ಲವ್ ಜಿಹಾದ್ ಕುರಿತು ಸಿದ್ದರಾಮಯ್ಯ ಮಹತ್ವದ ಹೇಳಿಕೆ!
ಬೆಂಗಳೂರು, ಡಿ. 01: ಲವ್ ಜಿಹಾದ್ ಮೂಲಕ ಹಿಂದೂ ಅಥವಾ ಮುಸ್ಲಿಮೇತರ ಧರ್ಮದ ಯುವತಿಯರನ್ನು ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪ ಹಳೆಯದ್ದು. ಆದರೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ನೀಡಿರುವ ತೀರ್ಪು ದೇಶದಲ್ಲಿ ಲವ್ ಜಿಹಾದ್ ಕುರಿತು ಚರ್ಚೆಯನ್ನು ಹುಟ್ಟುಹಾಕಿದೆ. ರಾಜ್ಯದಲ್ಲಿಯೂ ಕೂಡ ಲವ್ ಜಿಹಾದ್ ಮೂಲಕ ಬಲವಂತದ ಮತಾಂತರ ತಡೆಯಲು ಹೊಸ ಕಾನೂನು ತರಲು ಪ್ರಯತ್ನ ನಡೆಸಿದ್ದೇವೆ ಎಂದು ಹಲವು ಸಚಿವರು ಹೇಳಿಕೆ ನೀಡಿದ್ದರು.
ರಾಜ್ಯ ಬಿಜೆಪಿ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲು ಮುಂದಾಗಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಸಿದ್ದರಾಮಯ್ಯ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಲವ್ ಜಿಹಾದ್ ಕುರಿತು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಲವ್ ಜಿಹಾದ್ ಕುರಿತು ಉತ್ತರ ಪ್ರದೇಶದಲ್ಲಿ ಜಾರಿಗೆ ತಂದಿರುವ ಕಾನೂನಿನ ಕುರಿತು ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ.

ತೀರ್ಪಿನ ತಪ್ಪು ವಿಶ್ಲೇಷಣೆ?
ಒಂದೆಡೆ ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ಹೊಸ ಕಾನೂನು ರಚನೆಗೆ ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದೆ. ಮತ್ತೊಂದೆಡೆ ಬಲವಂತದ ಮತಾಂತರದ ಬಗ್ಗೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ಕೊಟ್ಟಿರುವ ತೀರ್ಪನ್ನು ತಪ್ಪಾಗಿ ವಿಶ್ಲೇಷಣೆ ಮಾಡಲಾಗುತ್ತಿದೆ ಎಂಬ ಚರ್ಚೆಗಳು ಶುರುವಾಗಿವೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಉಲ್ಲೇಖಿಸಿದ ಅಲಹಾಬಾದ್ ಕೋರ್ಟ್ ನೀಡಿದ ತೀರ್ಪು ಹಾಗೂ ಲವ್ ಜಿಹಾದ್ ಆರೋಪಗಳಿಗೆ ಯಾವುದೇ ಸಂಬಂಧವಿಲ್ಲ. ಕೋರ್ಟ್ ತೀರ್ಪು, ಮುಸ್ಲಿಂ ಮಹಿಳೆ ಮತ್ತು ಹಿಂದೂ ಪುರುಷ ತಮ್ಮ ಸ್ವಂತ ಇಚ್ಚೆಯಿಂದ ಮದುವೆಯಾದವರು. ಅವರ ಕುಟುಂಬಗಳ ವಿರೋಧದ ಹಿನ್ನೆಲೆಯಲ್ಲಿ ರಕ್ಷಣೆಗಾಗಿ ಮಾಡಿದ್ದ ಕೋರಿಕೆಗೆ ಸಂಬಂಧಿಸಿದೆ. ಆದಾಗ್ಯೂ, ಮದುವೆಯಾಗಲು ಮಹಿಳೆ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದರಿಂದ ಅವರ ಶಾಂತಿಯುತ ದಾಂಪತ್ಯ ಜೀವನದಲ್ಲಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲು ನ್ಯಾಯಾಲಯ ನಿರಾಕರಿಸಿದೆ.

ಕಾನೂನು ವಿರೋಧಿಸುತ್ತೇವೆ
ಲವ್ ಜಿಹಾದ್ ಮತ್ತು ಗೋಹತ್ಯಾ ನಿಷೇಧ ವಿಚಾರದಲ್ಲಿ ಸರ್ಕಾರ ಕಾಯ್ದೆ ತರಲು ಮುಂದಾದರೆ ವಿರೋಧಿಸುವುದಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮುಸ್ಲಿಂ ಮುಖಂಡರೊಂದಿಗೆ ಚರ್ಚಿಸಿದ ಬಳಿಕ ಮಾತನಾಡಿರುವ ಅವರು, ರಾಜ್ಯ ಸರ್ಕಾರದ ಪಶು ಸಂಗೋಪನಾ ಸಚಿವರು ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸುವುದಾಗಿ ಹೇಳಿದ್ದರು. ಇದರಿಂದ ಆತಂಕಕ್ಕೀಡಾದ ಮುಸ್ಲಿಂ ಸಮುದಾಯದ ನಾಯಕರು ಇಂದು ನನ್ನನ್ನು ಭೇಟಿಯಾಗಿ, ಮಾತುಕತೆ ನಡೆಸಿದರು. ಈ ಕಾಯ್ದೆಯನ್ನು ಬಿಜೆಪಿ ಆಡಳಿತವಿರುವ ಗೋವಾದಲ್ಲಿ ಏಕೆ ಇದುವರೆಗೂ ಜಾರಿಗೊಳಿಸಿಲ್ಲ? ಕರ್ನಾಟಕವೇ ಏಕೆ? ಕಾಯ್ದೆ ಜಾರಿಯಾದರೆ ತಾವು ಕಷ್ಟ ನಷ್ಟಕ್ಕೆ ಈಡಾಗುತ್ತೇವೆ ಎಂಬ ಭಯದಿಂದ ಮುಸ್ಲಿಂ ಸಮುದಾಯದ ಮುಖಂಡರು ನನ್ನ ಬಳಿಗೆ ಬಂದಿದ್ದರು. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಲ್ಲಿ ನಾವು ತೀವ್ರವಾಗಿ ವಿರೋಧಿಸಲಿದ್ದೇವೆ ಎಂದರು.

ಕಾನೂನು ಅಸಂವಿಧಾನಿಕ
ಉತ್ತರ ಪ್ರದೇಶದಲ್ಲಿ ಜಾರಿಯಿರುವ ಲವ್ ಜಿಹಾದ್ ತಡೆ ಕಾನೂನು ಅಸಂವಿಧಾನಿಕ. ನಿಗದಿತ ವಯೋಮಾನಕ್ಕೆ ಮೇಲ್ಪಟ್ಟ ಪ್ರತಿಯೊಬ್ಬರಿಗೂ ತಮಗೆ ಇಷ್ಟವಾಗುವ ವ್ಯಕ್ತಿಯನ್ನು ಮಧುವೆಯಾಗುವ ಸ್ವಾತಂತ್ರ್ಯ ಇದೆ. ಯಾವುದೇ ಒಂದು ಜಾತಿ ಇಂತಹುದೇ ಜಾತಿ - ಧರ್ಮದ ಹುಡುಗ ಅಥವಾ ಹುಡುಗಿಯನ್ನು ವಿವಾಹವಾಗಬೇಕೆಂಬ ಕಾನೂನು ನಮ್ಮ ಸಂವಿಧಾನದಲ್ಲಿ ಇಲ್ಲ. ಇದು ವಿವೇಕ- ವಿವೇಚನೆಯಿಲ್ಲದೆ ರಚನೆಯಾದ ಕಾನೂನು. ಹಿಂದೂ ಮುಸ್ಲಿಂನನ್ನು, ಮುಸ್ಲಿಂ ಹಿಂದೂವನ್ನು ಮಧುವೆಯಾಗುವಂತಿಲ್ಲ ಎಂಬ ನಿಯಮ ರೂಪಿಸುವುದು ತಪ್ಪು.

ಕಾಯಿದೆ ವಜಾಗೊಳ್ಳಲಿದೆ
ಹಿಂದೆ ಮೊಘಲರ ಆಳ್ವಿಕೆ ಕಾಲದಲ್ಲೂ ಸಾಕಷ್ಟು ಅಂತರ್ಧರ್ಮೀಯ ವಿವಾಹವಾಗಿವೆ. ಹಿಂದೂ ಮುಸ್ಲಿಂ ದಂಪತಿಗಳಿಗೆ ಜನಿಸಿರುವ ಸಾಕಷ್ಟು ಮಂದಿ ಇದ್ದರು. ಇಂತಹ ಕಾನೂನು ಜಾರಿಗೊಳಿಸಲು ಸಂವಿಧಾನ ಅವಕಾಶ ನೀಡಲ್ಲ. ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ ಕಾಯ್ದೆ ವಜಾಗೊಳ್ಳಲಿದೆ. ಇಂತಹಾ ಕಾಯ್ದೆಗಳಿಗೆ ಅವಕಾಶವಿಲ್ಲ ಎಂದು ಅಲಹಾಬಾದ್ ಹಾಗೂ ಕರ್ನಾಟಕದ ಉಚ್ಚ ನ್ಯಾಯಾಲಯಗಳು ಹೇಳಿವೆ. ಹಾಗಾಗಿ ಕಾಯ್ದೆ ಜಾರಿ ಅಸಾಧ್ಯ. ಆದರೂ ಇಂತದ್ದೊಂದು ಕೆಲಸಕ್ಕೆ ಸರ್ಕಾರ ಕೈಹಾಕಿದೆ ಅಂದರೆ ಅದು ದುರುದ್ದೇಶದಿಂದ ಕೂಡಿದ ಕೆಲಸವಲ್ಲದೆ ಬೇರೇನು? ಸಮಾಜದ ಶಾಂತಿ ಕದಡಬೇಕು ಎಂಬ ಬಿಜೆಪಿಯವರ ಉದ್ದೇಶ ಇದರಿಂದ ಸ್ಪಷ್ಟವಾಗುತ್ತಿದೆ.
ನಾನೂ ಹಿಂದೆ ಸಗಣಿ ಬಾಚಿದ್ದೇನೆ, ಗಂಜಲ ಎತ್ತಿದ್ದೇನೆ. ಬಿಜೆಪಿಯ ಯಾವ ನಾಯಕ ಈ ಕೆಲಸವನ್ನೆಲ್ಲಾ ಮಾಡಿದ್ದಾರೆ? ಪಶು ಸಾಕಾಣಿಕೆ ಬಗ್ಗೆ ಬಿಜೆಪಿ ನಾಯಕರಿಗೆ ಎಷ್ಟು ಗೊತ್ತಿದೆ? ಮುದಿ ಎತ್ತನ್ನೋ ಅಥವಾ ಹಸುವನ್ನೋ ಅದು ಸಾಯುವವರೆಗೆ ಸಾಕಲು ಎಷ್ಟು ಖರ್ಚು ಬರುತ್ತೆಂದು ಬಿಜೆಪಿಯವರಿಗೆ ಗೊತ್ತೇ? ಹಸು-ಎತ್ತುಗಳಿಗೆ ವಯಸ್ಸಾದ ಮೇಲೆ ಅವನ್ನು ರೈತರು ಬಿಜೆಪಿಯವರ ಮನೆ ಬಾಗಿಲಿಗೆ ಕೊಂಡುಹೋಗಿ ಬಿಟ್ಟು ಬರಬೇಕೆ ಎಂದು ಗೋಹತ್ಯಾ ನಿಷೇಧ ಕಾನೂನು ಕುರಿತು ಸಿದ್ದರಾಮಯ್ಯ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.












Click it and Unblock the Notifications