Tungabhadra: ಕಲ್ಯಾಣ ಕರ್ನಾಟಕ ರೈತರಿಗೆ ಯುಗಾದಿ ಸಿಹಿಸುದ್ದಿ: ತುಂಗಾಭದ್ರಾ ಕಾಲುವೆಗೆ 2 ಟಿಎಂಸಿ ನೀರು
ಸಿಎಂ ಸಿದ್ದರಾಮಯ್ಯ ಅವರು ಯುಗಾದಿ ಹಬ್ಬದ ಪ್ರಯುಕ್ತ ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಸಿಹಿಸುದ್ದಿ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ಏಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದೆ. ಇದರಿಂದ ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ ಎಂದು ಹೇಳಿದ್ದಾರೆ.
ಮಾರ್ಚ್ 30ರಂದು ಭದ್ರಾ ಜಲಾಶಯದಲ್ಲಿ 28 ಟಿಎಂಸಿ ನೀರು ಸಂಗ್ರಹವಾಗಿರುವ ಮಾಹಿತಿ ಲಭ್ಯವಿದೆ. ಇದರಲ್ಲಿ ಮೇ 8ರವರೆಗೆ ನೀರಾವರಿಗೆ 11 ಟಿಎಂಸಿ ಮತ್ತು ಕುಡಿಯುವ ನೀರಿಗಾಗಿ 14 ಟಿಎಂಸಿ ಅಗತ್ಯವಿದೆ. 3 ಟಿಎಂಸಿ ನೀರನ್ನು ಜಲಾಶಯದಲ್ಲಿ ಉಳಿಸಿಕೊಳ್ಳಬೇಕಾಗಿದೆ. ಹಾಗಾಗಿ ಏಪ್ರಿಲ್ 6ರಿಂದ ಕಾಲುವೆಗಳನ್ನು ಕೇವಲ ಕುಡಿಯುವ ನೀರಿನ ಪೂರೈಕೆಗೆ ಮಾತ್ರ ಬಳಸಿಕೊಳ್ಳಲಾಗುವುದು. ರೈತಾಪಿ ಜನರ ಬೆಳೆಗಳಿಗೆ ಮತ್ತು ಜನರಿಗೆ ಕುಡಿಯುವ ನೀರು ಪೂರೈಸಲು ಸರ್ಕಾರ ಎಲ್ಲ ಹಂತದಲ್ಲೂ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ತುಂಗಾಭದ್ರಾ ಯೋಜನೆಯ ಎಡದಂಡೆ, ಬಲದಂಡೆ ಕೆಳ ಮಟ್ಟದ ಕಾಲುವೆಯಡಿ ಹಿಂಗಾರು ಹಂಗಾಮಿಗೆ ಬೆಳೆದು ನಿಂತ ಬೆಳೆಗಳಿಗೆ ಕೊರತೆಯಾಗುವ ನೀರನ್ನು ಒದಗಿಸುವ ಕುರಿತು ಚರ್ಚಿಸಲು ಕಳೆದ ವಾರ ಬೆಂಗಳೂರಿನ ವಿಧಾನಸೌಧದ 3 ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ 123ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆ ಕೂಡ ನಡೆದಿತ್ತು. ಇತ್ತೀಚೆಗೆ ಸದನದಲ್ಲೂ ಮಾತನಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರು ತುಂಗಾಭದ್ರಾ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದ್ದರು.
ವಿಧಾನ ಪರಿಷತ್ನ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ್ದ ಡಿಕೆ ಶಿವಕುಮಾರ್, ತುಂಗಾಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿದೆ. ಈ ಕಾರಣದಿಂದ ನವಲಿ ಜಲಾಶಯ ನಿರ್ಮಾಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಉತ್ತರ ನೀಡಿದ್ದರು. ಅಧಿಕಾರಿಗಳು ಸಮತೋಲನವಾದ ಡ್ಯಾಂ ನಿರ್ಮಾಣ ಮಾಡದೆ ಪರ್ಯಾಯ ಆಲೋಚನೆ ಮಾಡಿದ್ದಾರೆ. ನಮ್ಮ ಪಾಲಿನ ನೀರನ್ನು ಪಂಪ್ ಮಾಡಿಕೊಂಡು ಹೇಗೆ ಬಳಸಿಕೊಳ್ಳಬೇಕು ಎಂದೂ ಯೋಚಿಸುತ್ತಿದ್ದೇನೆ. ಇದರಿಂದ ಕರ್ನಾಟಕ ಸೇರಿ ಬೇರೆ ರಾಜ್ಯಗಳಿಗೂ ಅನುಕೂಲವಾಗುತ್ತೆ. ನಮಗೆ ಶೇ 65ರಷ್ಟು ನೀರು ಹಾಗೂ ಪಕ್ಕದ ರಾಜ್ಯಗಳಿಗೆ ಶೇ 35ರಷ್ಟು ನೀರು ಸಿಗಲಿದೆ ಎಂದಿದ್ದರು.

ಹೀಗಾಗಿ ಈ ಭಾಗದಲ್ಲಿ ಸಮತೋಲಿತ ಡ್ಯಾಂ ನಿರ್ಮಾಣ ಸೇರಿದಂತೆ ಹೊಸ ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ. ಅಲ್ಲದೆ ನಾವು ನಮ್ಮ ಪಾಲಿನ ನೀರನ್ನು ಉಳಿಸಿಕೊಳ್ಳಲು ಬದ್ಧರಾಗಿದ್ದೇವೆ. ಪರ್ಯಾಯ ಯೋಜನೆ ಬಗ್ಗೆ ಸರ್ಕಾರ ಯೋಚಿಸುತ್ತಿದ್ದು, ಕೇಂದ್ರ ಜಲಶಕ್ತಿ ಸಚಿವರು ಪೆನ್ನಾರ್ ನದಿ ಸಂಬಂಧ ಕರ್ನಾಟಕ ಹಾಗೂ ತಮಿಳುನಾಡು ಸಚಿವರನ್ನ ಸಭೆಗೆ ಕರೆದಿದ್ದಾರೆ. ಅಲ್ಲೇ ನವಲಿ ಅಣೆಕಟ್ಟು ನಿರ್ಮಾಣ, ಇತರ ಪರಿಹಾರಗಳ ಬಗ್ಗೆ ಕೇಂದ್ರ ಸಚಿವರ ಬಳಿ ಚರ್ಚಿಸುತ್ತೇನೆ ಎಂದಿದ್ದರು.












Click it and Unblock the Notifications