ಸರ್ಕಾರದ ಮೇಲೆ ಒತ್ತಡ ಹೇರಲು ವಿಪಕ್ಷಗಳ ನಿರ್ಧಾರ: ಸಿದ್ದರಾಮಯ್ಯ ಸಭೆ
ಬೆಂಗಳೂರು, ಏಪ್ರಿಲ್ 30: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಪಕ್ಷ ನಾಯಕರು ಹಾಗೂ ಸಂಘಟನೆಗಳ ಸಭೆ ಕರೆದಿದ್ದಾರೆ.
ಕೊರೊನಾ ವೈರಸ್ ತಡೆಯಲು ಹೂಡಿದ ಲಾಕ್ಡೌನ್ನಿಂದ ಸಂಕಷ್ಟದಲ್ಲಿರುವ ರೈತರು ಹಾಗೂ ಕಾರ್ಮಿಕರ ನೆರವಿಗೆ ರಾಜ್ಯ ಸರ್ಕಾರ ಧಾವಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯದ ಎಲ್ಲಾ ಪ್ರತಿಪಕ್ಷಗಳು ಹಾಗೂ ಸಂಘಟನೆಗಳನ್ನು ಒಂದೇ ವೇದಿಕೆಯಡಿ ತರುವ ಪ್ರಯತ್ನಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಸಭೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಜೊತೆಗೆ ಪಕ್ಷದ ಮೂವರು ಕಾರ್ಯಧ್ಯಕ್ಷರು, ಜೆಡಿಎಸ್ ನಾಯಕರಾದ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ, ಎಚ್ ರೇವಣ್ಣ, ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ, ಪಕ್ಷೇತರ ಶಾಸಕರಾದ ಎನ್ ಮಹೇಶ್, ಶರತ್ ಬಚ್ಚೇಗೌಡ, ಸಿಪಿಐ ಮತ್ತು ಸಿಪಿಐಎಂ ಪಕ್ಷಗಳ ವಿವಿಧ ನಾಯಕರು ಹಾಗೂ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಸೇರಿದಂತೆ ವಿವಿಧ ರೈತ ಸಂಘಟನೆಗಳ ಮುಖಂಡರಿಗೆ ಸಭೆಗೆ ಆಹ್ವಾನಿಸಲಾಗಿದೆ.

ಈ ಸಭೆಯ ಮೂಲಕ ಎಲ್ಲಾ ಪ್ರತಿಪಕ್ಷಗಳು ಹಾಗೂ ರೈತರ ನೆರವಿಗೆ ಸರ್ಕಾರದಿಂದ ಯಾವೆಲ್ಲಾ ತುರ್ತು ಪರಿಹಾರ ಕಾರ್ಯಗಳಾಗಬೇಕಿದೆ ಎಂದು ಸಲಹೆ, ಮಾಹಿತಿಗಳನ್ನು ಪಡೆದು ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಕಾಂಗ್ರೆಸ್, ಜೆಡಿಎಸ್, ಸಿಪಿಐ, ಸಿಪಿಐ(ಎಂ) ಸೇರಿದಂತೆ ವಿವಿಧ ಪಕ್ಷಗಳ ಪ್ರಮುಖ ನಾಯಕರು ಹಾಗೂ ರಾಜ್ಯ ರೈತರ ಸಂಘಟನೆಗಳ ಮುಖಂಡರ ಸಭೆ ಕರೆಯಲಾಗಿದೆ.












Click it and Unblock the Notifications