ಸೂಕ್ಷ್ಮ ಮತಗಟ್ಟೆಗಳ ಗುರುತಿಸಲು ಕೇಳಿದ ಶೋಭಾ: ಚುನಾವಣಾ ಅಕ್ರಮದ ಶಂಕೆ ವ್ಯಕ್ತಪಡಿಸಿದ ಸಿದ್ದರಾಮಯ್ಯ
ಬೆಂಗಳೂರು, ಏಪ್ರಿಲ್ 27: ಬಿಜೆಪಿ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟ್ಗಳಿಗೆ ಕರ್ನಾಟಕ ರಾಜ್ಯದಲ್ಲಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳ ವಿವರ ಸಲ್ಲಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಬರೆದಿರುವ ಪತ್ರದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷರುಗಳಿಗೆ ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸದಸ್ಯರೂ ಆಗಿರುವ ಶೋಭಾ ಕರಂದ್ಲಾಜೆ ಅವರು ಬರೆದಿರುವ ಪತ್ರವನ್ನು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ? ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ? ಎಂದು ಪ್ರಶ್ನಿಸಿದ್ದಾರೆ.

ಶೋಭಾ ಕರಂದ್ಲಾಜೆ ಅವರು ಬರೆದಿರುವ ಪತ್ರದಲ್ಲಿ ಯಾವ ಯಾವ ಮತಗಟ್ಟೆಗಳನ್ನು ಸೂಕ್ಷ್ಮವೆಂದು ಘೋಷಿಸಬೇಕು. ಯಾವ ಭಾಗದಲ್ಲಿ ಕೇಂದ್ರ ಸೇನಾಪಡೆಗಳು ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಬೇಕು. ಅಲ್ಲದೆ ಯಾವ ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್ ಮತ್ತು ವಿಡಿಯೋ ರೆಕಾರ್ಡಿಂಗ್ ಸೇವೆ ಅಗತ್ಯವಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
ಅದಕ್ಕೆ ಆಕ್ಷೇಪಿಸಿರುವ ಸಿದ್ದರಾಮಯ್ಯ ತಮ್ಮ ಬಿಜೆಪಿ ಪಕ್ಷದ ಪರವಾಗಿಲ್ಲದ ಮತದಾರರು ಇರುವ ಮತಗಟ್ಟೆಗಳಲ್ಲಿ ಭದ್ರತೆಯ ನೆಪದಲ್ಲಿ ಕೇಂದ್ರ ಸೇನಾಪಡೆಗಳನ್ನು ನಿಯೋಜಿಸಿ ಮತದಾರರನ್ನು ಬೆದರಿಸಿ ಅವರು ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶವಾಗಿದೆ ಎಂದು ಆರೋಪಿಸಿದ್ದಾರೆ.

ಚುನಾವಣಾ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮತ್ತು ವಿಡಿಯೋ ರೆಕಾರ್ಡಿಂಗ್ ಮಾಡುವ ಹೊಣೆ ಚುನಾವಣಾ ಆಯೋಗದಲ್ಲವೇ? ಇದನ್ನು ನಡೆಸಲು ರಾಜಕೀಯ ಪಕ್ಷಕ್ಕೆ ಅನುಮತಿ ಕೊಟ್ಟವರು ಯಾರು? ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಈ ಪತ್ರ ಬರೆದಿರುವುದನ್ನು ನೋಡಿದರೆ ಕೇಂದ್ರ ಬಿಜೆಪಿ ಸರ್ಕಾರವೇ ಈ ಅಕ್ರಮ ಚಟುವಟಿಕೆಯಲ್ಲಿ ಷಾಮೀಲಾಗುರುವುದು ಸ್ಪಷ್ಟವಾಗಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯೆಪ್ರವೇಶಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ವಿಚಾರಣೆಗೊಳಪಡಿಸಿ ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿಷೇಧಿಸಬೇಕು. ಅವರು ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳಿಂದ ಪಡೆದಿರುವ ಮಾಹಿತಿಯನ್ನು ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.












Click it and Unblock the Notifications