ಶಿವಮೊಗ್ಗ; ಹುಣಸೋಡು ಸ್ಪೋಟ, ಮೂವರ ವಿರುದ್ಧದ ಆರೋಪ ಪಟ್ಟಿ ರದ್ದು
ಬೆಂಗಳೂರು, ನವೆಂಬರ್ 14: ಇಡೀ ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ಶಿವಮೊಗ್ಗ ಗ್ರಾಮಾಂತರದ ಪ್ರದೇಶದ ಹುಣಸೋಡುವಿನಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಸ್ಫೋಟ ಪ್ರಕರಣದ ಮೂವರು ಆರೋಪಿಗಳ ವಿರುದ್ಧದ ಆರೋಪ ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ತಾಂತ್ರಿಕ ಅಂಶಗಳ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಕ್ರಮವನ್ನು ಕೈಗೊಂಡಿದ್ದು, ಇದರಿಂದ ಕಲ್ಲು ಕ್ವಾರಿ ಮಾಲೀಕರು ನಿರಾಳರಾಗುವಂತಾಗಿದೆ.
ಕ್ವಾರಿ ಗುತ್ತಿಗೆದಾರರಾದ ಸುಪ್ರೀಂ ಟ್ರೇಡರ್ಸ್ ಮಾಲೀಕ, ಆಂಧ್ರಪ್ರದೇಶದ ಅನಂತಪುರದ ಮಂಜುನಾಥ ಸಾಯಿ , ಪೃಥ್ವಿ ಎಂಟರ್ಪ್ರೈಸಸ್ ಮಾಲೀಕ ಪಿ. ಪೃಥ್ವಿನಾಥ ಸಾಯಿ ಮತ್ತು ಶಿವಮೊಗ್ಗದ ಬಿ. ವಿ. ಸುಧಾಕರ ಅವರು ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಮುಂದುವರಿದ ತನಿಖೆ ನಡೆಸಿ ಕಾನೂನು ಪ್ರಕಾರ ವಿಚಾರಣಾ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲು ಸ್ವತಂತ್ರರಿದ್ದಾರೆ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.
ನ್ಯಾಯಾಲಯದ ಆದೇಶವೇನು?; ನ್ಯಾಯಪೀಠ, ಕಾನೂನಿನಲ್ಲಿನ ತಾಂತ್ರಿಕ ಅಂಶದ ನ್ಯೂನ್ಯತೆಯ ಆಧಾರದಡಿ 2, 3 ಮತ್ತು 10ನೇ ಆರೋಪಿಗಳಾದ ಕ್ರಮವಾಗಿ ಮಂಜುನಾಥ ಸಾಯಿ, ಪೃಥ್ವಿ ಸಾಯಿ ಹಾಗೂ ಸುಧಾಕರ ವಿರುದ್ಧ ಶಿವಮೊಗ್ಗ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ರದ್ದುಪಡಿಸಿದೆ.
ಅರ್ಜಿದಾರರ ಪರ ವಕೀಲರ, ಈ ಅಪರಾಧ ಪ್ರಕರಣ ಮೊದಲಿಗೆ ಶಿವಮೊಗ್ಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ನಂತರ ಪೂರ್ವವಲಯದ ಐಜಿಪಿ ಇದನ್ನು 'ಸೆನ್' (ಸೈಬರ್, ಎಕನಾಮಿಕ್ ಅಂಡ್ ನಾರ್ಕೊಟಿಕ್ ಕ್ರೈಂ) ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ತನಿಖೆ ನಡೆಸುವಂತೆ ಸುತ್ತೋಲೆ ಹೊರಡಿಸಿದ್ದಾರೆ.
ಐಪಿಸಿ, ಸ್ಫೋಟಕ ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ದಾಖಲಾದ ಪ್ರಕರಣಗಳ ತನಿಖೆಯನ್ನು ಈ ರೀತಿ ಸೆನ್ಗೆ ವರ್ಗಾವಣೆ ಮಾಡುವ ಅಧಿಕಾರವು ಡಿಜಿ ಮತ್ತು ಐಜಿಪಿ, ರಾಜ್ಯ ಸರ್ಕಾರ, ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ಗೆ ಮಾತ್ರ ಇದೆ, ಇತರರಿಗೆ ಇಲ್ಲ. ಆದ್ದರಿಂದ, ಈ ಪ್ರಕರಣದಲ್ಲಿ ಐಜಿಪಿ ನಿರ್ಧಾರವು ಕಾನೂನು ಬಾಹಿರವಾಗಿದ್ದು ದೋಷಾರೋಪ ಪಟ್ಟಿ ರದ್ದುಪಡಿಸಬೇಕು ಎಂದು ಮನವಿ ಮಾಡಿದ್ದರು.
ಪ್ರಕರಣದ ಹಿನ್ನೆಲೆ: ಶಿವಮೊಗ್ಗ ನಗರ ಹೊರವಲಯದ ಹುಣಸೋಡು ಬಳಿ 2021ರ ಜನವರಿ 21ರಂದು ರಾತ್ರಿ ಭಾರೀ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 7 ಜನ ಮೃತಪಟ್ಟಿದ್ದರು. ಕಲ್ಲು ಕ್ವಾರಿಗಳಿಗೆ ಉಪಯೋಗಿಸಲು ಜಿಲೆಟಿನ್ ಕಡ್ಡಿಗಳು ಮತ್ತು ಸಿಡಿಮದ್ದುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿ ಕ್ರಷರ್ ಪ್ರದೇಶದಲ್ಲಿ ಸ್ಫೋಟಗೊಂಡು ಈ ದುರಂತ ಸಂಭವಿಸಿದೆ ಎಂದು ಆರೋಪಿಸಲಾಗಿತ್ತು.
ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳು ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 286 (ಸ್ಫೋಟಕ ವಸ್ತುಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ನಡವಳಿಕೆ) 304 (ಸಾವನ್ನು ಉಂಟು ಮಾಡುವ ಉದ್ದೇಶವಿಲ್ಲದೆ ಎಸಗುವ ಕೃತ್ಯ) ಮತ್ತು 201 (ಪುರಾವೆ ನಾಶ), ಸ್ಫೋಟಕ ಕಾಯ್ದೆ-1884ರ ಕಲಂ 3 (ಎ) (ಬಿ) ಮತ್ತು 5ರ ಅನುಸಾರ ಒಟ್ಟು 15 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ನಂತರ ಶಿವಮೊಗ್ಗ ಸೆಷನ್ಸ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.












Click it and Unblock the Notifications