ಕೆ.ಎಸ್.ಈಶ್ವರಪ್ಪಗೆ ಟಿಕೆಟ್ : ಅಮಿತ್ ಶಾ ಸಂಧಾನ ಸೂತ್ರ!
Recommended Video
ಶಿವಮೊಗ್ಗ, ಮಾರ್ಚ್ 28 : ಶಿವಮೊಗ್ಗ ನಗರದ ಟಿಕೆಟ್ ವಿಚಾರದಲ್ಲಿ ಉಂಟಾಗಿದ್ದ ಗೊಂದಲ ಬಗೆಹರಿದಂತೆ ಕಾಣುತ್ತಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಭೆ ನಡೆಸಿ, ಸಂಧಾನ ಸೂತ್ರವೊಂದನ್ನು ಮುಂದಿಟ್ಟಿದ್ದಾರೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಶಿವಮೊಗ್ಗ ನಗರದಲ್ಲಿ ಸೋಮವಾರ ರೋಡ್ ಶೋ ನಡೆಸಿದರು. ಬಳಿಕ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನಿವಾಸದಲ್ಲಿ ಭೋಜನ ಸವಿದರು. ಬಳಿಕ ಯಡಿಯೂರಪ್ಪ ಸೇರಿದಂತೆ ವಿವಿಧ ನಾಯಕರ ಜೊತೆ ಸಭೆ ನಡೆಸಿದರು.
ಈಶ್ವರಪ್ಪ ಮನೆಯಲ್ಲಿ ಊಟ, ಉಪಚಾರ, ಸಂಧಾನದ ಉಪ್ಪಿನಕಾಯಿ!
ಸುಮಾರು 1 ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಅಮಿತ್ ಶಾ ಸಂಧಾನ ಸೂತ್ರವನ್ನು ಮುಂದಿಟ್ಟಿದ್ದಾರೆ. ಸಭೆಯಲ್ಲಿ ಪಾಲ್ಗೊಂಡಿದ್ದ ನಾಯಕರು ಈ ಸೂತ್ರಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಶಿವಮೊಗ್ಗ ಜಿಲ್ಲೆ ಬಿಜೆಪಿ ಅಭ್ಯರ್ಥಿಗಳು ಅಂತಿಮ, ಯಾರಿಗೆ ಎಲ್ಲಿ ಟಿಕೆಟ್?
ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ಗಾಗಿ ಕೆ.ಎಸ್.ಈಶ್ವರಪ್ಪ ಮತ್ತು ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಗೌಡ ನಡುವೆ ಪೈಪೋಟಿ ನಡೆದಿದೆ. ಈಶ್ವರಪ್ಪ ಅವರಿಗೆ ಟಿಕೆಟ್ ನೀಡಬಾರದು ಎಂದು ಜಿಲ್ಲಾ ಬಿಜೆಪಿ ನಾಯಕರು ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದರು.
ಅಮಿತ್ ಶಾ ಮುಂದಿಟ್ಟ ಸಂಧಾನ ಸೂತ್ರ
ಕೆ.ಎಸ್.ಈಶ್ವರಪ್ಪ ಮನೆಯಲ್ಲಿ ಭೋಜನ ಸವಿದ ಬಳಿಕ ಅಮಿತ್ ಶಾ ಅವರು ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜಿ ಸೇರಿದಂತೆ ಹಲವು ನಾಯಕರ ಜೊತೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ನಗರದ ಟಿಕೆಟ್ ಕುರಿತು ಚರ್ಚೆ ನಡೆದಿದೆ. ಅಮಿತ್ ಶಾ ಎಲ್ಲರೂ ಒಗ್ಗಟ್ಟಾಗಿ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಸಲಹೆ ನೀಡಿದರು. ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವೆ ಸಂಧಾನ ನಡೆಸಿದರು.
ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಅಮಿತ್ ಶಾ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ಕೈ ಎತ್ತಿ ಹಿಡಿದು ನಾವೆಲ್ಲರೂ ಒಂದಾಗಿದ್ದೇವೆ ಎಂಬ ಸಂದೇಶ ರವಾನಿಸಿದರು. ಇಂದರಿಂದ ಶಿವಮೊಗ್ಗ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಉಂಟಾಗಿದ್ದ ಗೊಂದಲ ಬಗೆಹರಿದಿದೆ.
ಅಭ್ಯರ್ಥಿಗಳನ್ನು ಬಿಜೆಪಿ ಅಂತಿಮಗೊಳಿಸಿತ್ತು
ಬಿಜೆಪಿ ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿತ್ತು. ಆದರೆ, ಭದ್ರಾವತಿ, ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ಗ್ರಾಮಾಂತರ ಜಿಲ್ಲೆಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿರಲಿಲ್ಲ.
ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಟಿಕೆಟ್ಗೆ ಹಲವು ಆಕಾಂಕ್ಷಿಗಳಿದ್ದರು. ಆದ್ದರಿಂದ, ಅಭ್ಯರ್ಥಿಗಳನ್ನು ಅಂತಿಮಗೊಳಿಸಿರಲಿಲ್ಲ. ಈಗ ಅಮಿತ್ ಶಾ ಬಂದು ಹೋದ ಬಳಿಕ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಶನಿವಾರ ಬಿ.ಎಸ್.ಯಡಿಯೂರಪ್ಪ ಅಭ್ಯರ್ಥಿಗಳ ಪಟ್ಟಿ ಹಿಡಿದು ದೆಹಲಿಗೆ ತೆರಳಿದ್ದಾರೆ.
ಸಂಧಾನ ಸೂತ್ರವೇನು?
ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಅವರಿಗೆ, ಭದ್ರಾವತಿಯಿಂದ ರುದ್ರೇಗೌಡರಿಗೆ ಟಿಕೆಟ್ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆದರೆ, ಯಾವುದೇ ನಾಯಕರು ಈ ಬಗ್ಗೆ ಪ್ರತಿಕ್ರಿಯೆಗಳನ್ನು ನೀಡಿಲ್ಲ.
ಈ ಸಂಧಾನ ಸೂತ್ರದಂತೆಯೇ ಟಿಕೆಟ್ ಹಂಚಿಕೆ ನಡೆಯಲಿದೆಯೇ? ಕಾದು ನೋಡಬೇಕು. ಭದ್ರಾವತಿ ನಗರಕ್ಕೆ ಬಿಜೆಪಿಗೆ ಸೂಕ್ತ ಅಭ್ಯರ್ಥಿ ಸಿಕ್ಕಿಲ್ಲ. ಆದ್ದರಿಂದ, ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಗೌಡ ಅವರನ್ನು ಅಲ್ಲಿಂದ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು
ಶಿವಮೊಗ್ಗ ಜಿಲ್ಲೆಯ 4 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ತೀರ್ಥಹಳ್ಳಿಗೆ ಆರಗ ಜ್ಞಾನೇಂದ್ರ, ಸೊರಬಕ್ಕೆ ಕುಮಾರ್ ಬಂಗಾರಪ್ಪ, ಸಾಗರ ಕ್ಷೇತ್ರಕ್ಕೆ ಹಾರತಾಳು ಹಾಲಪ್ಪ, ಶಿಕಾರಿಪುರ ಕ್ಷೇತ್ರಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ಅಭ್ಯರ್ಥಿಯಾಗಿದ್ದಾರೆ.
ಆದರೆ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಐದಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಆದ್ದರಿಂದ, ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಕೆ.ಎಸ್.ಈಶ್ವರಪ್ಪ ಮತ್ತು ರುದ್ರೇಗೌಡ ಅವರ ನಡುವೆ ಪೈಪೋಟಿ ನಡೆಯುತ್ತಿದೆ. ಆದ್ದರಿಂದ, ಅಭ್ಯರ್ಥಿ ಅಂತಿಮಗೊಳಿಸಿರಲಿಲ್ಲ.
ಕಳೆದ ಚುನವಣೆಯಲ್ಲಿ ಹಿನ್ನಡೆ
2013ರ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿತ್ತು. ಕೆಜೆಪಿ ಮತ್ತು ಬಿಜೆಪಿ ಗೊಂದಲದ ಕಾರಣ ಹಿನ್ನಡೆ ಉಂಟಾಗಿತ್ತು. ಈ ಬಾರಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ. ಆದ್ದರಿಂದ, ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸುವುದು ಬಿಜೆಪಿಯ ತಂತ್ರವಾಗಿದೆ.
ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ.ರಾಘವೇಂದ್ರ ಅವರು ಎಲ್ಲಿಂದ ಸ್ಪರ್ಧಿಸಲಿದ್ದಾರೆ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.