ಶಾಸಕರ ರಾಜೀನಾಮೆ : ತುರ್ತು ಸಿಎಲ್ಪಿ ಸಭೆ ಕರೆದ ಸಿದ್ದರಾಮಯ್ಯ
ಬೆಂಗಳೂರು, ಜುಲೈ 07 : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜುಲೈ 9ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. 9 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಸಭೆ ಕುತೂಹಲಕ್ಕೆ ಕಾರಣವಾಗಿದೆ.
ಜುಲೈ 9ರ ಮಂಗಳವಾರ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಮತ್ತೊಬ್ಬ ಶಾಸಕ!
ಈಗಾಗಲೇ 9 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ಇನ್ನುಕೆಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿ ಹಬ್ಬಿದೆ. ಈ ಹಿನ್ನಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ಕುತೂಹಲವನ್ನು ಮೂಡಿಸಿದೆ.
ಕಾಂಗ್ರೆಸ್-ಜೆಡಿಎಸ್ ಶಾಸಕರ ರಾಜೀನಾಮೆ : ಯಾರು, ಏನು ಹೇಳಿದರು?
ಜುಲೈ 9ರಂದು ಸ್ಪೀಕರ್ ರಮೇಶ್ ಕುಮಾರ್ ಅವರು ವಿಧಾನಸೌಧದ ಕಚೇರಿಗೆ ಬರಲಿದ್ದು, ಶಾಸಕರ ರಾಜೀನಾಮೆ ಪತ್ರಗಳ ಪರಿಶೀಲನೆ ನಡೆಯಲಿದೆ. ಮಂಗಳವಾರ ರಾಜ್ಯ ರಾಜಕೀಯದ ಬಗ್ಗೆ ಸ್ಪಷ್ಟ ಚಿತ್ರಣ ಲಭ್ಯವಾಗುವ ನಿರೀಕ್ಷೆ ಇದೆ.
ಶಾಸಕರ ರಾಜೀನಾಮೆ : ಸಿದ್ದರಾಮಯ್ಯ ಕಡೆ ನೋಡುವುದೇಕೆ?
ಭಾನುವಾರ ಸಂಜೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಜೆಡಿಎಸ್ ಪಕ್ಷದ ಮುಂದಿನ ನಡೆ ಏನು ಎಂಬುದು ತೀರ್ಮಾನವಾಗಲಿದೆ. ಸರ್ಕಾರ ಉಳಿಸಿಕೊಳ್ಳಲು ಉಭಯ ಪಕ್ಷಗಳು ಯಾವ ತಂತ್ರ ಅನುಸರಿಸಲಿವೆ ಎಂದು ಕಾದು ನೋಡಬೇಕಿದೆ.
ರಾಜೀನಾಮೆ ನೀಡಿರುವ ಶಾಸಕರು : ಇದುವರೆಗೂ 9 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ಇವರಲ್ಲಿ 7 ಜನರು ಮುಂಬೈನಲ್ಲಿದ್ದಾರೆ. ರಾಮಲಿಂಗಾ ರೆಡ್ಡಿ (ಬಿ.ಟಿ.ಎಂ) ಮತ್ತು ಮುನಿರತ್ನ (ರಾಜರಾಜೇಶ್ವರಿ ನಗರ) ಅವರು ಬೆಂಗಳೂರಿನಲ್ಲಿಯೇ ಇದ್ದಾರೆ.
ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ ಕುಟುಟಳ್ಳಿ (ಅಥಣಿ), ಬಿ.ಸಿ.ಪಾಟೀಲ್ (ಹಿರೇಕೆರೂರು), ಶಿವರಾಂ ಹೆಬ್ಬಾರ್ (ಯಲ್ಲಾಪುರ), ಪ್ರತಾಪ್ ಗೌಡ ಪಾಟೀಲ್ (ಮಸ್ಕಿ), ಬೈರತಿ ಬಸವರಾಜ್ (ಕೆ.ಆರ್.ಪುರ), ಎಸ್.ಟಿ.ಸೋಮಶೇಖರ್ (ಯಶವಂತಪುರ), ಆನಂದ್ ಸಿಂಗ್ (ಜುಲೈ 1ರಂದು ರಾಜೀನಾಮೆ, ವಿಜಯನಗರ).