ಕಲಬುರ್ಗಿ ಹತ್ಯೆ : ಕಾಂಗ್ರೆಸ್ ಮೌನಕ್ಕೆ ಕಾರಣವೇನು?
ಬೆಂಗಳೂರು, ಅಕ್ಟೋಬರ್ 14 : ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಅಧಿಕಾರ ವಹಿಸಿಕೊಂಡ ಬಳಿಕ ಸಾಹಿತಿಗಳ ಮನೆಗೆ ಭೇಟಿ ನೀಡಿದ್ದರು. ಮಠದ ಸ್ವಾಮೀಜಿಗಳನ್ನು ಭೇಟಿ ಮಾಡದೇ ಸಾಹಿತಿಗಳ ನಿವಾಸಕ್ಕೆ ಹೋಗಿದ್ದರ ಬಗ್ಗೆ ಹಲವು ದಿನ ಚರ್ಚೆ ನಡೆಯುತ್ತಿತ್ತು. ಸದ್ಯದ ಪ್ರಶ್ನೆ ಎಂದರೆ ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ಬಗ್ಗೆ ಕಾಂಗ್ರೆಸ್ ಏಕೆ ಮೌನವಾಗಿದೆ? ಎಂಬುದು.
ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆಯನ್ನು ಖಂಡಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಹತ್ಯೆಯನ್ನು ಖಂಡಿಸಿ ಸಾಹಿತಿಗಳು ಪ್ರಶಸ್ತಿಯನ್ನು ವಾಪಸ್ ನೀಡುತ್ತಿದ್ದಾರೆ. ರೆಹಮತ್ ತರೀಕೆರೆ ಸೇರಿದಂತೆ ಹಲವರು ಈಗಾಗಲೇ ಪ್ರಶಸ್ತಿಯನ್ನು ವಾಪಸ್ ನೀಡಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕೆ ಪ್ರತಿಕ್ರಿಯೆ ನೀಡುತ್ತಿಲ್ಲ ಎಂಬುದು ಪ್ರಶ್ನೆ?. [ಪ್ರಶಸ್ತಿ ವಾಪಸ್ ಕೊಟ್ಟವರು ಯಾರು?]

ಕಾಂಗ್ರೆಸ್ ವಕ್ತಾರ ಬ್ರಿಜೇಶ್ ಕಾಳಪ್ಪ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. 'ಈ ವಿವಾದದ ಬಗ್ಗೆ ಮುಖ್ಯಮಂತ್ರಿಗಳನ್ನು ದೂಷಿಸುವುದು ತಪ್ಪು. ಸಾಹಿತಿಗಳು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ನೀಡಿದ ಪ್ರಶಸ್ತಿಗಳನ್ನು ವಾಪಸ್ ನೀಡುತ್ತಿದ್ದಾರೆ.' ಎಂದು ಕಾಳಪ್ಪ ಹೇಳಿದ್ದಾರೆ. [ಕಲಬುರ್ಗಿ ಹತ್ಯೆ : ಪೊಲೀಸರ ಹಿನ್ನಡೆ]
'ಕಾಂಗ್ರೆಸ್ ಪಕ್ಷ ಈ ವಿವಾದದಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ. ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲಾಗುವುದಿಲ್ಲ. ಇದು ಲೇಖಕರು ಮತ್ತು ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಚಾರವಾಗಿದೆ'ಎಂದು ಬ್ರಿಜೇಶ್ ಕಾಳಪ್ಪ ಪ್ರತಿಕ್ರಿಯೆ ನೀಡಿದ್ದಾರೆ. [ಹತ್ಯೆಯ ಸಂಚು ರೂಪಿಸಿದ್ದು ರುದ್ರ ಪಾಟೀಲ್?]
ಅಗತ್ಯ ಕ್ರಮಗಳನ್ನು ಕೈಗೊಂಡಿದೆ : 'ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಕಲಬುರ್ಗಿ ಅವರು ಹತ್ಯೆಯಾದ ದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರ್ಗಿ ಅವರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ' ಎಂದು ಕಾಳಪ್ಪ ತಿಳಿಸಿದ್ದಾರೆ.
ಬಿಜೆಪಿಯ ಮೌನದ ಬಗ್ಗೆ ಕೇಳಿ : 'ಕಲಬುರ್ಗಿ ಅವರ ಹತ್ಯೆಯ ಬಗ್ಗೆ ಎಲ್ಲರೂ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸುವುದನ್ನು ಬಿಟ್ಟು ಬಿಜೆಪಿಯನ್ನು ಕೇಳಿರಿ. ಪಕ್ಷ ಈ ವಿಚಾರದಲ್ಲಿ ಏಕೆ ಮೌನವಾಗಿದೆ ಎಂದು ಅವರನ್ನು ಪ್ರಶ್ನಿಸಿ. ಪ್ರಶಸ್ತಿಗಳನ್ನು ವಾಪಸ್ ನೀಡುವುದು ಸಮಸ್ಯೆಗೆ ಪರಿಹಾರವಲ್ಲ ಎಂದು ಕಾಂಗ್ರೆಸ್ ಭಾವಿಸಿದೆ. ಕಲಬುರ್ಗಿ ಅವರ ಹತ್ಯೆಯ ತನಿಖೆಯನ್ನು ಸಿಐಡಿ ನಡಸುತ್ತಿದೆ. ಸಾಹಿತಿಗಳು ಮುಂದಿನ ನಿರ್ಧಾರ ತೆಗೆದುಕೊಳ್ಳುವ ಮೊದಲು ತನಿಖಾ ವರದಿ ಬರುವ ತನಕ ಕಾಯಲಿ' ಎಂದು ಕಾಳಪ್ಪ ಪ್ರತಿಕ್ರಿಯೆ ನೀಡಿದ್ದಾರೆ.












Click it and Unblock the Notifications