ಸಚಿವರ ಕಾರ್ಯವೈಖರಿ ಬಗ್ಗೆ ಸಿಎಂ ಪರಿಶೀಲನೆ
ಬೆಂಗಳೂರು, ಮೇ 27 : ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟ ಸದಸ್ಯರ ಖಾತೆಗಳ ಪ್ರಗತಿ ಪರಿಶೀಲನೆಯನ್ನು ಆರಂಭಿಸಿದ್ದಾರೆ. ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸಚಿವರ ಕಾರ್ಯವೈಖರಿ ಬಗ್ಗೆ ಸೋಮವಾರದಿಂದ ಸಿಎಂ ಪರಾಮರ್ಶೆ ನಡೆಸುತ್ತಿದ್ದಾರೆ.
ಸೋಮವಾರ ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯ ನಂತರ ಸಚಿವರ ಖಾತೆಗಳ ಬಗ್ಗೆ ಪ್ರಗತಿ ಪರಿಶೀಲನೆಯನ್ನು ನಡೆಸಿದರು. ಇಲಾಖೆಗಳಲ್ಲಿ ಆಗುತ್ತಿರುವ ಕೆಲಸಗಳ ಬಗ್ಗೆ ಮಾಹಿತಿ ಪಡೆದ ಸಿದ್ದರಾಮಯ್ಯ, ವಿಳಂಬವಾಗಿರುವ ಕೆಲಸಗಳನ್ನು ಮೊದಲು ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೃಷಿ ಸಚಿವ ಕೃಷ್ಣಭೈರೇಗೌಡ, ತೋಟಗಾರಿಗೆ ಸಚಿವ ಶಾಮನೂರು ಶಿವಶಂಕರಪ್ಪ, ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಮ್ಮ ಇಲಾಖೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದರು. ಕೆಲವು ಇಲಾಖೆಗಳಲ್ಲಿ ಕೆಲಸಗಳು ವಿಳಂಬವಾಗುತ್ತಿರುವ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ಸಿಎಂ, ಅಧಿಕಾರಿಗಳಿಗೆ ತಕ್ಷಣ ಇವುಗಳನ್ನು ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು. [ಸದ್ಯದಲ್ಲೇ ಟ್ವಿಟರ್ ಗೆ ಸಿದ್ದರಾಮಯ್ಯ ಎಂಟ್ರಿ]
ಬಾಕಿ ಉಳಿದಿದೆ ಪರಾಮರ್ಶೆ : ಸಿಎಂ ಸಿದ್ದರಾಮಯ್ಯ ಉಳಿದ ಸಚಿವರ ಖಾತೆಗಳ ಬಗ್ಗೆಯೂ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಕೇವಲ ಸಚಿವ ಕಾರ್ಯವೈಖರಿ ಬಗ್ಗೆ ಮಾತ್ರ ಪರಿಶೀಲನೆ ನಡೆಸದ ಸಿಎಂ, ಮುಂದಿನ ವಾರದಲ್ಲಿ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ಅಂದಹಾಗೆ ಮಂಗಳವಾರ ಸಿಎಂ ಸಿದ್ದರಾಮಯ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಉನ್ನತ ಶಿಕ್ಷಣ ಮತ್ತು ಗೃಹ ಖಾತೆಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಮುಂದಿನ ಒಂದು ವಾರದಲ್ಲಿ ಸಿದ್ದರಾಮಯ್ಯ ಅವರ ಇಲಾಖಾವಾರು ಪರಿಶೀಲನೆ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ.












Click it and Unblock the Notifications