ಶಿವಮೊಗ್ಗದ ಹರ್ಷ ಹತ್ಯೆ ಪ್ರಕರಣ; ಆರೋಪಿಗಳ ನ್ಯಾಯಾಂಗ ಬಂಧನ 190 ದಿನಕ್ಕೆ ವಿಸ್ತರಣೆ
ಬೆಂಗಳೂರು ಮೇ 11. ರಾಜ್ಯಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಬಂಧಿಸಲಾಗಿರುವ ಹತ್ತು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 190 ದಿನಕ್ಕೆ ವಿಸ್ತರಣೆ ಮಾಡಲಾಗಿದೆ.
ಆರೋಪಿಗಳನ್ನು ಇನ್ನೂ ಹೆಚ್ಚಿನ ತನಿಖೆಗೆ ಒಳಪಡಿಸುವ ಅಗತ್ಯವಿರುವುದರಿಂದ ಅವರ ನ್ಯಾಯಾಂಗ ಬಂಧನ ಅವಧಿಯನ್ನು 90 ದಿನಗಳಿಂದ 190 ದಿನಗಳಿಗೆ ಹೆಚ್ಚಿಸಬೇಕೆಂದು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಮಾಡಿದ ಮನವಿಯನ್ನು ವಿಶೇಷ ಕೋರ್ಟ್ ಪುರಸ್ಕರಿಸಿದೆ.
ಎನ್ಐಎ ವಿಶೇಷ ನ್ಯಾಯಾಲಯದ ಉಸ್ತುವಾರಿ ನ್ಯಾಯಾಧೀಶ ಕಸನಪ್ಪ ನಾಯಕ್ ಬುಧವಾರ ವಿಚಾರಣೆ ನಡೆಸಿ, ಎನ್ಐಎ ಪರ ವಕೀಲರು ಸಲ್ಲಿಸಿದ ಮನವಿಯನ್ನು ಮಾನ್ಯ ಮಾಡಿದರು.
ಎನ್ಐಎ ಪರ ವಾದ ಮಂಡಿಸಿದ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನಕುಮಾರ್, ಪ್ರಕರಣದಲ್ಲಿ ಈಗಾಗಲೇ ಆರೋಪಿಗಳ ಗುರುತು ಪತ್ತೆಯ ಪೆರೇಡ್ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಆದರೆ, ಪ್ರತ್ಯಕ್ಷ ಸಾಕ್ಷಿಗಳ ವಿಚಾರಣೆ ನಡೆಯಬೇಕಿದೆ. ಜೊತೆಗೆ ಆರೋಪಿಗಳು ಬಳಸುತ್ತಿದ್ದ ವಿದ್ಯುನ್ಮಾನ ಸಾಧನಗಳು ಮತ್ತು ಸಿಡಿಆರ್ ವಿಶ್ಲೇಷಣೆಯು ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಇನ್ನೂ ನಡೆಯಬೇಕಿದೆ. ಹಾಗಾಗಿ ತನಿಖೆಗಾಗಿ ಆರೋಪಿಗಳ ನ್ಯಾಯಾಂಗ ಬಂಧನ ಅಗತ್ಯವಿದೆ ಎಂದರು.
ಅಲ್ಲದೆ, ಹತ್ಯೆ ನಡೆಸಿ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸಲು ನಡೆಸಲಾದ ಸಂಚನ್ನು ಕಾರ್ಯಗತಗೊಳಿಸಿದ ಬಗೆ, ಅದಕ್ಕಾಗಿ ಎಲ್ಲಿಂದ ಹಣಕಾಸಿನ ನೆರವು ಪಡೆಯಲಾಯಿತು ಎಂಬುದನ್ನೆಲ್ಲಾ ಪತ್ತೆ ಹಚ್ಚಬೇಕಿದೆ. ಆದಕಾರಣ, ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ)-1967ರ ಕಲಂ 43ಡಿ (2)(ಬಿ) ಅಡಿಯಲ್ಲಿ 190 ದಿನಗಳಿಗೆ ವಿಸ್ತರಿಸಿ ಆದೇಶಿಸಬೇಕು ಎಂದು ಕೋರಿದರು.
ಅದಕ್ಕೆ ಒಪ್ಪಿದ ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 190 ದಿನಗಳಿಗೆ ವಿಸ್ತರಿಸಿ ಆದೇಶಿಸಿದರು.
ಪ್ರಕರಣದ ಹಿನ್ನೆಲೆ:
2022ರ ಫೆ.20ರಂದು ರಾತ್ರಿ 9 ಗಂಟೆಯ ವೇಳೆಯಲ್ಲಿ ಶಿವಮೊಗ್ಗದಲ್ಲಿ ಹರ್ಷ ಹತ್ಯೆಯಾಗಿತ್ತು. ಇದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಗದ್ದಲ ಕೋಲಾಹಲಕ್ಕೆ ಕಾರಣವಾಗಿತ್ತು ಈ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಲಾಗಿದ್ದು ಈವರೆವಿಗೂ ಹತ್ತು ಜನ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ತನಿಖೆಗೆ ಆದೇಶ:
ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯ ನಂತರ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಸಂಕಷ್ಟ ಎದುರಾಗಿತ್ತು. ಧಾರ್ಮಿಕ ಭಾವನೆಗಳಿಗೆ ಧಕ್ಕೆ, ಕೋಮು ವೈಷಮ್ಯದ ಹೇಳಿಕೆ ನೀಡಿದ್ದಾರೆಂದು ರಿಯಾಜ್ ಅಹಮದ್ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶರಾದ ಪ್ರೀತ್. ಜೆ ತನಿಖೆ ನಡೆಸಿ ವರದಿ ಸಲ್ಲಿಸಲು ಶಿವಮೊಗ್ಗದ ದೊಡ್ಡಪೇಟೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ.
ರಿಯಾಜ್ ಅಹ್ಮದ್ ಪರ ವಕೀಲರು, ಆರೋಪಿಗಳಾದ ಈಶ್ವರಪ್ಪ ಮತ್ತು ಚೆನ್ನಬಸಪ್ಪ ಅವರ ವಿರುದ್ದ ಭಾರತೀಯ ದಂಡ ಸಂಹಿತೆ ಸೆಕ್ಷನ್ 124(ಎ), 153(ಎ), 153(ಬಿ), 295(ಎ), 295(ಬಿ), 505(2) ಮತ್ತು 504 ಜೊತೆಗೆ ಸೆಕ್ಷನ್ 34ರ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲು ದೊಡ್ಡಪೇಟೆ ಪೊಲೀಸರಿಗೆ ನಿರ್ದೇಶಿಸಬೇಕು ಎಂದು ನ್ಯಾಯಾಲಯವನ್ನು ಕೋರಿದ್ದರು.
ಫೆಬ್ರವರಿ 20ರಂದು ರಾತ್ರಿ 9 ಗಂಟೆ ಸುಮಾರಿಗೆ ಹರ್ಷ ಕೊಲೆಯಾಗಿತ್ತು.ಮರುದಿನವೇ ಶಿವಮೊಗ್ಗದಲ್ಲಿ ನಡೆದಿದ್ದ ಭಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆಗೆ ಮುಸ್ಲಿಂ ಗೂಂಡಾಗಳೇ ಕಾರಣ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಬಹಿರಂಗವಾಗಿ ಆರೋಪಿಸಿದ್ದರು.