ಸಚಿವ ಸಂಪುಟ ಪುನಾರಚನೆ : ಯಾರು, ಏನು ಹೇಳಿದರು?
ಬೆಂಗಳೂರು, ಜೂನ್ 17 : ಸಚಿವ ಸಂಪುಟ ಪುನಾರಚನೆ ವಿಚಾರ ಬಹುತೇಕ ಕೊನೆಯ ಹಂತಕ್ಕೆ ಬಂದು ನಿಂತಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದು, ಪುನಾರಚನೆಗೆ ಒಪ್ಪಿಗೆ ಸಿಗುವ ಸಾಧ್ಯತೆ ಇದೆ.
ಗುರುವಾರ ಸಂಜೆ ದೆಹಲಿಯಲ್ಲಿ ಸಿದ್ದರಾಮಯ್ಯ ಅವರು, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. 'ಹೈದರಾಬಾದ್ ಕರ್ನಾಟಕದ ಸಚಿವರನ್ನು ಸಂಪುಟದಿಂದ ಕೈ ಬಿಡಬೇಡಿ' ಎಂಬ ಷರತ್ತನ್ನು ಖರ್ಗೆ ಅವರು ಸಿದ್ದರಾಮಯ್ಯ ಅವರಿಗೆ ವಿಧಿಸಿದ್ದಾರೆ ಎಂದು ತಿಳಿದುಬಂದಿದೆ. [ಸಂಪುಟ ಸೇರಲಿರುವ ಅದೃಷ್ಟವಂತರು ಯಾರು?]
ಸುಮಾರು ಎರಡು ತಾಸುಗಳ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, 'ಸಂಪುಟ ಪುನಾರಚನೆ ಮಾಡುವುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ' ಎಂದು ಹೇಳಿದರು. ವಿವಿಧ ಬಣದ ನಾಯಕರು ಸಚಿವ ಸ್ಥಾನ ಗಿಟ್ಟಿಸಲು ದೆಹಲಿಯಲ್ಲಿ ಲಾಬಿ ಮುಂದುವರೆಸಿದ್ದಾರೆ. [ಯಾರ ಕೈ ತಪ್ಪಲಿದೆ ಸಚಿವ ಸ್ಥಾನ?]
ಸಿದ್ದರಾಮಯ್ಯ ಅವರು ದೆಹಲಿಗೆ ತಲುಪಿರುವ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ಅವರು ದೆಹಲಿ ತಲುಪಿದ್ದಾರೆ. ಹೈಕಮಾಂಡ್ ನಾಯಕರು ಮುಂಬೈನಲ್ಲಿದ್ದ ಪರಮೇಶ್ವರ ಅವರಿಗೆ ದೆಹಲಿಗೆ ಬರುವಂತೆ ಸೂಚನೆ ಕೊಟ್ಟಿದ್ದರು. ಆದ್ದರಿಂದ, ಗುರುವಾರ ರಾತ್ರಿ ಅವರು ದೆಹಲಿಗೆ ತೆರಳಿದರು. ಪುನಾರಚನೆ ಬಗ್ಗೆ ಯಾರು, ಏನು ಹೇಳಿದರು ನೋಡೋಣ ಬನ್ನಿ...

'ಮಾಧ್ಯಮಗಳ ಸೃಷ್ಟಿ'
'ನನ್ನನ್ನು ತಮ್ಮಂತಹ ಹಿರಿಯ ಸಚಿವ ಇರುವುದರಿಂದಲೇ ಸಿದ್ದರಾಮಯ್ಯ ಅವರ ಸಚಿವ ಸಂಪುಟಕ್ಕೆ ಗೌರವವಿದೆ. ತಮ್ಮನ್ನು ಸಂಪುಟದಿಂದ ಕೈಬಿಡುತ್ತಾರೆ ಎಂಬುದು ಮಾಧ್ಯಮಗಳ ಸೃಷ್ಟಿ ಎಂದು ಕಂದಾಯ ಸಚಿವ ವಿ.ಶ್ರೀನಿವಾಸಪ್ರಸಾದ್ ಹೇಳಿದ್ದಾರೆ. 'ಕೊಟ್ಟ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಸಂಪುಟ ಪುನಾರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ. ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ನೋಡೋಣ' ಎಂದು ಸಚಿವರು ತಿಳಿಸಿದರು.

'ಸೋಮಶೇಖರ್ಗೆ ಸಚಿವ ಸ್ಥಾನ ನೀಡಿ'
ಶಾಸಕ ಮುನಿರತ್ನ (ರಾಜರಾಜೇಶ್ವರಿ ನಗರ), ಬೈರತಿ ಬಸವರಾಜು (ಕೆ.ಆರ್.ಪುರಂ), ಎಸ್.ಟಿ.ಸೋಮಶೇಖರ್ (ಯಶವಂತಪುರ) ಅವರು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. 'ಮೂವರಿಗೆ ನೀಡಲು ಸಾಧ್ಯವಾಗದಿದ್ದರೆ ಎಸ್.ಟಿ.ಸೋಮಶೇಖರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು' ಶಾಸಕ ಮುನಿರತ್ನ ಅವರು ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

'ಸಚಿವ ಸ್ಥಾನ ತ್ಯಜಿಸಲು ಸಿದ್ಧ'
'ಪಕ್ಷದ ಉಳಿವಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆಗೆ ಕೈಹಾಕಿದ್ದಾರೆ. ಸಚಿವ ಸ್ಥಾನ ತ್ಯಜಿಸಲು ಸೂಚಿಸಿದರೆ ತಾವು ಸಿದ್ಧ' ಎಂದು ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಅಭಯಚಂದ್ರ ಜೈನ್ ಹೇಳಿದರು. ಏಳು ಅಥವ ಎಂಟು ಸಚಿವರನ್ನು ಬದಲಾವಣೆ ಮಾಡುವ ಸಾಧ್ಯತೆ ಇದೆ' ಎಂದು ಸಚಿವರು ಸೂಚನೆ ಕೊಟ್ಟರು.

'5 ಬಾರಿ ಶಾಸಕನಾಗಿದ್ದೇನೆ'
ಬೆಳ್ತಂಗಡಿ ಕ್ಷೇತ್ರದ ಶಾಸಕ ವಸಂತ ಬಂಗೇರ ಅವರು ಸಚಿವ ಸ್ಥಾನಕ್ಕಾಗಿ ಬೇಡಿಕೆ ಮುಂದಿಟ್ಟಿದ್ದಾರೆ. 'ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಸ್ಪರ್ಧಿಸುವ ಮನಸಿರಲಿಲ್ಲ. ಆದರೆ ಸಿದ್ದರಾಮಯ್ಯ ಅವರು ಸಚಿವ ಸ್ಥಾನ ನೀಡುವ ಭರವಸೆ ನೀಡಿ ಚುನಾವಣೆಗೆ ನಿಲ್ಲಿಸಿದರು. 5 ಬಾರಿ ಶಾಸಕನಾಗಿದ್ದೇನೆ, ನನಗೂ ಸಂಪುಟ ಸೇರಲು ಅವಕಾಶ ನೀಡಬೇಕು' ಎಂದು ಹೇಳಿದರು.

'ವಿವರವನ್ನು ಈಗ ನೀಡಲಾಗದು'
'ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಚರ್ಚಿಸಿದ್ದೇನೆ. ದಿಗ್ವಿಜಯ್ ಸಿಂಗ್ ಅವರು ದೆಹಲಿಯಲ್ಲಿಲ್ಲ. ಶುಕ್ರವಾರ ಸೋನಿಯಾ ಗಾಂಧಿ ಮತ್ತು ಸಿಂಗ್ ಅವರನ್ನು ಭೇಟಿ ಮಾಡುತ್ತೇನೆ. ಈಗ ಎಲ್ಲ ವಿವರ ನೀಡಲು ಸಾಧ್ಯವಿಲ್ಲ' ಎಂದು ಗುರುವಾರ ರಾತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಹೇಳಿಕೆ ನೀಡಿದರು.












Click it and Unblock the Notifications