ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟಕ್ಕೆ 'ಶೋಭಾ' ಹೆಸರು ಸೂಚಿಸಿದ ಬಿಎಸ್ವೈ: ಇದು ರಾಜಾಹುಲಿಯ ಹೊಸ ಆಟ- ಯಾರೆಗೆಲ್ಲಾ ಶಾಕ್?
ಬೆಂಗಳೂರು, ಜುಲೈ 04: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡು 50 ದಿನಗಳು ಕಳೆದರೂ ವಿರೋಧ ಪಕ್ಷದ ನಾಯಕರನ್ನು ಬಿಜೆಪಿ ಆಯ್ಕೆ ಮಾಡಿಲ್ಲ. ರಾಜ್ಯಾಧ್ಯಕ್ಷರ ಅಧಿಕಾರಾವಧಿ ಮುಗಿದರೂ ಹೊಸ ಅಧ್ಯಕ್ಷರು ನೇಮಕವಾಗಿಲ್ಲವೆಂಬ ಆರೋಪಗಳು ಬಿಜೆಪಿ ವಿರುದ್ಧ ಕೇಳಿಬಂದಿವೆ. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಿಲ್ಲದೇ ವಿಧಾನಸಭೆ ಕಲಾಪ ನಡೆಯುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಈ ಬೆಳವಣಿಗೆಗಳ ನಡುವೆಯೇ ಬಿಜೆಪಿ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷ ಆಯ್ಕೆ ಕಸರತ್ತನ್ನು ಮುಂದುವರಿಸಿದೆ. ರಾಜ್ಯಾಧ್ಯಕ್ಷರ ಪಟ್ಟಕ್ಕೆ ಬಿಜೆಪಿಯಲ್ಲಿ ಹಲವರು ಆಕಾಂಕ್ಷಿಗಳಿದ್ದಾರೆ. ಆದರೆ, ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಶೋಭಾ ಕರಂದ್ಲಾಜೆ ಹೆಸರು ಮುನ್ನೆಲೆಗೆ ಬಂದಿರುವುದು ತೀವ್ರ ಕುತೂಹಲವನ್ನು ಕೆರಳಿಸಿದೆ. ವಿಶೇಷವಾಗಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶೋಭಾ ಅವರ ಹೆಸರನ್ನು ಹೈಕಮಾಂಡ್ಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಲಿಂಗಾಯತ ಸಮುದಾಯದಿಂದ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿದರೆ, ಜಾತಿ ಸಮೀಕರಣಗಳನ್ನು ಸರಿದೂಗಿಸಲು ಪಕ್ಷವು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒಕ್ಕಲಿಗ ಸಮುದಾಯಕ್ಕೆ ಸೇರಿದ ಶೋಭಾ ಅವರ ಹೆಸರನ್ನು ಬಿಎಸ್ವೈ ಸೂಚಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.
ಪಕ್ಷದ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕಿಯಾಗಿದ್ದ ಶೋಭಾ ಕರಂದ್ಲಾಜೆ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನಿಕಟವರ್ತಿಯಾಗಿದ್ದಾರೆ. ಆದರೆ, ಕಳೆದ ಕೆಲ ವರ್ಷಗಳಿಂದ ರಾಷ್ಟ್ರ ರಾಜಕಾರಣದಲ್ಲಿ ಶೋಭಾ ಕರಂದ್ಲಾಜೆ ಸಕ್ರಿಯರಾಗಿದ್ದಾರೆ. ಆದರೂ, ಶೋಭಾರನ್ನು ಮತ್ತೆ ರಾಜ್ಯ ರಾಜಕಾರಣಕ್ಕೆ ಕರೆತರುವ ಮೂಲಕ ಬಿಎಸ್ ಯಡಿಯೂರಪ್ಪ ಅವರು ತಮ್ಮ ಪ್ರಾಬಲ್ಯವನ್ನು ಮುಂದುವರಿಸಲು ಚಿಂತಿಸಿದ್ದಾರೆ ಎನ್ನಲಾಗುತ್ತಿದೆ.

ಯಾರೆಗೆಲ್ಲಾ ಶಾಕ್?
ಹಳೆ ಮೈಸೂರು ಭಾಗದಲ್ಲಿ ಪರಾಭವಗೊಂಡಿದ್ದರೂ, ಬಿಜೆಪಿ ತನ್ನ ಮತಗಳಿಕೆಯನ್ನು ಹೆಚ್ಚಿಸಿಕೊಂಡಿದೆ. ದಕ್ಷಿಣ ಕರ್ನಾಟಕದಲ್ಲಿ ಪಕ್ಷವನ್ನು ಬೆಳೆಸಬೇಕೆಂದರೆ, ಒಕ್ಕಲಿಗ ಸಮುದಾಯಕ್ಕೆ ಸೇರಿದ ನಾಯಕರಿಗೆ ಪ್ರಮುಖ ಸ್ಥಾನವನ್ನು ನೀಡಬೇಕೆಂಬುದು ಪಕ್ಷದೊಳಗಿನ ಕೂಗಾಗಿದೆ. ಈ ಹಿನ್ನೆಲೆಯಲ್ಲಿ ಹಲವು ಒಕ್ಕಲಿಗ ನಾಯಕರು ಪಕ್ಷದ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಮಲ್ಲೇಶ್ವರಂ ಶಾಸಕ ಡಾ ಸಿಎನ್ ಅಶ್ವತ್ಥನಾರಾಯಣ ಹಾಗೂ ಪದ್ಮನಾಭನಗರ ಶಾಸಕ ಆರ್ ಅಶೋಕ್ ಅವರು ರಾಜ್ಯಾಧ್ಯಕ್ಷ ಪಟ್ಟಕ್ಕೆ ಆಕಾಂಕ್ಷಿಗಳಾಗಿದ್ದಾರೆ. ಇವರೆಲ್ಲರೂ ಒಕ್ಕಲಿಗ ಸಮುದಾಯಕ್ಕೆ ಸೇರಿದ ನಾಯಕರು. ಈಗ ಶೋಭಾ ಹೆಸರು ಮುನ್ನೆಲೆಗೆ ಬಂದಿರುವುದು ಇವರೆಲ್ಲರಿಗೂ ಶಾಕ್ ನೀಡಿದೆ ಎಂದು ಹೇಳಲಾಗುತ್ತಿದೆ.
ಸಿಟಿ ರವಿ ಹಾಗೂ ಡಾ ಸಿಎನ್ ಅಶ್ವತ್ಥನಾರಾಯಣ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ( ಸಂಘಟನಾ ) ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ಬಳಗದಲ್ಲಿ ಗುರುತಿಸಿಕೊಂಡವರು. ಈ ಹಿನ್ನೆಲೆಯಲ್ಲಿ ಬಿಎಸ್ವೈ ಹೊಸ ಆಟಕ್ಕೆ ನಾಂದಿ ಹಾಡಿದ್ದಾರೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.












Click it and Unblock the Notifications