ಎಲ್ಲೆಡೆ ಮಹಾಶಿವರಾತ್ರಿಯ ಸಂಭ್ರಮ: ರಾತ್ರಿಯಿಡಿ ಜಾಗರಣೆಗೆ ಸಿದ್ಧತೆ
ಬೆಂಗಳೂರು ಮಾರ್ಚ್ 01: ಇಂದು ಎಲ್ಲೆಡೆ ಮಹಾಶಿವರಾತ್ರಿಯನ್ನು ಸಡಗರಿಂದ ಆಚರಿಸಲಾಗುತ್ತಿದೆ. ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದಾದ ಮಹಾಶಿವರಾತ್ರಿ ಆಚರಣೆಯ ಹಿಂದೆ ಐತಿಹಾಸಿಕ ಹಿನ್ನಲೆಯಿದೆ. ಜೊತೆಗೆ ಮಹಾಶಿವರಾತ್ರಿ ಆಚರಣೆಗೆ ಅನೇಕ ಕಥೆಗಳಿವೆ. ಶಿವನು ಪಾರ್ವತಿ ದೇವಿಯನ್ನು ವಿವಾಹವಾದ ದಿನವನ್ನು ಶಿವರಾತ್ರಿಯೆಂದು ಹೇಳಲಾಗುತ್ತದೆ. ಅಲ್ಲದೆ, ದೇವತೆಗಳು ಹಾಗೂ ಅಸುರರ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ. ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣದ ಇನ್ನೊಂದು ಮಹಿಮೆ. ಜತೆಗೆ ಭಗೀರಥನ ತಪಸ್ಸಿಗೆ ಮೆಚ್ಚಿ ಇಳೆಗೆ ಇಳಿದು ಬಂದ ಗಂಗೆಯನ್ನು ಶಿವ ತನ್ನ ಜಡೆಯಲ್ಲಿ ತುಂಬಿಸಿಕೊಂಡಿದ್ದ. ಇದರಿಂದ ವಿಚಲಿತನಾದ ಭಗೀರಥ ಗಂಗೆಯನ್ನು ಭೂಮಿಗೆ ಹರಿಸುವಂತೆ ಶಿವನನ್ನು ಪ್ರಾರ್ಥಿಸಿದ. ಆತನ ಭಕ್ತಿಗೆ ಮೆಚ್ಚಿ ಶಿವ ಗಂಗೆಯನ್ನು ಹರಿಯಬಿಟ್ಟಿದ್ದು ಇದೇ ದಿನ ಎನ್ನುತ್ತದೆ ಪುರಾಣ. ಇನ್ನು, ಶಿವನ ಆದಿ ಮತ್ತು ಅಂತ್ಯ ಹುಡುಕಲು ಹೊರಟ ವಿಷ್ಣು ಹಾಗೂ ಬ್ರಹ್ಮನಿಗೆ, ಶಿವರಾತ್ರಿಯಂದು ಶಿವ ಲಿಂಗರೂಪಿಯಾಗಿ ದರ್ಶನ ನೀಡಿದ ಎಂಬುದು ಪ್ರತೀತಿ ಇದೆ. ಹೀಗೆ ಹಲವು ನಂಬಿಕೆಗಳಿಂದ ಮಹಾ ಶಿವರಾತ್ರಿಯನ್ನು ಆಚರಿಸಲಾಗುತ್ತದೆ. ರಾತ್ರಿಯಿಂದ ಶಿವನ ಆರಾಧನೆ ಮಾಡುತ್ತಾ ಜಾಗರಣೆ ಮಾಡಲಾಗುತ್ತದೆ.
ಕರ್ನಾಟಕದಲ್ಲೂ ಮಹಾಶಿವರಾತ್ರಿಯ ಸಕಲ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಹಲವೆಡೆ ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರಾತ್ರಿಯಿಡಿ ಹಮ್ಮಿಕೊಳ್ಳಲಾಗಿದೆ. ಶಿವನ ಪ್ರಮುಖ ದೇವಾಲಯಗಳು ಮಹಾಶಿವರಾತ್ರಿ ಆಚರಣೆಗೆ ಸುಂದರವಾಗಿ ಅಲಂಕಾರಗೊಂಡಿವೆ. ನೂರಾರು ಭಕ್ತರು ಬೆಳಗ್ಗೆಯಿಂದಲೂ ದೇವಸ್ತಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಶಿವನ ದರ್ಶನ ಪಡೆಯುತ್ತಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆ ಆವರಣದಲ್ಲಿರುವ ಶ್ರೀ ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ಮೂಲ ದೇವರಿಗೆ ಚಿನ್ನದ ಕೊಳಗ ಧಾರಣೆಯನ್ನು ಮಾಡಲಾಗಿದೆ. ಅದಕ್ಕಾಗಿ ಮೈಸೂರು ಜಿಲ್ಲಾಡಳಿತದ ಖಜಾನೆಯಲ್ಲಿದ್ದ 11 ಕೆಜಿ ತೂಕದ ಚಿನ್ನದ ಶಿವನ ಮುಖವಾಡವನ್ನು ಮುಜರಾಯಿ ಇಲಾಖೆ ದೇವಳದ ಅರ್ಚಕರಿಗೆ ಹಸ್ತಾಂತರಿಸಿದೆ.
ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ
ಶಿವಲಿಂಗಕ್ಕೆ ವರ್ಷಕ್ಕೆ ಒಂದೇ ಬಾರಿ ಚಿನ್ನದ ಲೇಪಿತ ಕೊಳಗವನ್ನು ತೊಡಿಸಲಾಗುತ್ತದೆ. ಇಂದು ಬೆಳಗ್ಗೆ 5ಗಂಟೆಯಿಂದಲೇ ಧಾರ್ಮಿಕ ವಿಧಿ ವಿಧಾನಗಳು ನಡೆದಿವೆ. ಮುಂಜಾನೆ ವಿಶೇಷ ಪೂಜೆ ನೆರವೇರಿಸಿ ದೇವಾಲಯದ ಶಿವಲಿಂಗಕ್ಕೆ ಚಿನ್ನದ ಕೊಳಗವನ್ನು ಧಾರಣೆ ಮಾಡಲಾಗಿದೆ. ಸಂಜೆಯವರೆಗೆ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಇನ್ನೂ ಚಿಕ್ಕಮಗಳೂರಿನಲ್ಲಿ ಶಿವರಾತ್ರಿ ಪ್ರಯುಕ್ತ ವಿನಯ್ ಗುರೂಜಿ ಆಶ್ರಯದಲ್ಲಿ ವಿಶೇಷ ಪೂಜೆ-ಹೋಮ-ಹವನ ಮಾಡಲಾಯಿತು. ಶಿವರಾತ್ರಿಗಾಗಿ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ದತ್ತಾಶ್ರಮದಲ್ಲಿ 24 ಗಂಟೆಗಳ ಕಾಲ ಲಿಂಗ ಪೂಜೆ, ರುದ್ರಾಭಿಷೇಕ, ಭಜನೆ, ಭಕ್ತಿ ಸಂಗೀತ ಎಲ್ಲಾ ಸಿದ್ಧತೆಗಳನ್ನು ಆಶ್ರಮ ಮಾಡಿಕೊಂಡಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆವರೆಗೆ ಭಕ್ತಿ ಭಾವದ ಶಿವರಾತ್ರಿ ನಡೆಯಲಿದೆ.
ಇನ್ನೂ ಬೆಂಗಳೂರಿನ ಪ್ರಮುಖ ಹಾಗೂ ಪ್ರಸಿದ್ಧ ದೇವಸ್ಥಾನಗಳಲ್ಲಿ ರಾಜಾಜಿನಗರದಲ್ಲಿರುವ ಓಂಕಾರೇಶ್ವರ ದೇವಸ್ಥಾನ, ಮುರುಗೇಶಪಾಳ್ಯದ ಕೆಂಪ್ ಫೋರ್ಟ್ ಶಿವ, ಕಾಡುಮಲ್ಲೇಶ್ವರ ದೇವಸ್ಥಾನಗಳಲ್ಲಿ ಶಿವರಾತ್ರಿ ವಿಶೇಷ ಪೂಜೆಗಳು ನಡೆಯುತ್ತಿವೆ. ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತಃ ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಹೀಗಾಗಿ ಮಾಘ ಬಹುಳ ಚತುರ್ದಶಿಯ ರಾತ್ರಿಯೇ ಶಿವ ಪಾರ್ವತಿಯನ್ನು ವರಿಸಿದ್ದನಂತೆ. ಹೀಗಾಗಿ ಅಂದು ರಾತ್ರಿ ದೇವಾನು ದೇವತೆಗಳೆಲ್ಲರೂ ಜಾಗರಣೆ ಮಾಡಿ, ಗಿರಿಜಾ ಕಲ್ಯಾಣ ವೀಕ್ಷಿಸಿ, ಶಿವಪಾರ್ವತಿಯರಿಬ್ಬರನ್ನೂ ಪೂಜಿಸಿದರಂತೆ. ಹೀಗಾಗಿಯೇ ಜಾಗರಣೆ ಪದ್ಧತಿ ಆಚರಣೆಗೆ ಬಂದಿದೆ ಎನ್ನಲಾಗುತ್ತದೆ.
ಈ ದಿನದಂದು ಮಾಡುವ ಶಿವನ ಪೂಜೆ, ಉಪವಾಸಗಳು ತುಂಬಾ ಉಪಯುಕ್ತ ಎಂದು ನಂಬಲಾಗುತ್ತದೆ. ಇಂದು ಪರಶಿವನಿಗೆ ನೀರಿನ ಅಭಿಷೇಕ ಮತ್ತು ಬಿಲ್ವ ಪತ್ರೆಯ ಪೂಜೆ ಮಾಡಲಾಗುತ್ತದೆ. ಬಿಲ್ವ ಪತ್ರೆಯಲ್ಲಿ ಉಸಿರಾಟದ ತೊಂದರೆ ನಿವಾರಿಸುವ ಗುಣವಿದೆ. ಬಿಲ್ವವನ್ನು ಲಿಂಗದ ಮೇಲೆ ಹಾಕುವಾಗ ಅದರ ವಾಸನೆ ನಮ್ಮ ದೇಹದ ಒಳಗೆ ಹೋಗುವುದು. ಶಿವನ ಲಿಂಗವು ಕಲ್ಲಿನದಾಗಿದ್ದು ಅದರ ಮೇಲೆ ನೀರನ್ನು ಸುರಿಯುವುದರಿಂದ ಬಹಳಷ್ಟು ಶಕ್ತಿ ಹೊರಹೊಮ್ಮುತ್ತದೆ. ಈ ವೇಳೆ ಮಂತ್ರಗಳನ್ನು ಪಠಿಸುತ್ತಾ ವಿಶಿಷ್ಟ ಕಲ್ಲಿನಿಂದ ಕೆತ್ತಿರುವ ಲಿಂಗಕ್ಕೆ ನೀರಿನ ಅಭಿಷೇಕ ಮಾಡುವುದರಿಂದ ಸುತ್ತಮುತ್ತಲೆಲ್ಲ ಹೆಚ್ಚಿನ ಶಕ್ತಿ ಬರುವುದೆಂಬ ನಂಬಿಕೆ ಇದೆ.