ಸಿದ್ದು vs ಡಿಕೆಶಿ: ಪ್ರಮಾಣ ವಚನಕ್ಕೂ ಮುನ್ನ ದೆಹಲಿಯಲ್ಲಿ ಮತ್ತೊಂದು ಸುತ್ತಿನ ಪೈಪೋಟಿ; ಏನದು?
135 ಸ್ಥಾನಗಳೊಂದಿಗೆ 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತ ಸಾಧಿಸಿರುವ ಕಾಂಗ್ರೆಸ್ ಕೊನೆಗೂ ಸರ್ಕಾರ ರಚನೆಗೆ ಮುಂದಾಗಿದೆ. ಐದು ದಿನಗಳಿಂದ ನಡೆದ ಸಿಎಂ ಆಯ್ಕೆ ಕಸರತ್ತಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಂಧಾನದ ಮೂಲಕ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯನ್ನು ಘೋಷಿಸಿದೆ.
ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ನಡೆದ ತೀವ್ರ ಪೈಪೋಟಿಯಲ್ಲಿ ದೆಹಲಿಯ ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯಗೆ ಮಣೆ ಹಾಕಿದ್ದಾರೆ. ಆದರೆ, ಇದು 30:30 ಫಾರ್ಮುಲಾ ಆಗಿದೆ. ಮೊದಲ 30 ತಿಂಗಳು ಸಿದ್ದರಾಮಯ್ಯ ಸಿಎಂ, ನಂತರದ ಅವಧಿಗೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ.

ಶನಿವಾರ, ಮೇ 20ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಸರ್ಕಾರಿ ಸಮಾರಂಭದಲ್ಲಿ 2ನೇ ಬಾರಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಎಲ್ಲ ತಯಾರಿಗಳು ನಡೆಯುತ್ತಿವೆ.
Karnataka CM Race LIVE: ಸಿದ್ದು ಸಿಎಂ, ಡಿಕೆಶಿ ಡಿಸಿಎಂ: ಮೇ 20ಕ್ಕೆ ಪ್ರಮಾಣ ವಚನ
ಸಿಎಂ ಹಾಗೂ ಡಿಸಿಎಂ ಜೊತೆಗೆ 28 ಶಾಸಕರು ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಿದ್ದರಾಮಯ್ಯ ಬಣದ 14 ಶಾಸಕರು ಮತ್ತು ಡಿ.ಕೆ. ಶಿವಕುಮಾರ್ ಬಣದ 14 ಶಾಸಕರು ಸಚಿವ ಸಂಪುಟದಲ್ಲಿ ಇರಲಿದ್ದಾರೆ ಎನ್ನಲಾಗುತ್ತಿದೆ.
ಇದೇ ವೇಳೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ, ಒಕ್ಕಲಿಗರು, ಲಿಂಗಾಯತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ಸಮುದಾಯಗಳಲ್ಲಿ ಅತ್ಯಂತ ಪ್ರಭಾವಿ ನಾಯಕರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಮತ್ತೊಂದು ತಲೆನೋವಾಗಿ ಪರಿಣಮಿಸಲಿದೆ.

ಮತ್ತೆ ದೆಹಲಿ ನಾಯಕರತ್ತ ಸಿದ್ದು-ಡಿಕೆಶಿ ಚಿತ್ತ
ಕರ್ನಾಟಕ ಸಿಎಂ ಹಾಗೂ ಡಿಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರನ್ನು ಘೋಷಿಸಲಾಗಿದ್ದರೂ, ಖಾತೆ ಹಂಚಿಕೆಯ ವಿಷಯದಲ್ಲಿ ಇನ್ನೂ ಗೊಂದಲಗಳು ಮುಗಿದಿಲ್ಲ. ಯಾವ ಬಣಕ್ಕೆ ಎಷ್ಟು ಖಾತೆ, ಯಾವ ಬಣಕ್ಕೆ ಯಾವ ಖಾತೆ ನೀಡಬೇಕು ಎಂಬುದನ್ನು ನಿರ್ಧರಿಸಲು ಹೈಕಮಾಂಡ್ ನಿರ್ಧರಿಸಲಿದೆ ಎನ್ನಲಾಗಿದೆ.
ಗುರುವಾರ, ಮೇ 18ರಂದು ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಔಪಚಾರಿಕವಾಗಿ ಸಿಎಲ್ಪಿ ನಾಯಕನ ಆಯ್ಕೆ ನಡೆಯಲಿದೆ. ಬಳಿಕ ಕಾಂಗ್ರೆಸ್ ನಾಯಕರು, ರಾಜಭವನಕ್ಕೆ ರಾಜ್ಯಪಾಲರಿಗೆ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ. ಆ ಬಳಿಕ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಮತ್ತೆ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ.
ಸಿಎಂ ಆಯ್ಕೆ ಕಗ್ಗಂಟು ಬಗೆಹರಿಸಿದ ನಂತರ, ಇದೀಗ ಪ್ರಭಾವಿ ಖಾತೆಗಳನ್ನು ಪಡೆಯಲು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬಣ ಪೈಪೋಟಿ ನಡೆಸಲಿದೆ. ಕಾಂಗ್ರೆಸ್ ಹೈಕಮಾಂಡ್ಗೆ ಮತ್ತೆ ಸಚಿವ ಸಂಪುಟ ರಚನೆಯ ತಲೆನೋವು ಶುರುವಾಗಲಿದೆ.

ಹೀಗಾಗಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಶುಕ್ರವಾರ, ಮೇ 19ರಂದು ನಿಯೋಜಿತ ಸಿಎಂ ಹಾಗೂ ಡಿಸಿಎಂ ದೆಹಲಿಗೆ ತೆರಳಲಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ಆಹ್ವಾನ ನೀಡುವ ಸಾಧ್ಯತೆ ಇದೆ.
ಸಚಿವ ಸಂಪುಟದಲ್ಲಿ ಪ್ರಾದೇಶಿಕವಾರು, ಜಾತಿವಾರು ಸಮೀಕರಣಗಳೊಂದಿಗೆ ಹೊಸ ಸಚಿವ ಸಂಪುಟ ರಚನೆಯಾಗಲಿದೆ. ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಡಿ.ಕೆ. ಶಿವಕುಮಾರ್ಗೆ ಡಿಸಿಎಂ ಜೊತೆಗೆ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಎರಡು ಪ್ರಬಲ ಖಾತೆಗಳನ್ನು ಪಡೆಯಲಿದ್ದಾರೆ ಎನ್ನಲಾಗಿದೆ.
ಬೆಂಗಳೂರು ನಗರಾಭಿವೃದ್ಧಿ, ಇಂಧನ, ಲೋಕೋಪಯೋಗಿ, ಶಿಕ್ಷಣ, ವಸತಿ, ಬೃಹತ್ ಕೈಗಾರಿಕೆ, ಗೃಹ, ಆರೋಗ್ಯ, ಐಟಿ-ಬಿಟಿ, ಸಮಾಜ ಕಲ್ಯಾಣ, ಕೃಷಿ, ಸಾರಿಗೆ, ಕಂದಾಯ, ಅಬಕಾರಿ, ಪಂಚಾಯತ್ ರಾಜ್- ಗ್ರಾಮೀಣಾಭಿವೃದ್ಧಿ ಸೇರಿದಂತೆ ಹಲವು ಪ್ರಮುಖ ಖಾತೆಗಳನ್ನು ಪಡೆಯಲು ಉಭಯ ನಾಯಕರು ಪ್ರಯತ್ನಿಸಲಿದ್ದಾರೆ.
ತಮ್ಮ ಬೆಂಬಲಿಗ ಶಾಸಕರಿಗೆ ಪ್ರಭಾವಿ ಖಾತೆ ಕೊಡಿಸಲು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಮತ್ತೊಂದು ಸುತ್ತಿನ ಪೈಪೋಟಿಗೆ ಇಳಿಯಲಿದ್ದಾರೆ. ಇದನ್ನು ಯಾವ ಸೂತ್ರದೊಂದಿಗೆ ಹೈಕಮಾಂಡ್ ಬಗೆಹರಿಸಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.












Click it and Unblock the Notifications