ತಾವು ಮಾಡಿದ ವಾಂತಿಯನ್ನು ತಾವೇ ತಿನ್ನುವಂತಾಗಿದೆ: ಮಾಂಸಹಾರ ವಿಚಾರವಾಗಿ ಸಿಟಿ ರವಿಗೆ ತಿವಿದ ಸಿದ್ದರಾಮಯ್ಯ
ಸಿಟಿ ರವಿ ಮಾಂಸ ಸೇವನೆ ವಿಚಾರವಾಗಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, 'ತಾವು ಮಾಡಿದ ವಾಂತಿಯನ್ನು ತಾವೇ ತಿನ್ನುವಂತಾಗಿದೆ' ಎಂದು ತಿವಿದಿದ್ದಾರೆ. ಈ ವರದಿ ಓದಿ
ಬೆಂಗಳೂರು, ಫೆಬ್ರವರಿ 23: ಬಿಜೆಪಿ ಶಾಸಕ ಸಿಟಿ ರವಿ ಅವರು ಮಾಂಸಾಹಾರ ಸೇವಿಸಿ ದೇವಸ್ಥಾನ ಭೇಟಿ ನೀಡಿರುವ ವಿಚಾರವಾಗಿ ವಿವಾದಗಳು ಸೃಷ್ಟಿಯಾಗಿವೆ. ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯನವರು, ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ ಸಿಟಿ ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ತಿಳಿಸಿದ್ದಾರೆ.
ಈ ಕುರಿತು ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, 'ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ ಸಿಟಿ ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ' ಎಂದು ಹೇಳಿದ್ದಾರೆ.

ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ 'ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ' ಎಂಬ ಸಿಟಿ ರವಿ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
'ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿಟಿ ರವಿ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ' ಎಂದೂ ಸಿದ್ದರಾಮಯ್ಯ ಟೀಕಿಸಿದ್ದಾರೆ.

'ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ' ಎಂದೂ ಹೇಳಿದ್ದಾರೆ.
ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, 'ರಾಜ್ಯ ಬಿಜೆಪಿ ನಾಯಕರು ಹೇಳುವ ಸುಳ್ಳಿಗೆ ಸತ್ಯ ಅನ್ನೋದು ಸೂಸೈಡ್ ಮಾಡಿಕೊಂಡು ಸಮಾಧಿಯಾಗುತ್ತದೆ. ಮಾಂಸ ತಿಂದಿದ್ದು ನಿಜ, ಆದರೆ ದೇವಸ್ಥಾನಕ್ಕೆ ಹೋಗಿಲ್ಲ, ರೊಡಲ್ಲೇ ನಿಂತಿದ್ದೇನೆ ಎನ್ನುವ ಸುಳ್ಳು ಏಕೆ ಸಿಟಿ ರವಿ ಅವರೇ? ರೊಡಲ್ಲಿ ಘಂಟೆಗಳು ನೇತಾಡುತ್ತಿರುತ್ತವೆಯೇ? ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕುತ್ತಿರುವುದು ಸುಳ್ಳೇ?' ಎಂದು ಪ್ರಶ್ನೆ ಮಾಡಿದೆ.
ರವಿ ಅವರು ಫೆ.19ರಂದು ಭಟ್ಕಳದ ನಾಗಬನ ಹಾಗೂ ಕರಿಬಂಟ ಹನುಮಾನ ದೇವಸ್ಥಾನಕ್ಕೆ ಶಾಸಕ ಸುನೀಲ್ ನಾಯ್ಕ ಅವರೊಂದಿಗೆ ಭೇಟಿ ನೀಡಿದ್ದರು. ಆದರೆ, ಭೇಟಿಗೂ ಮುನ್ನ ಶಿರಾಲಿಯಲ್ಲಿರುವ ನಾಯ್ಕ್ ಅವರ ಮನೆಯಲ್ಲಿ ಮೀನಿನ ಊಟ ಮಾಡಿದ್ದರು. ರವಿ ಅವರು ಶಾಸಕರ ಜೊತೆ ಊಟ ಮಾಡುತ್ತಿರುವ ಫೋಟೋಗಳು ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಕಾಂಗ್ರೆಸ್ ನಾಯಕರು ಈ ವಿಚಾರವಾಗಿ ತರಾಟೆಗೆ ತೆಗೆದುಕೊಂಡರು.
'ನಾನು ಮಾಂಸಾಹಾರ ಸೇವಿಸಿದ್ದೇನೆ. ಆದರೆ ಬೀಗ ಹಾಕಿರುವ ದೇವಸ್ಥಾನಕ್ಕೆ ಪ್ರವೇಶಿಸಿಲ್ಲ' ಎಂದು ರವಿ ಸಮರ್ಥಿಸಿಕೊಂಡಿದ್ದಾರೆ. ಈ ಹಿಂದೆ ಕಾಂಗ್ರೆಸ್ ನಾಯಕ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಂಸ ತಿಂದು ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿದ್ದರು ಎಂದು ಟೀಕಿಸಿದ್ದ ಬಿಜೆಪಿಯನ್ನು ಕಾಂಗ್ರೆಸ್ ನಾಯಕರು ಪ್ರಶ್ನಿಸಿದ್ದಾರೆ.
'ನಾನು ಮಾಂಸಾಹಾರ ಸೇವಿಸುವ ಸಮುದಾಯದಲ್ಲಿ ಹುಟ್ಟಿದ್ದೇನೆ. ನನಗೆ ಯಾವುದೇ ಹಿಂಜರಿಕೆ ಇಲ್ಲ. ನಾನು ದೇವಸ್ಥಾನವನ್ನು ಪ್ರವೇಶಿಸಿಲ್ಲ. ಆದರೆ ಹೊರಗಿನಿಂದ ಪ್ರಾರ್ಥನೆ ಮಾಡಿದ್ದೇನೆ. ಮಾಂಸಾಹಾರಿ ದೇವರುಗಳಿವೆ' ಎಂದು ರವಿ ಅವರು ಮಾಂಸಾಹಾರವನ್ನು ಅನುಮತಿಸುವ ದೇವಾಲಯಗಳ ಬಗ್ಗೆಯೂ ತಿಳಿಸಿದ್ದಾರೆ.












Click it and Unblock the Notifications