ಕಾಂಗ್ರೆಸ್ ಹೈಕಮಾಂಡ್ಗೆ ಸಿದ್ದರಾಮಯ್ಯ ನೀಡಿದ 4 ಭರವಸೆಗಳು!
Recommended Video

ಬೆಂಗಳೂರು, ಸೆಪ್ಟೆಂಬರ್ 16 : 12 ದಿನದ ವಿದೇಶ ಪ್ರವಾಸ ಮುಗಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಬಗ್ಗೆ ಹೈಕಮಾಂಡ್ ನಾಯಕರಿಗೆ ಅವರು 4 ಭರವಸೆಗಳನ್ನು ನೀಡಿದ್ದಾರೆ.
ಭಾನುವಾರ ಮುಂಜಾನೆ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಹಲವು ಚಟುವಟಿಕೆಗಳು ನಡೆಯುತ್ತಿವೆ. ಪಕ್ಷದ ಹಲವು ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ.
ಸಿದ್ದರಾಮಯ್ಯ ವಿದೇಶ ಪ್ರವಾಸದಿಂದ ಮರಳಿದ ಬಳಿಕ ಕಾಂಗ್ರೆಸ್ನಲ್ಲಿ ಬಿರುಸಿನ ಚಟುವಟಿಕೆ ನಡೆಯಬಹುದು ಎಂದು ನಿರೀಕ್ಷಿಸಲಾಗಿತ್ತು. ಈ ನಿರೀಕ್ಷೆ ಹುಸಿಯಾಗಿಲ್ಲ. ಸಿದ್ದರಾಮಯ್ಯ ನಿವಾಸದಲ್ಲಿ ಸರಣಿ ಸಭೆಗಳು ನಡೆಯುತ್ತಿವೆ.
ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳುತ್ತಿದ್ದರು. ಸಿದ್ದರಾಮಯ್ಯ ಅವರು ಭಾನುವಾರ ಅದನ್ನೇ ಹೇಳಿದ್ದಾರೆ. ಈ ಮೂಲಕ ಹಲವು ದಿನದ ರಾಜಕೀಯ ಬೆಳವಣಿಗೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ.

ಭರವಸೆ - 1
ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರವಾಗಲು ಬಿಡುವುದಿಲ್ಲ. ಪಕ್ಷದಲ್ಲಿನ ಅಸಮಾಧಾನ ಬಗೆಹರಿಸುವೆ. ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ರಚನೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಹೈಕಮಾಂಡ್ ನಾಯಕರಿಗೆ ಭರವಸೆ ನೀಡಿದ್ದಾರೆ.

ಭರವಸೆ - 2
ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಜೊತೆ ಮಾತುಕತೆ ನಡೆಸುತ್ತೇನೆ. ಜಿಲ್ಲಾ ಕಾಂಗ್ರೆಸ್ನಲ್ಲಿನ ಅಸಮಾಧಾನ ಶಮನಗೊಳಿಸುತ್ತೇನೆ. ಜಾರಕಿಹೊಳಿ ಸಹೋದರರು ಬಿಜೆಪಿಗೆ ಹೋಗದಂತೆ ತಡೆಯುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಭರವಸೆ - 3
ಸೆ.25ರೊಳಗೆ ಸಂಪುಟ ವಿಸ್ತರಣೆ, ನಿಗಮ-ಮಂಡಳಿ ನೇಮಕದ ಬಗ್ಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನವನ್ನು ಕೈಗೊಳ್ಳುತ್ತೇವೆ. ಸಂಪುಟ ವಿಸ್ತರಣೆ ವಿಚಾರಕ್ಕೆ ಶಾಸಕರು ಬಂಡಾಯ ಏಳದಂತೆ ತಡೆಯುತ್ತೇನೆ. ಈ ತಿಂಗಳ ಅಂತ್ಯದಲ್ಲಿ ಸಂಪುಟ ವಿಸ್ತರಣೆಯಾಗುವಂತೆ ನೋಡಿಕೊಳ್ಳುವೆ ಎಂಬ ಭವರಸೆಯನ್ನು ಸಿದ್ದರಾಮಯ್ಯ ಹೈಕಮಾಂಡ್ ನಾಯಕರಿಗೆ ನೀಡಿದ್ದಾರೆ.

ಭರವಸೆ - 4
ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಮೂವರು ಸದಸ್ಯರನ್ನು ನೇಮಕ ಮಾಡಲು ಅಕ್ಟೋಬರ್ 3ರಂದು ಚುನಾವಣೆ ನಡೆಯಲಿದೆ. ಜೆಡಿಎಸ್ ನಾಯಕರ ಜೊತೆ ಚರ್ಚಿಸಿ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ. ಯಾವುದೇ ಗೊಂದಲ ಉಂಟಾಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
|
ಸಿದ್ದರಾಮಯ್ಯ ಟ್ವೀಟ್
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವು ನಾಯಕರು ಸಿದ್ದರಾಮಯ್ಯ ಅವರನ್ನು ಇಂದು ಭೇಟಿಯಾಗಿ ರಾಜಕೀಯ ಬೆಳವಣಿಗೆ ಕುರಿತು ಚರ್ಚಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.

ಸರ್ಕಾರ ಸ್ಥಿರವಾಗಿದೆ
ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, 'ಸರ್ಕಾರ ಸ್ಥಿರವಾಗಿದೆ. ಯಾವುದೇ ಸಮಸ್ಯೆ ಇಲ್ಲ. ಶಾಸಕರು ಅವರವರ ಕ್ಷೇತ್ರದಲ್ಲಿ ಕೆಲಸದಲ್ಲಿ ತೊಡಗಿದ್ದಾರೆ. ಬಳ್ಳಾರಿ ಭಾಗದ ಶಾಸಕರು ನಮ್ಮ ಜೊತೆಯೇ ಇದ್ದಾರೆ' ಎಂದು ಹೇಳಿದರು.












Click it and Unblock the Notifications