ಮತ್ತೆ ಸಿದ್ದರಾಮಯ್ಯ ಸಂಪುಟ ವಿಸ್ತರಣೆ ಕಸರತ್ತು?
ಬೆಂಗಳೂರು, ಡಿ. 7 : ಸಿಎಂ ಸಿದ್ದರಾಮಯ್ಯ ಸಂಪುಟ ವಿಸ್ತರಣೆ ಬಗ್ಗೆ ಮತ್ತೊಮ್ಮೆ ಚಿಂತನೆ ಆರಂಭಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಚುನಾವಣೆಗೂ ಮೊದಲು ಸಂಪುಟ ವಿಸ್ತರಣೆ ಮಾಡಲು ನಿರ್ಧರಿಸಿದ್ದಾರೆ. ಪಕ್ಷದ ರಾಷ್ಟ್ರೀಯ ನಾಯಕರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಲು ಶುಕ್ರವಾರ ನವದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತಿ ಹೆಚ್ಚಿನ ಸ್ಥಾನಗಳ ನಿರೀಕ್ಷೆಯನ್ನು ಕಾಂಗ್ರೆಸ್ ವರಿಷ್ಠರು ಇಟ್ಟುಕೊಂಡಿದ್ದಾರೆ. ಆದ್ದರಿಂದ ಸಂಪುಟ ವಿಸ್ತರಣೆ ಮಾಡಿ, ಕೆಲವು ಜಿಲ್ಲೆಗಳಿಗೆ ಆದ್ಯತೆ ನೀಡಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಆದ್ದರಿಂದ ಲೋಕಸಭೆ ಚುನಾವಣೆಗೂ ಮೊದಲು ಸಂಪುಟ ವಿಸ್ತರಣೆ ಆಗುವುದು ಬಹುತೇಕ ಖಚಿತವಾಗಿದೆ. (ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅಸ್ತು)
ಅಕ್ರಮ ಗಣಿಗಾರಿಕೆ ಆರೋಪದಿಂದ ಸಚಿವ ಸ್ಥಾನಕ್ಕೆ ಸಂತೋಷ್ ಲಾಡ್ ರಾಜೀನಾಮೆ ನೀಡಿದ್ದರಿಂದ ಒಂದು ಸ್ಥಾನ ತೆರವಾಗಿದೆ. ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಪಕ್ಷದ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬ ಒತ್ತಾಯವಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ 2 ಅಥವ 3 ಜನರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಿದ್ದಾರೆ. (ಲಾಡ್ ರಾಜೀನಾಮೆ)
ನಿಗಮ ಮತ್ತು ಮಂಡಳಿಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆಗೆ ಈಗಾಗಲೇ ಚಾಲನೆ ದೊರಕಿದೆ. ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಕಳಿಸುವಂತೆ ವರಿಷ್ಠ ಮಂಡಳಿ ಈಗಾಗಲೆ ಮುಖ್ಯಮಂತ್ರಿ ಮತ್ತು ಕೆಪಿಸಿಸಿಗೆ ಸೂಚನೆ ನೀಡಿದೆ. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವಂತೆ ಎಲ್ಲಾ ಅಸಮಾಧಾನಗಳನ್ನು ಬಗೆಹರಿಸಿ ಹೆಚ್ಚಿನ ಸ್ಥಾನ ಗಳಿಸುವತ್ತ ಕಾಂಗ್ರೆಸ್ ಹೆಜ್ಜೆ ಇಟ್ಟಿದೆ.












Click it and Unblock the Notifications