಸ್. ಯಡಿಯೂರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗ ಕೆ. ಎಸ್. ಈಶ್ವರಪ್ಪ ಸಹ ನಿವೃತ್ತಿ ಘೋಷಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ಇಬ್ಬರು ನಾಯಕರು ಈ ಬಾರಿಯ ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ. ಇದು ಪಕ್ಷದ ಮೇಲೆ ಯಾವ ರೀತಿಯಲ್ಲಿ ಪ್ರಭಾವ ಬೀರಲಿದೆ? ಎಂದು ಕಾದು ನೋಡಬೇಕಿದೆ.












Click it and Unblock the Notifications