ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್, ಸರ್ಕಾರದ ಸ್ಪಷ್ಟನೆ
Recommended Video

ಬೆಂಗಳೂರು, ಸೆಪ್ಟೆಂಬರ್ 15 : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಡಾ.ಕೆ.ಶಿವರಾಮ ಕಾರಂತ ಬಡಾವಣೆಯಲ್ಲಿ ಯಾವುದೇ ಜಮೀನನ್ನು ಡಿನೋಟಿಫೈ ಮಾಡಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಡಾ.ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿ. ಎಸಿಬಿ ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಿದೆ. ಅದನ್ನು ರದ್ದುಗೊಳಿಸುವಂತೆ ಕೋರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಾಲಯದಲ್ಲಿ ಈ ಕುರಿತು ವಿಚಾರಣೆ ನಡೆಯುತ್ತಿದೆ.

ಹೈಕೋರ್ಟ್ನಲ್ಲಿ ವಾದ ಮಂಡನೆ ಮಾಡುವಾಗ ಯಡಿಯೂರಪ್ಪ ಪರ ವಕೀಲರು ಡಾ.ಕೆ.ಶಿವರಾಮ ಕಾರಂತ ಬಡಾವಣೆಯಲ್ಲಿ ಸರ್ಕಾರ 1,300 ಎಕರೆ ಡಿನೋಟಿಫೈ ಮಾಡಿದೆ ಎಂದು ವಾದ ಮಂಡಿಸಿದ್ದಾರೆ. ಆದ್ದರಿಂದ, ಮುಖ್ಯಮಂತ್ರಿಗಳ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದೆ.

ಸರ್ಕಾರದ ಸ್ಪಷ್ಟನೆ..
ಡಾ.ಕೆ.ಶಿವರಾಮ ಕಾರಂತ ಬಡಾವಣೆ ರಚನೆಗೆ 3546ಎಕರೆ ಜಮೀನನ್ನು 2008ರಲ್ಲಿ ಅಧಿಸೂಚಿಸಲಾಗಿತ್ತು. ಉದ್ದೇಶಿತ ಭೂಸ್ವಾಧೀನದಲ್ಲಿ 257.20 ಎಕರೆ ಜಮೀನನ್ನು ಹೊರತುಪಡಿಸಲು ಹಿಂದಿನ ಸರ್ಕಾರವು 2008 ರಿಂದ 2010ರಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿತ್ತು.
ಅಂತೆಯೇ 2012 ರಿಂದ 2014ರ ಅವಧಿಯಲ್ಲಿ ಅರ್ಕಾವತಿ ಬಡಾವಣೆಗೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯ/ಉಚ್ಛ ನ್ಯಾಯಾಲಯದ ಆದೇಶಗಳಲ್ಲಿನ ಮಾನದಂಡಗಳಿಗೆ ಅನುಗುಣವಾಗಿ ಬಿಡಿಎ ಭೂ ಸ್ವಾಧೀನಾಧಿಕಾರಿಗಳು 446.07 ಎಕರೆ ಜಮೀನನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಹೊರತುಪಡಿಸಿದ್ದಾರೆ.
ಡಾ.ಕೆ.ಶಿವರಾಮ ಕಾರಂತ ಬಡಾವಣೆ ಭೂ ಸ್ವಾಧೀನ ಮಾಡಿರುವುದನ್ನು ಕರ್ನಾಟಕ ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ. ಅಂತಿಮ ಅಧಿಸೂಚನೆ ಹೊರಡಿಸುವ ಮೂಲಕ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಲ್ಲಿ ಐತೀರ್ಪು ರಚಿಸುವಲ್ಲಿ, ಹಣ ಪಾವತಿಸುವಲ್ಲಿ, ಜಮೀನು ವಶಕ್ಕೆ ಪಡೆಯುವಲ್ಲಿ ರಾಜ್ಯ ಸರ್ಕಾರ ಹಾಗೂ ಬಿಡಿಎ ಯಾವುದೇ ಕ್ರಮವನ್ನು ಕೈಗೊಳ್ಳದ ಹಿನ್ನಲೆಯಲ್ಲಿ ಹೈಕೋರ್ಟ್ ಬಡಾವಣೆ ನಿರ್ಮಾಣ ಯೋಜನೆಯನ್ನು 2/9/2015ರ ಆದೇಶದಲ್ಲಿ ಅನೂರ್ಜಿಗೊಳಿಸಿದೆ.












Click it and Unblock the Notifications